

ಬೆಂಗಳೂರು: ಸೋಮವಾರ ನಗರದಲ್ಲಿ ಸುರಿದ ಭಾರೀ ಮಳೆಗೆ ಎರಡು ಪ್ರತ್ಯೇಕ ಘಟನೆಗಳಲ್ಲಿ 12 ವರ್ಷದ ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಭಾನುವಾರ ರಾತ್ರಿ ಸುರಿದ ಭಾರೀ ಮಳೆಯ ನಂತರ ಸೋಮವಾರ ಬೆಳಿಗ್ಗೆ 7.30 ರ ಸುಮಾರಿಗೆ ಖಾಸಗಿ ಕಂಪನಿಯ ಕಾಂಪೌಂಡ್ ಗೋಡೆ ಕುಸಿದು 35 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯನ್ನು ಯಾದಗಿರಿ ಮೂಲದ ಶಶಿಕಲಾ ಎಂದು ಗುರ್ತಿಸಲಾಗಿದೆ. ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಕಂಪನಿಯಲ್ಲಿ ಮನೆಗೆಲಸದ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುತ್ತಿದ್ದಾಗ ಗೋಡೆ ಕುಸಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮತ್ತೊಂದು ಘಟನೆಯಲ್ಲಿ, ಸೋಮವಾರ ಸಂಜೆ 6.15 ರ ಸುಮಾರಿಗೆ ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಎನ್ಎಸ್ ಪಾಳ್ಯದಲ್ಲಿ ನಡೆದಿದೆ.
ಬಿಟಿಎಂ ಲೇಔಟ್ ಎರಡನೇ ಹಂತದ ಮಧುವನ್ ಅಪಾರ್ಟ್ಮೆಂಟ್ನ ನೆಲಮಾಳಿಗೆಯಲ್ಲಿ ತುಂಬಿದ್ದ ನೀರನ್ನು ತೆರವುಗೊಳಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿದ್ದಾರೆ.
ಮೃತರನ್ನು ಮನಮೋಹನ್ ಕಾಮತ್ (63) ಹಾಗೂ ದಿನೇಶ್ (12) ಎಂದು ಗುರ್ತಿಸಲಾಗಿದೆ. ಸೋಮವಾರ ಸಂಜೆ ಸುರಿದ ಭಾರೀ ಮಳೆಯ ನಂತರ, ಅಪಾರ್ಟ್ಮೆಂಟ್ನ ನೆಲಮಾಳಿಗೆಯಲ್ಲಿ ನೀರು ತುಂಬಿತ್ತು. ಕಾಮತ್ ಅವರು, ಮೋಟಾರ್ ಬಳಸಿ ನೀರನ್ನು ಹೊರಹಾಕಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್ನಿಂದಾಗಿ, ಇಬ್ಬರೂ ಸಾವನ್ನಪ್ಪಿದ್ದಾರೆಂದು ಪೊಲೀಸರು ಹೇಳಿದ್ದಾರೆ.
Advertisement