
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಲಭ್ಯವಾಗಿಸುವ ಉದ್ದೇಶದಿಂದ ರಾಜ್ಯದ 49 ತಾಲೂಕು ಕೇಂದ್ರಗಳು ಹಾಗೂ ಹಲವು ಜಿಲ್ಲಾ ಕೇಂದ್ರಗಳಲ್ಲಿ ನೂತನ ಪ್ರಜಾಸೌಧವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು.
ಕಲಬುರಗಿ ಜಿಲ್ಲೆಯ ಕಾಳಗಿ, ಯಡ್ರಾಮಿ, ಕಮಲಾಪುರ, ಶಹಾಬಾದ್ ತಾಲ್ಲೂಕು ಆಡಳಿತಗಳಿಗೆ ಸುಸಜ್ಜಿತ ಹಾಗೂ ಸುವ್ಯವಸ್ಥಿತವಾದ ಪ್ರಜಾಸೌಧ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರಿಗೆ ಹಸ್ತಾಂತರಿಸಿದರು.
ಜಿಲ್ಲೆಯ ತಾಲ್ಲೂಕು ಆಡಳಿತಗಳ ಅನುಕೂಲಕ್ಕೆ ಮಹತ್ವದ ಪ್ರಜಾಸೌಧ ಕಟ್ಟಡಗಳನ್ನು ಒದಗಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಒಂದೇ ಸೂರಿನ ಅಡಿಯಲ್ಲಿ ಎಲ್ಲ ಸರ್ಕಾರಿ ಸೇವೆಗಳನ್ನು ಒದಗಿಸುವಂತಹ ಸುಸಜ್ಜಿತ ಕಟ್ಟಡಗಳು ದೊರಕಿದಾಗ ಜನತೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ ಮುಂತಾದವರು ಉಪಸ್ಥಿತರಿದ್ದರು.
ನೂತನ ತಾಲ್ಲೂಕುಗಳ ಘೋಷಣೆಯಿಂದಾಗಿ ತಾಲ್ಲೂಕು ಮಟ್ಟದ ಕಚೇರಿಗಳು ಕಾರ್ಯನಿರ್ವಹಿಸಲು ಕಾಳಗಿ, ಯಡ್ರಾಮಿ, ಕಮಲಾಪುರ, ಶಹಾಬಾದ್ಗಳಲ್ಲಿ ಸಾಕಷ್ಟು ಸಮಸ್ಯೆ ಆಗಿತ್ತು. ಹೀಗಾಗಿ ಮಂಜೂರಾತಿಯಿಂದಾಗಿ ಪ್ರಜಾಸೌಧಗಳು ಸರ್ಕಾರಿ ಕಚೇರಿಗಳ ಸಮಸ್ಯೆಗಳು ನಿವಾರಣೆಯಾಗಲಿದೆ.
Advertisement