

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳನ್ನು ಪಟ್ಟಿ ಮಾಡಿ, ಆಸ್ತಿ ತೆರಿಗೆ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಸೂಚನೆ ನೀಡಿದ್ದಾರೆ.
ಜಿಬಿಎ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ, ಇ-ಖಾತಾ, ಬಿ ಖಾತಾಯಿಂದ ಎ-ಖಾತಾಗೆ ಪರಿವರ್ತನೆ ಮಾಡುವ ಕುರಿತು ಸೋಮವಾರ (ನವೆಂಬರ್ 24) ನಡೆದ ವರ್ಚ್ಯುವಲ್ ಸಭೆಯಲ್ಲಿ ಮಹೇಶ್ವರ್ ರಾವ್ ಅವರು ಈ ಸೂಚನೆ ನೀಡಿದ್ದಾರೆ.
ಆಯಾ ನಗರ ಪಾಲಿಕೆಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು, ಆಸ್ತಿ ತೆರಿಗೆ ಪರಿಷ್ಕರಣೆ ಪ್ರಕರಣಗಳನ್ನು ಪತ್ತೆ ಹಚ್ಚಿ ಅದರಿಂದ ಬಾಕಿ ಬರಬೇಕಿರುವ ಆಸ್ತಿ ತೆರಿಗೆಯನ್ನು ವಸೂಲಿ ಮಾಡುವಂತೆ ಸೂಚನೆ ನೀಡಿದರು.
ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದವರನ್ನು ಹುಡುಕಿ, ಅವರನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರುವ ಕೆಲಸ ಮಾಡಬೇಕು. ಆಯಾ ನಗರ ಪಾಲಿಕೆಗಳ ಆಯುಕ್ತರುಗಳು ಆಸ್ತಿ ತೆರಿಗೆ ಸಂಗ್ರಹಿಸುವ ಸಲುವಾಗಿ ಹೆಚ್ಚು ಗಮನ ನೀಡಬೇಕು. ಈ ಸಂಬಂಧ ಪ್ರತಿನಿತ್ಯ ಕಂದಾಯ ಅಧಿಕಾರಿಗಳ ಜೊತೆ ಪರಿಶೀಲನೆ ಸಭೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಿ, ಹೆಚ್ಚು ಆಸ್ತಿ ತೆರಿಗೆ ಸಂಗ್ರಹಿಸಲು ಕ್ರಮವಹಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಶೇಷ ಆಯುಕ್ತ (ಕಂದಾಯ) ಮುನೀಶ್ ಮೌದ್ಗಿಲ್ ಅವರು, ಐದು ನಗರ ಪಾಲಿಕೆಗಳಿಗೆ 6,700 ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ನೀಡಲಾಗಿದೆ, ಅದರಲ್ಲಿ ಇಲ್ಲಿಯವರೆಗೆ 3,533 ಕೋಟಿ ರೂ. ಸಂಗ್ರಹಿಸಲಾಗಿದೆ ಎಂದು ಹೇಳಿದರು.
ಬೆಂಗಳೂರಿನ 5 ನಗರ ಪಾಲಿಕೆಗಳಲ್ಲಿ 24 ಸಾವಿರ ಆಸ್ತಿಗಳ ಆಸ್ತಿತೆರಿಗೆ ಪರಿಷ್ಕರಣೆ ಪ್ರಕರಣಗಳಿದ್ದು, ಅದರಿಂದ ಸುಮಾರು 170 ಕೋಟಿ ರೂ. ಸಂಗ್ರಹಿಬೇಕಿದೆ. ಅಲ್ಲದೆ ಸುಮಾರು 22 ಸಾವಿರ ಸುಸ್ತಿದಾರರಿಂದ 598 ಕೋಟಿ ರೂ. ಬರಬೇಕಿದ್ದು, ಅದರ ಮೇಲೆ ಹೆಚ್ಚು ಗಮನ ನೀಡಿ ಸಂಗ್ರಹಿಸಲು ಸೂಚನೆ ನೀಡಿದರು.
ಬೆಂಗಳೂರಿನ ಆಯಾ ನಗರ ಪಾಲಿಕೆಗಳಲ್ಲಿ ವಿಭಾಗವಾರು 100 ಪರಿಷ್ಕರಣೆ ಪ್ರಕರಣಗಳು, 100 ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರನ್ನು ಪಟ್ಟಿ ಮಾಡುವುದಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ಕಂದಾಯ ಪರಿವೀಕ್ಷಕರು/ಕಂದಾಯ ವಸೂಲಿಗಾರರಿಗೆ ನಿಗದಿತ ಗುರಿ ನೀಡಿ ವಾಣಿಜ್ಯ ಸ್ವತ್ತುಗಳನ್ನು ಸೀಲ್ ಮಾಡಿ ಬಾಕಿ ಆಸ್ತಿ ತೆರಿಗೆಯನ್ನು ವಸೂಲಿ ಮಾಡಬೇಕೆಂದು ಆಯುಕ್ತರು ಸೂಚನೆ ಕೊಟ್ಟರು.
Advertisement