ರಾಜ್ಯ ಸರ್ಕಾರ ಡಿ. 1ರೊಳಗೆ 33,000 ಕೋಟಿ ರೂಪಾಯಿ ಬಾಕಿ ಮೊತ್ತವನ್ನು ಪಾವತಿಸಲು ರಾಜ್ಯ ಗುತ್ತಿಗೆದಾರರ ಸಂಘ ಗಡುವು ನೀಡಿದ್ದು ಎಲ್ಲಾ ಕಾಮಗಾರಿಗಳನ್ನು ನಿಲ್ಲಿಸುವುದಾಗಿ ಸಂಘ ಶುಕ್ರವಾರ ಬೆದರಿಕೆ ಹಾಕಿದೆ. ನಾವು ಎರಡೂವರೆ ವರ್ಷದಿಂದ ಕಾಯುತ್ತಿದ್ದೇವೆ. ಇನ್ನೂ 44 ದಿನ ಕಾಯುತ್ತೇವೆ. ಅಷ್ಟರಲ್ಲಿ ಬಾಕಿ ಮೊತ್ತ ಪಾವತಿಯಾಗಬೇಕು. ಇಲ್ಲದಿದ್ದರೆ ನಾವು ಕಾಮಗಾರಿ ಸ್ಥಗಿತಗೊಳಿಸುವುದು ಮಾತ್ರವಲ್ಲದೇ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಮಧ್ಯಸ್ಥಿಕೆಗೆ ಮನವಿ ಮಾಡುತ್ತೇವೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ. ಹಣ ಬಿಡುಗಡೆ ವಿಚಾರದಲ್ಲಿ ಕಮಿಷನ್ ದುಪ್ಪಟ್ಟಾಗಿದೆ ಎಂದು ಪತ್ರದಲ್ಲಿ ಹೇಳಿದ್ದೇನೆ. ಆದರೆ ಶೇ. 40, ಶೇ. 60, ಶೇ. 80 ಅಂತಾ ಹೇಳಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಲಂಚವಿಲ್ಲ ಎಂದು ನಾನು ಹೇಳುತ್ತಿಲ್ಲ. ಎಲ್ಲಾ ವಿಚಾರಗಳನ್ನು ಡಿಸೆಂಬರ್ ನಲ್ಲಿ ಬಹಿರಂಗಪಡಿಸುತ್ತೇವೆ ಎಂದು ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ SIT ಇಂದು ಆಳಂದ ಮಾಜಿ ಶಾಸಕ ಮತ್ತು ಬಿಜೆಪಿ ನಾಯಕ ಸುಭಾಷ್ ಗುತ್ತೇದಾರ್ ನಿವಾಸದ ಮೇಲೆ ದಾಳಿ ನಡೆಸಿದೆ. ಉಪಪೊಲೀಸ್ ಅಧಿಕಾರಿ ಅಲ್ಸಾನ್ ಬಾಷಾ ನೇತೃತ್ವದ SIT ತಂಡ ಕಲಬುರ್ಗಿಯ ಗುಬ್ಬಿ ಕಾಲೋನಿಯಲ್ಲಿರುವ ಗುತ್ತೇದಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸಿನ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಚಾರ್ಟರ್ಡ್ ಅಕೌಂಟೆಂಟ್ ಮಲ್ಲಿಕಾರ್ಜುನ ಮಹಾಂತಗೋಳ್ ಅವರ ನಿವಾಸದ ಮೇಲೂ ಎಸ್ಐಟಿ ದಾಳಿ ನಡೆಸಿದೆ. ನಿನ್ನೆಯಷ್ಟೇ ಎಸ್ಐಟಿ ಅಧಿಕಾರಿಗಳು ಕಲಬುರಗಿಯಲ್ಲಿ ಅಕ್ರಂ ಎಂಬಾತನ ಮನೆ ಮೇಲೆ ದಾಳಿ ಮಾಡಿತ್ತು. ಈ ವೇಳೆ ರಾಶಿ ರಾಶಿ ವೋಟರ್ ಐಡಿಗಳು ಪತ್ತೆ ಆಗಿದ್ದವು. ಈ ವಾರದ ಆರಂಭದಲ್ಲಿ, ಮತದಾರರ ಪಟ್ಟಿಯಿಂದ ನಿಜವಾದ ಮತದಾರರನ್ನು ಅಳಿಸಲು ನಕಲಿ ಫಾರ್ಮ್ 7 ಅರ್ಜಿಗಳನ್ನು ಸೃಷ್ಟಿಸಿದ್ದಾರೆ ಎಂದು ಹೇಳಲಾದ ನಾಲ್ವರು ಶಂಕಿತರ ನಿವಾಸಗಳ ಮೇಲೆ ದಾಳಿ ನಡೆಸಿತ್ತು.
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ, ಸುಧಾಮೂರ್ತಿ ದಂಪತಿ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಕ್ಕೆ ನಿರಾಕರಿಸಿದ್ದು ಭಾರೀ ಸುದ್ದಿಯಾಗಿತ್ತು. ಕಾಂಗ್ರೆಸ್ ನ ಹಲವು ನಾಯಕರು ದಂಪತಿಯ ನಿರ್ಧಾರವನ್ನು ವಿರೋಧಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ಫೋಸಿಸ್ ನವರೇನು ಬೃಹಸ್ಪತಿಗಳಾ, ನಾವು ನಡೆಸುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ, ಅವರಿಗೆ ಅದು ಅರ್ಥವಾಗದಿದ್ದರೆ ನಾವು ಏನು ಮಾಡಲು ಸಾಧ್ಯ ಎಂದು ಹೇಳಿದರು. ಮತ್ತೊಂದೆಡೆ ಸುಧಾಮೂರ್ತಿ ದಂಪತಿ ವಿರುದ್ಧ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಹರಿಹಾಯಿದ್ದಾರೆ. ಶ್ರೀಮಂತಿಕೆಯನ್ನು ಸರಳತೆಯಲ್ಲಿ ಬಚ್ಚಿಡುವುದು, ಸಾಮಾಜಿಕ ಸಮೀಕ್ಷೆಯಿಂದ ಮಾಹಿತಿಯನ್ನು ಮುಚ್ಚಿಡುವುದು ಸ್ವಾರ್ಥ ಮನಸ್ಥಿತಿಯ ಮುಖವಾಡದ ಅನಾವರಣ ಎಂದು ವಾಗ್ದಾಳಿ ನಡೆಸಿದರು.
RSS ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಚರ್ಚೆಗಳು ನಡೆಯುತ್ತಿರುವಂತೆಯೇ RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ. ಈ ಮಧ್ಯೆ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎಂಬ ತೀರ್ಮಾನದ ಮೂಲಕ ರಾಜ್ಯ ಸರ್ಕಾರ RSS ಚಟುವಟಿಕೆಗಳಿಗೆ ಕಡಿವಾಣ ಹಾಕಿದೆ. ಇದರ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು ಸರ್ಕಾರದ ಅನುಮತಿಯಿಲ್ಲದೆ. ಸಾರ್ವಜನಿಕ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರಿನ ಬಸವನಗುಡಿಯ ಖಾಸಗಿ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ಸಹ ವಿದ್ಯಾರ್ಥಿನಿಯನ್ನು ಪುರುಷರ ಶೌಚಾಲಯದಲ್ಲಿ ಅತ್ಯಾಚಾರ ಎಸಗಿದ್ದ ಆರೋಪದ ಮೇಲೆ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಆರನೇ ಸೆಮಿಸ್ಟರ್ ವಿದ್ಯಾರ್ಥಿ ಜೀವನ್ ಗೌಡ ಬಂಧಿತ ಆರೋಪಿದ್ದು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್ 10ರಂದು ಮಧ್ಯಾಹ್ನ 1:30 ರಿಂದ 1:50ರ ನಡುವೆ ಘಟನೆ ನಡೆದಿತ್ತು. ಏಳನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ ಸಂತ್ರಸ್ತೆ ಐದು ದಿನಗಳ ನಂತ ಅ. 15ರಂದು ದೂರು ದಾಖಲಿಸಿದ್ದಳು. ಈ ಸಂಬಂಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಜೀವನ್ ವಿರುದ್ಧ ಪ್ರಕರಣ ದಾಖಲಾಗಿದೆ.
Advertisement