

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ 700 ಮಕ್ಕಳೂ ಸೇರಿ 1,700 ಶಾಲಾ ಮಕ್ಕಳು ಭಾಗಿಯಾಗುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗುರುವಾರ ಹೇಳಿದರು.
ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದ ಸಿದ್ಧತೆಗಳನ್ನು ಸಚಿವರು ಪೊಲೀಸ್ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಲಾ ಶಿಕ್ಷಣ ಸಚಿವನಾಗಿ ಇದು ನನ್ನ ಮೂರನೇ ಕನ್ನಡ ರಾಜ್ಯೋತ್ಸವ. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಿನ್ನವಾಗಿ ರೂಪಿಸಲಾಗಿದೆ. ಕಳೆದ ಬಾರಿ 1100 ಮಕ್ಕಳು ಭಾಗಿಯಾಗಿದ್ದು, ಅದರಲ್ಲಿ 300 ಮಂದಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಾಗಿದ್ದರು. ಈ ಬಾರಿ 1, 700 ಮಕ್ಕಳು ಭಾಗವಹಿಸಲಿದ್ದಾರೆ, ಅವರಲ್ಲಿ 700 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಾಗಿರಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲ ಮಕ್ಕಳಿಗೂ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಿದರು.
ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಉಪಸ್ಥಿತರಿರಲಿದ್ದಾರೆ.
ಕನ್ನಡ ರಾಜ್ಯೋತ್ಸವದಂದು ಮುಖ್ಯಮಂತ್ರಿಗಳು ಶಾಲಾ ಶಿಕ್ಷಣ ಇಲಾಖೆಗೆ ಸಂಬಂಧಪಟ್ಟ ಹಲವು ವಿಶೇಷ ಕಾರ್ಯಕ್ರಮವನ್ನು ಘೋಷಣೆ ಮಾಡಲಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದರಿಂದ ಶಿಕ್ಷಕರು ರೆಮಿಡಿಯಲ್ ತರಗತಿಗಳನ್ನು ಸುಲಭವಾಗಿ ನಡೆಸುತ್ತಿದ್ದಾರೆ. ಮಕ್ಕಳ ದಿನಾಚರಣೆಯ ಅಂಗವಾಗಿ ನವೆಂಬರ್ 14 ರಂದು ಮಕ್ಕಳು, ಪೋಷಕರು, ಶಿಕ್ಷಕರನ್ನು ಒಗ್ಗೂಡಿಸಿ ಮಕ್ಕಳ ದಿನಾಚರಣೆಯ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅಲ್ಲದೇ, ಶಾಲೆಗಳ ಪ್ರವೇಶ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಉತ್ತೀರ್ಣ ಅಂಕಗಳು 35ರಿಂದ 33ಕ್ಕೆ ನಿಗದಿ ಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಇದು ನನ್ನ ವೈಯಕ್ತಿಕ ನಿರ್ಧಾರವಲ್ಲ. ಜನಾಭಿಪ್ರಾಯ ಪಡೆದು ಮಾಡಲಾಗಿದೆ. ಇದು ಗ್ರಾಮೀಣ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಆಡಳಿತ ಸುಧಾರಣೆಗಳ ಸಮಿತಿಯ ನೇತೃತ್ವ ವಹಿಸಿದ್ದ ಮಾಜಿ ಐಎಎಸ್ ಅಧಿಕಾರಿ ವಿಜಯ್ ಭಾಸ್ಕರ್ ಅವರು ಇದನ್ನು ಸೂಚಿಸಿದ್ದಾರೆ. ಇದರ ಬಗ್ಗೆ ಈಗಾಗಲೇ ಪರಿಷತ್ತಿನ ಅಧ್ಯಕ್ಷ ಬಸವರಾಜ ಹೊರಟ್ಟಿ ಅವರೊಂದಿಗೆ ಚರ್ಚಿಸಲಾಗಿದೆ, ಮತ್ತೆ ಅವರೊಂದಿಗೆ ಮಾತನಾಡುತ್ತೇನೆ. ಸಿಬಿಎಸ್ಇ ಮತ್ತು ಐಸಿಎಸ್ಇ ಮಂಡಳಿಗಳು ಈಗಾಗಲೇ ಶೇ.33 ಉತ್ತೀರ್ಣ ಮಾನದಂಡವನ್ನು ಅನುಸರಿಸುತ್ತಿವೆ ಎಂದರು.
Advertisement