
ಬೆಳಗಾವಿ: ವಾಲ್ಮೀಕಿ ಸಮುದಾಯದ ಮಠಾಧೀಶ ಪ್ರಸನ್ನಾನಂದಜಿ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಂಪುಟದಲ್ಲಿ ಖಾಲಿ ಇರುವ ಎರಡು ಹುದ್ದೆಗಳನ್ನು ವಾಲ್ಮೀಕಿ ಸಮುದಾಯದ ಪ್ರತಿನಿಧಿಗಳಿಗೆ ನೀಡುವಂತೆ ಮನವಿ ಮಾಡುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಜಾರಕಿಹೊಳಿ, ಈ ಹಿಂದೆಯೂ ಇದೇ ರೀತಿಯ ವಿನಂತಿಯನ್ನು ಮಾಡಿದ್ದೆವು. ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿರುವ ವಾಲ್ಮೀಕಿ ಜಯಂತಿ ಆಚರಣೆಯ ಸಂದರ್ಭದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯನ್ನು ಭೇಟಿ ಮಾಡುವುದಾಗಿ ಮನವಿ ಮಾಡುವುದಾಗಿ ತಿಳಿಸಿದರು.
ನಾವು ಕೆಪಿಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಂದೆಯೂ ಈ ವಿನಂತಿಯನ್ನು ಮಂಡಿಸುತ್ತೇವೆ" ಎಂದು ಅವರು ಹೇಳಿದರು.
ಕಿತ್ತೂರು ಕರ್ನಾಟಕ ಭಾಗಕ್ಕೂ ಅನುದಾನ ನೀಡುವುದು ಅಗತ್ಯವಿದ್ದು, ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಅನುದಾನ ನೀಡಿದ ಮಾದರಿಯಲ್ಲಿ ನಮಗೂ ನೀಡಲು ಮನವಿ ಮಾಡಿದ್ದೇವೆ. ಇದಕ್ಕಾಗಿ ಕಿತ್ತೂರು ಕರ್ನಾಟಕದ 34 ಶಾಸಕ, ಸಚಿವರು ಸೇರಿ ಮುಖ್ಯಮಂತ್ರಿ ಬಳಿ ನಿಯೋಗ ಕೊಂಡೊಯ್ದು ಒತ್ತಾಯಿಸಲಾಗುವುದು ಎಂದರು.
ಕಿತ್ತೂರ ಕರ್ನಾಟಕ ಭಾಗವು ಬಹಳಷ್ಟು ಹಿಂದುಳಿದ ಪ್ರದೇಶವಾಗಿದೆ. ಇಲ್ಲಿಯೂ ಅಭಿವೃದ್ಧಿಗೆ ಹಣಕಾಸಿನ ಅಗತ್ಯವಿದೆ. ಹಾಗಾಗಿ ಎಲ್ಲ ಜನಪ್ರತಿನಿಧಿಗಳು ಕುಳಿತು ಚರ್ಚಿಸಿ ಮುಂದಿನ ಹೆಜ್ಜೆ ಇಡುತ್ತೇವೆ ಎಂದರು.
ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವುದು ನಮ್ಮ ಕೈಯಲ್ಲಿ ಇಲ್ಲ. ಆಕಾಂಕ್ಷಿಗಳು ಹೆಚ್ಚಿದ್ದಾರೆ. ಸಹಜವಾಗಿ ಪೈಪೋಟಿ ಇರುತ್ತದೆ. ಅದನ್ನೆಲ್ಲ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದ ಸತೀಶ್ ಜಾರಕಿಹೊಳಿ, ನವೆಂಬರ್ ಕ್ರಾಂತಿಯ ಬಗ್ಗೆ ನನಗೆ ಗೊತ್ತಿಲ್ಲ ಎಂದರು.
ಜಾತಿ ಜನಗಣತಿಯ 60 ಪ್ರಶ್ನಾವಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸುಸ್ತಾಗಿ ಸರಳೀಕರಣ ಮಾಡಲು ಹೇಳಿರುವುದಕ್ಕೆ ನನ್ನದೂ ಸಹಮತ ಇದೆ. ಪ್ರಶ್ನೆಗಳನ್ನು ಕಡಿಮೆ ಮಾಡಬೇಕು. ಅಲ್ಲದೆ ಜನರು ತಮಗೆ ಇಷ್ಟ ಇರುವ ಪ್ರಶ್ನೆಗೆ ಮಾತ್ರ ಉತ್ತರಿಸಬಹುದಾಗಿದೆ. ಪ್ರಶ್ನಾವಳಿ ತಯಾರಿಸಿದ್ದು ಆಯೋಗದವರು. ಅದು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತದೆ. ಅವರು ಸರಕಾರಕ್ಕೆ ಎಲ್ಲವನ್ನೂ ತಿಳಿಸಬೇಕೆಂದಿಲ್ಲ ಎಂದು ಜಾರಕಿಹೊಳಿ ಹೇಳಿದರು.
Advertisement