

ಕೋಲಾರ: ಪತ್ನಿ ಬೇರೊಬ್ಬ ವ್ಯಕ್ತಿಯೊಂದಿಗೆ ಓಡಿಹೋದ ಕಾರಣದಿಂದ ನೊಂದ 37 ವರ್ಷದ ವ್ಯಕ್ತಿಯೊಬ್ಬ ತನ್ನ ನಾಲ್ಕು ವರ್ಷದ ಮಗಳನ್ನು ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಸಂತ್ರಸ್ತನ್ನು ಲೋಕೇಶ್ ಎಂದು ಗುರುತಿಸಲಾಗಿದ್ದು, ಆತನ ಪತ್ನಿಯು ಮನೆಯಿಂದ ಹೊರಡುವ ಮುನ್ನ ಬರೆದಿರುವ ಪತ್ರದಲ್ಲಿ, ಆತನೊಂದಿಗೆ ಇರಲು ಇಷ್ಟವಿಲ್ಲ ಮತ್ತು ವಿಚ್ಛೇದನ ನೀಡಲು ಬಯಸುತ್ತೇನೆ. ತನ್ನನ್ನು ಹುಡುಕಬೇಡಿ ಎಂದು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮಂಗಳವಾರ ಲೋಕೇಶ್ ತನ್ನ ಪತ್ನಿ ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದರು. ನಂತರ, ಅವರು ತಮ್ಮ ಮಗಳು ನಿಹಾರಿಕಾ ಜೊತೆ ಕಾರಿನಲ್ಲಿ ಮನೆಯಿಂದ ಹೊರಟರು.
ದಂಪತಿ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು.
ಮಗಳನ್ನು ಬೇಕರಿಗೆ ಕರೆದೊಯ್ದು, ಆಕೆಗೆ ಇಷ್ಟವಾದ ವಸ್ತುಗಳನ್ನು ತಿನ್ನಿಸಿದ್ದಾರೆ. ನಂತರ, ಕಾರಿನೊಳಗೆ ಆಕೆಯ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬುಧವಾರ, ನಿಹಾರಿಕಾ ಅವರ ಮೃತದೇಹ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಪತ್ತೆಯಾಗಿದ್ದು, ಲೋಕೇಶ್ ಅವರ ಮೃತದೇಹ ಹತ್ತಿರದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅವರು ಹೇಳಿದರು.
ಪ್ರಾಥಮಿಕ ತನಿಖೆಯಲ್ಲಿ, ಮೃತರ ಪತ್ನಿ ಇನ್ನೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದರು ಮತ್ತು ಅವರಿಗೆ ವಿಚ್ಛೇದನ ನೀಡಲು ಬಯಸಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಲೋಕೇಶ್ ಅವರ ತಂದೆ ನೀಡಿರುವ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 108ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣವನ್ನು ದಾಖಲಿಸಲಾಗಿದೆ. ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಮರಣೋತ್ತರ ಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement