ಎಂಜಿನಿಯರ್‌ಗಳ ವರ್ಗಾವಣೆ ಸಂಬಂಧ CM-DCM ಮಧ್ಯೆ ಸಂರ್ಘರ್ಷ: ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಕೆರಳಿದ ಡಿಕೆಶಿ; ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ! Video

ಜಲಸಂಪನ್ಮೂಲ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆಯಾಗಿದ್ದಕ್ಕೆ ಸಿಟ್ಟಾದ ಡಿಕೆಶಿ ಮೇ 13 ರಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
Dk Shivakumar And Siddaramaiah
ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ
Updated on

ಬೆಂಗಳೂರು: ಸಿಎಂ ಸಿದ್ದರಾಮಯ್ಯ ತನ್ನ ಇಲಾಖೆಯ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಿರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಸಿಟ್ಟಾಗಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಜಲಸಂಪನ್ಮೂಲ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆಯಾಗಿದ್ದಕ್ಕೆ ಸಿಟ್ಟಾದ ಡಿಕೆಶಿ ಮೇ 13 ರಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಐವರು ಎಂಜಿನಿಯರ್‌ಗಳ ವರ್ಗಾವಣೆಯನ್ನು ಹಿಂದಕ್ಕೆ ಪಡೆಯಿರಿ ಎಂದು ಆಗ್ರಹಿಸಿದ್ದಾರೆ.

ತಮ್ಮ ಅನುಮತಿ ಇಲ್ಲದೆ ಲೋಕೋಪಯೋಗಿ ಇಲಾಖೆಯಿಂದ ಜಲಸಂಪನ್ಮೂಲ ಇಲಾಖೆಗೆ ಮುಖ್ಯ ಎಂಜಿನಿಯರ್‌ಗಳನ್ನು (ಸಿಇ) ವರ್ಗಾವಣೆ ಮಾಡಿ, ಸ್ಥಳ ನಿಯುಕ್ತಿ ಅಧಿಸೂಚನೆ ಹೊರಡಿಸಿರುವ ಆದೇಶವನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದೇನೆ.

ಡಿ.ಕೆ ಶಿವಕುಮಾರ್, ಉಪ ಮುಖ್ಯಮಂತ್ರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಅಧೀನದಲ್ಲಿ ಡಿಪಿಎಆರ್ ಕಾರ್ಯನಿರ್ವಹಿಸುತ್ತಿದೆ. ಮುಖ್ಯ ಎಂಜಿನಿಯರ್‌ಗಳ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿಗೆ ಸಂಬಂಧಿಸಿದ ಕಡತವನ್ನು ಮುಖ್ಯಮಂತ್ರಿಗೆ ಡಿಪಿಎಆರ್ ಕಳುಹಿಸಿತ್ತು. ಮುಖ್ಯಮಂತ್ರಿ ಅನುಮೋದನೆ ನೀಡಿದ ಬಳಿಕ ಐವರು ಮುಖ್ಯ ಎಂಜಿನಿಯರ್‌ಗಳನ್ನು ಮೇ 9ರಂದು ವರ್ಗಾವಣೆ ಮಾಡಲಾಗಿತ್ತು.

ನನ್ನ ಇಲಾಖೆಗೆ ಸಂಬಂಧಿಸಿದಂತೆ ವರ್ಗಾವಣೆ, ನೇಮಕಾತಿ ಮುಂತಾದ ವಿಚಾರಗಳ ಬಗ್ಗೆ ಆದೇಶ ಹೊರಡಿಸುವ ಮೊದಲು ನನ್ನ ಪೂರ್ವಾನುಮತಿ ಪಡೆಯಲೇಬೇಕು ಎಂದು ಸರ್ಕಾರ ಅಸ್ತಿತ್ವಕ್ಕೆ ಬಂದ ಆರಂಭದಲ್ಲಿಯೇ ಟಿಪ್ಪಣಿಯ ಮೂಲಕ ಮುಖ್ಯ ಕಾರ್ಯದರ್ಶಿಗೆ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದರು. ಆ ಸೂಚನೆಯನ್ನು ಉಲ್ಲಂಘಿಸಿ ಈ ಆದೇಶ ಹೊರಡಿಸಿರುವುದು ಶಿವಕುಮಾರ್‌ ಅವರನ್ನು ಕೆರಳಿಸಿದೆ ಎನ್ನಲಾಗಿದೆ.

ಹಲವು ತಿಂಗಳುಗಳಿಂದ ಹುದ್ದೆ ನಿರೀಕ್ಷೆಯಲ್ಲಿದ್ದ ಲೋಕೋಪಯೋಗಿ ಇಲಾಖೆಯಲ್ಲಿ ಕರ್ತವ್ಯಕ್ಕೆ ಸೇರಿದ ಐವರು ಮುಖ್ಯ ಎಂಜಿನಿಯರ್‌ ವೃಂದದ ಅಧಿಕಾರಿಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಖಾಲಿ ಇದ್ದ ಹುದ್ದೆಗಳಿಗೆ ವರ್ಗಾವಣೆ ಮಾಡಿ ಮೇ 9ರಂದು ಡಿಪಿಎಆರ್‌ ಅಧಿಸೂಚನೆ ಹೊರಡಿಸಿತ್ತು. ಸ್ಥಳ ನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು, ಪ್ರಭಾರ ವರ್ಗಾವಣೆ ಪ್ರಮಾಣ ಪತ್ರವನ್ನು (ಸಿಟಿಸಿ) ಸಲ್ಲಿಸಬೇಕು ಎಂದೂ ಡಿಪಿಎಆರ್‌ ನಿರ್ದೇಶನ ನೀಡಿತ್ತು. ಅದರ ಅನ್ವಯ ಎಲ್ಲ ಐವರು ಎಂಜಿನಿಯರ್‌ಗಳು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದರು.

ಅಂತರ ರಾಜ್ಯ ಜಲವಿವಾದ, ನೀರಾವರಿ ಯೋಜನೆಗಳ ವಲಯ, ಎತ್ತಿನಹೊಳೆ ಯೋಜನಾ ವಲಯ, ಕಾಡಾ ನೀರಾವರಿ ಯೋಜನೆಗಳ ವಲಯ ಮತ್ತು ಕರ್ನಾಟಕ ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಮುಖ್ಯ ಎಂಜಿನಿಯರ್‌ ಹುದ್ದೆಗಳಿಗೆ ಈ ಐವರನ್ನು ಸ್ಥಳ ನಿಯುಕ್ತಿಗೊಳಿಸಲಾಗಿತ್ತು.

ಡಿಸಿಎಂ ಪತ್ರ
ಡಿಸಿಎಂ ಪತ್ರ
  • ಎಚ್.ಸಿ.ರಮೇಂದ್ರ, ಅಂತರರಾಜ್ಯ ಜಲ ವಿವಾದ, ಬೆಂಗಳೂರು

  • ವಿನಾಯಕ ಜಿ.ಸುಗೂರ, ನೀರಾವರಿ ಯೋಜನೆಗಳ ವಲಯ, ಕರ್ನಾಟಕ ನೀರಾವರಿ ನಿಗಮ, ತುಮಕೂರು

  • ಜೆ.ಇ. ಯತೀಶ್ ಚಂದ್ರನ್, ಎತ್ತಿನಹೊಳೆ ಯೋಜನಾ ವಲಯ, ಕರ್ನಾಟಕ ನೀರಾವರಿ ನಿಗಮ, ತುಮಕೂರು

  • ಶಿವಾನಂದ ಆ‌ರ್.ನಾಯಕ್, ಆಡಳಿತಾಧಿಕಾರಿ, ಕಾಡಾ ನೀರಾವರಿ ಯೋಜನೆಗಳ ವಲಯ, ಕಲಬುರಗಿ

  • ಪಿ.ಬಿ.ಪ್ರಕಾಶ್, ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ, ಬೆಂಗಳೂರು

ಇವರುಗಳನ್ನು ವರ್ಗಾವಣೆ ಮಾಡಲಾಗಿತ್ತು. ತನ್ನ ಅಧೀನದಲ್ಲಿರುವ ಇಲಾಖೆಯಲ್ಲಿ ಖಾಲಿ ಇರುವ ಈ ಕೆಲವು ವಿಭಾಗಗಳ ‘ಮುಖ್ಯಸ್ಥ’ರ ಹುದ್ದೆಗಳಿಗೆ ಸ್ಥಳ ನಿಯುಕ್ತಿಗೊಳಿಸುವ ಸಂದರ್ಭದಲ್ಲಿ ಗಮನಕ್ಕೆ ತಾರದ ಡಿಪಿಎಆರ್‌ನ ಕ್ರಮಕ್ಕೆ ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಡಿ.ಕೆ ಶಿವಕುಮಾರ್, ನಮ್ಮ ಇಲಾಖೆಯಿಂದ ಪ್ರಮೋಷನ್ ತೆಗೆದುಕೊಂಡು ಬೇರೆ ಇಲಾಖೆಗಳಿಗೆ ಹೋಗುತ್ತಾರೆ, ನಮ್ಮಇಲಾಖೆಯಲ್ಲಿ ಇಂಜಿನೀಯರ್ ಗಳ ಕೊರತೆಯಿದೆ ಹೀಗಾಗಿ ಅವರುಗಳನ್ನು ರಿಲೀವ್ ಮಾಡದಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವುದಾಗಿ ಡಿಸಿಎಂ ತಿಳಿಸಿದ್ದಾರೆ.

Dk Shivakumar And Siddaramaiah
HAL ನಮ್ಮ ಹೆಮ್ಮೆ, ಸ್ಥಳಾಂತರಿಸಲು ಬಿಡಲ್ಲ: ಡಿ.ಕೆ ಶಿವಕುಮಾರ್

ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ

ಇನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಹಲವು ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, "ಇವು ಕೇವಲ ಸೂಚನೆಗಳು ಮಾತ್ರ. ಖಂಡಿತವಾಗಿಯೂ, ರಾಜ್ಯ ರಾಜಕೀಯದಲ್ಲಿ ಪ್ರಮುಖ ಬದಲಾವಣೆಗಳು ಶೀಘ್ರದಲ್ಲೇ ನಡೆಯಲಿದೆ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಳಿಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಎಂಎಲ್‌ಸಿ ಬಿ ಕೆ ಹರಿಪ್ರಸಾದ್ ಅವರ ನಿವಾಸಕ್ಕೆ ನೀಡಿದ ಭೇಟಿಯನ್ನು ರಾಜ್ಯದಲ್ಲಿನ "ಬದಲಾಗುತ್ತಿರುವ ರಾಜಕೀಯ ಸಮೀಕರಣ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com