DK Shivakumar
ಡಿ.ಕೆ ಶಿವಕುಮಾರ್

BMRDA ಪ್ರದೇಶಗಳು ಇಂದಲ್ಲ ನಾಳೆ ಬೆಂಗಳೂರು ನಗರದ ಭಾಗವಾಗಲಿವೆ; ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಆಸ್ತಿಗಳ ಬಿ ಖಾತೆ ಎ ಖಾತಾಗೆ ಪರಿವರ್ತನೆ: DCM

ಬೆಂಗಳೂರು ನಗರ ಜಿಲ್ಲೆಯ 12 ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ನಡೆಸಲಾಯಿತು. ಭವಿಷ್ಯದಲ್ಲಿ ಬೆಂಗಳೂರು ಬೆಳೆಯಲಿದೆ. ಬಿಎಂಆರ್ಡಿಎ ವ್ಯಾಪ್ತಿಯ ಪ್ರದೇಶಗಳು ಇಂದಲ್ಲ ನಾಳೆ ಬೆಂಗಳೂರು ನಗರದ ಭಾಗವಾಗಲಿವೆ ಎಂದರು.
Published on

ಬೆಂಗಳೂರು: ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಬೇಕಾದ ಬೆಂಗಳೂರು ಹೊರವಲಯದ ಪ್ರದೇಶಗಳ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆವರು ತಿಳಿಸಿದರು.

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯ 12 ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ನಡೆಸಲಾಯಿತು. ಭವಿಷ್ಯದಲ್ಲಿ ಬೆಂಗಳೂರು ಬೆಳೆಯಲಿದೆ. ಬಿಎಂಆರ್ಡಿಎ ವ್ಯಾಪ್ತಿಯ ಪ್ರದೇಶಗಳು ಇಂದಲ್ಲ ನಾಳೆ ಬೆಂಗಳೂರು ನಗರದ ಭಾಗವಾಗಲಿವೆ ಎಂದರು.

ನಿನ್ನೆ ನಗರ ಪ್ರದಕ್ಷಿಣೆ ಮಾಡಿ ಅವಲೋಕನ ನಡೆಸಿದೆ. ಈಗಿನಿಂದಲೇ ರಸ್ತೆ ಅಗಲೀಕರಣ‌ ಮತ್ತಿತರ ಮೂಲಸೌಕರ್ಯಗಳ ಅಭಿವೃದ್ಧಿ ಮಾಡಬೇಕಿದೆ. ಇದಕ್ಕೆ ಸೂಕ್ತ ಯೋಜನೆ ಮಾಡಬೇಕಿದೆ. ಸಿಎಂಸಿ, ಪಟ್ಟಣ ಪಂಚಾಯತಿ ಸೇರಿದಂತೆ ಒಂದಷ್ಟು ‌ಪ್ರದೇಶಗಳಲ್ಲಿ ರಸ್ತೆಗಳು ಕಿರಿದಾಗಿವೆ.

ಭವಿಷ್ಯದಲ್ಲಿ ಕಷ್ಟಪಡುವ ಬದಲು ಈಗಲೇ ಪಿಡ್ಬ್ಲೂಡಿ, ನಗರ ಯೋಜನೆ ಇಲಾಖೆಯವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಎಂದು ಸೂಚನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದರು.

DK Shivakumar
ಎಲೆಕ್ಟ್ರಾನಿಕ್ ಸಿಟಿ, ವೈಟ್‌ಫೀಲ್ಡ್‌ ಸೇರಿ ಬೆಂಗಳೂರಿನ ಹೊರ ವಲಯದ ಮತ್ತಷ್ಟು ಪ್ರದೇಶಗಳು GBA ವ್ಯಾಪ್ತಿಗೆ: DCM ಡಿ.ಕೆ ಶಿವಕುಮಾರ್

ಬೆಂಗಳೂರು ಹೊರ ವಲಯದಲ್ಲೂ ಬಿ ಖಾತಾಗಳನ್ನು ಎ ಖಾತಾಗೆ ಪರಿವರ್ತನೆಗೆ ತಯಾರಿ:

ಹೊರವಲಯ ಗಡಿಭಾಗದ ಒಂದಷ್ಟು ಪಂಚಾಯತಿಗಳು, ಮುನ್ಸಿಪಾಲಿಟಿಗಳು ಭವಿಷ್ಯದಲ್ಲಿ ಬೆಂಗಳೂರು ನಗರದ ಒಳಗೆ ಸೇರುತ್ತವೆಯಾದ್ದರಿಂದ ಈಗಿನಿಂದಲೇ ಮಾನಸಿಕವಾಗಿ ತಯಾರು ಮಾಡಲಾಗುತ್ತಿದೆ. ಈ ಪ್ರದೇಶಗಳಲ್ಲಿಯೂ ಸಹ ಬಿ ಖಾತೆಯಿಂದ ಎ ಖಾತೆ ಪರಿವರ್ತನೆ ವ್ಯವಸ್ಥೆಗೆ ತಯಾರಿ ನಡೆಸಲು ಸೂಚನೆ ನೀಡಿದ್ದೇನೆ. ಬೆಂಗಳೂರು ನಗರದಲ್ಲಿ ಆಸ್ತಿ ಮೌಲ್ಯ ಆಧಾರಿತ ತೆರಿಗೆ ಸಂಗ್ರಹದಂತೆ ಈ ಭಾಗದಲ್ಲಿಯೂ ಸಹ ತೆರಿಗೆ ಸಂಗ್ರಹದಲ್ಲಿ ಏಕರೂಪತೆ ತರಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಈಗಿನಿಂದಲೇ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಕಡಿವಾಣ ಹಾಕಬೇಕು ಎಂದು ಸೂಚನೆ ನೀಡಿದ್ದೇನೆ. ಏಕೆಂದರೆ ಮುಂದೆ ನಾವೇ ನೀರು ಮತ್ತಿತರ ಮೂಲಸೌಕರ್ಯಗಳನ್ನು ನೀಡಬೇಕಾಗುತ್ತದೆ. ಆದ ಕಾರಣ ಅಕ್ರಮ ಕಟ್ಟಡ, ಬಡಾವಣೆ ನಿರ್ಮಾಣ ಯೋಜನೆಗಳಿಗೆ ಕಡಿವಾಣ ಹಾಕಬೇಕಿದೆ. ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿರುವ ರಾಜಕಾಲುವೆ ಒತ್ತುವರಿ, ಸರ್ಕಾರಿ ಆಸ್ತಿ ಒತ್ತುವರಿ ಸಮಸ್ಯೆ ಈ ಭಾಗದಲ್ಲಿಯೂ ಇರುವ ಬಗ್ಗೆ ಕೇಳಿದಾಗ,ಬೆಂಗಳೂರು ನಗರ ಮಾದರಿಯಲ್ಲಿಯೇ ಇಲ್ಲಿಯೂ ಎಲ್ಲ ಆಸ್ತಿ ದಾಖಲೆಗಳನ್ನು ಈಗಿನಿಂದಲೇ ಡಿಜಿಟಲೀಕರಣ ಮಾಡಲಾಗುವುದು. 110 ಹಳ್ಳಿಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಹೀಗಾಗಿ ಭವಿಷ್ಯದಲ್ಲಿ ಸೇರ್ಪಡೆಯಾಗುವ ಪ್ರದೇಶಗಳಲ್ಲಿ ನಾಗರಿಕ ಪ್ರಜ್ಞೆ ಮೂಡಿಸಬೇಕಿದೆ. ನಗರ ವ್ಯಾಪ್ತಿಯಲ್ಲಿ ಬದುಕಲು ಬೇಕಾದ ರೀತಿ-ನೀತಿಗಳ ಬಗ್ಗೆ ಮಾನಸಿಕವಾಗಿ ತಯಾರು ಮಾಡಲಾಗುತ್ತದೆ. ಕಸವನ್ನು ಎಲ್ಲೆಂದರಲ್ಲಿ ಬಿಸಾಡಲಾಗುತ್ತಿದೆ. ಬೆಂಗಳೂರು ನಗರದ ಮಾದರಿಯಲ್ಲಿ ಕಸ ಸಂಗ್ರಹ ವ್ಯವಸ್ಥೆ ಬಗ್ಗೆಯೂ ಸೂಚನೆ ನೀಡಲಾಗಿದೆ" ಎಂದರು.

ಬೆಂಗಳೂರು ದಕ್ಷಿಣದಲ್ಲಿ ಮಾತ್ರ ಹೊಸ ಪ್ರದೇಶಗಳನ್ನು ಸೇರಿಸಿಕೊಳ್ಳಲಾಗುವುದೇ ಎಂದು ಕೇಳಿದಾಗ, ಬೆಂಗಳೂರು ಸುತ್ತಲಿನ ಗಡಿ ಭಾಗದ ಎಲ್ಲ 12 ಸ್ಥಳೀಯ ಸಂಸ್ಥೆಗಳ ಸೇರ್ಪಡೆ ಬಗ್ಗೆ ಯೋಜಿಸಲಾಗುತ್ತಿದೆ. ಮೊದಲು ಅಧಿಕಾರಿಗಳು ವರದಿ ನೀಡಲಿ. ಅದರ ಜೊತೆಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು, ಶಾಸಕರು, ಸಂಸದರ ಜೊತೆ ಚರ್ಚೆ ‌ಮಾಡಲು ತಿಳಿಸಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com