

ಬೆಂಗಳೂರು: ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಸ್ವಾಮ್ಯದ ದೇವಾಲಯಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಪುನರುಚ್ಚರಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಸಂಘಟನೆಯು ಕಾನೂನು ಮತ್ತು ಸಂವಿಧಾನಕ್ಕಿಂತ ದೊಡ್ಡದಲ್ಲ ಎಂದು ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಆರ್ಎಸ್ಎಸ್ ಕಾನೂನು ಮತ್ತು ಸಂವಿಧಾನಕ್ಕಿಂತ ದೊಡ್ಡದಲ್ಲ. ಈ ಪರಿಸ್ಥಿತಿ ಎಷ್ಟು ಕಾಲ ಮುಂದುವರಿಯುತ್ತದೆ? ದೇಶದ ಪ್ರತಿಯೊಬ್ಬ ನಾಗರಿಕ ಮತ್ತು ಸಂಘಟನೆಯನ್ನು ಅವರ ಕಾರ್ಯಗಳಿಗೆ ಹೊಣೆಗಾರರನ್ನಾಗಿ ಮಾಡಬೇಕು' ಎಂದು ಹೇಳಿದರು.
ಸರ್ಕಾರಿ ಸಂಸ್ಥೆಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಚಿವರು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಟೀಕಿಸಿದ ಖರ್ಗೆ, ಬೆಂಗಳೂರಿನಲ್ಲಿ ಐಟಿ ಕ್ಷೇತ್ರದ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಪ್ರಶ್ನಿಸಿದರು. 'ಐಟಿ ಕ್ಷೇತ್ರದಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ತೇಜಸ್ವಿ ಸೂರ್ಯ ಯಾವುದೇ ಕೊಡುಗೆ ನೀಡಿಲ್ಲ. ಅವರು ಅಥವಾ ಇತರೆ ಬಿಜೆಪಿ ಸಂಸದರು ಬೆಂಗಳೂರಿಗೆ ತಂದಿರುವ ಒಂದು ಯೋಜನೆಯನ್ನು ಹೆಸರಿಸಬಹುದೇ? ಸೆಮಿಕಂಡಕ್ಟರ್ ಕೈಗಾರಿಕೆಗಳು ಬೆಂಗಳೂರಿಗೆ ಬರಲು ಬಯಸಿದರೂ ಅಸ್ಸಾಂ ಮತ್ತು ಗುಜರಾತ್ಗೆ ಏಕೆ ಹೋಗುತ್ತಿವೆ? ಗುಜರಾತ್ ಮತ್ತು ಅಸ್ಸಾಂನಲ್ಲಿ ಏನಿದೆ? ಪ್ರತಿಭೆ ಇದೆಯೇ?' ಎಂದು ಕೇಳಿದರು.
ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಸುರಂಗ ಮಾರ್ಗ ನಿರ್ಮಾಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಬಿಜೆಪಿ ಸಂಸದ ತೇಜಸ್ವಿ ವಿರುದ್ಧ ವಾಗ್ದಾಳಿ ನಡೆಸಿದರು. ತೇಜಸ್ವಿ ಸೂರ್ಯ ಒಬ್ಬ ಖಾಲಿ ಟ್ರಂಕ್ ಎಂದು ಕಿಡಿಕಾರಿದರು.
Advertisement