
ತುಮಕೂರು: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿ ಹೋರಾಟ ತೀವ್ರಗೊಂಡಿದ್ದು ಹೆದ್ದಾರಿ ರಸ್ತೆ ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ನಿಟ್ಟೂರು ಬಳಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಹೇಮಾವತಿ ಲಿಂಕ್ ಕೆನಾಲ್ ಮೂಲಕ ನೀರು ತೆಗೆದುಕೊಂಡು ಮಾಗಡಿ, ರಾಮನಗರಕ್ಕೆ ಹೋದರೆ ತುಮಕೂರು ಜನರಿಗೆ ಅನ್ಯಾಯವಾಗಲಿದೆ. ಸರ್ಕಾರ ಯಾವುದೇ ಮುಂದಾಲೋಚನೆ ಇಲ್ಲದೆ ಯೋಜನೆ ಜಾರಿಗೊಳಿಸಿದೆ. ಇದೊಂದು ಅವೈಜ್ಞಾನಿಕ ಕಾಮಗಾರಿ. ಕೂಡಲೇ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಅಲ್ಲದೆ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಹೋರಾಟ ಸಮಿತಿ ಇಂದು ಬೃಹತ್ ಹೋರಾಟಕ್ಕೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಗುಬ್ಬಿ ತಹಶೀಲ್ದಾರ್ ಬಿ.ಆರತಿ ಅವರು ಮೇ 31ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 1ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಇನ್ನು ಪ್ರತಿಭಟನಾಕಾರರು ಕಾಮಗಾರಿ ಸ್ಥಳಕ್ಕೆ ತೆರಳದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಆದರೆ ನಿಷೇಧಾಜ್ಞೆ ದಿಕ್ಕರಿಸಿ ರೈತರು, ಮುಖಂಡರು ಹೋರಾಟ ತೀವ್ರಗೊಳಿಸಿದ್ದಾರೆ. ಶಾಸಕರಾದ ಬಿ. ಸುರೇಶ್ಗೌಡ, ಜಿ.ಬಿ ಜ್ಯೋತಿಗಣೇಶ್, ವಿವಿಧ ಮಠಗಳ ಸ್ವಾಮೀಜಿಗಳು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಅಲ್ಲದೆ ಹೆದ್ದಾರಿ ರಸ್ತೆ ತಡೆದು, ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
Advertisement