
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರಿಗೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದನೆಂಬ ಕಾರಣಕ್ಕಾಗಿ, ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಅಪಹರಿಸಿ ಬೆಂಗಳೂರಿಗೆ ತಂದು, ಪಟ್ಟಣಗೆರೆಯಲ್ಲಿನ ಶೆಡ್ನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿಯಾಗಿದ್ದಾರೆ.
ಇತ್ತೀಚಿಗೆ ನಟ ದರ್ಶನ್ ಅವರ ಆಪ್ತರಾದ ಪವಿತ್ರ ಗೌಡ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಅವರ ಪರ ವಾದಿಸಿದ ವಕೀಲ ಬಾಲನ್, ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಪ್ರಶ್ನಿಸದಿದ್ದರೂ ಚಾರ್ಜ್ ಶೀಟ್ ಸಲ್ಲಿಕೆಯಲ್ಲಿ ತಾಂತ್ರಿಕ ದೋಷಗಳಿವೆ. crpc ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸದೆ BNSS ಅಡಿಯಲ್ಲಿ ಚಾರ್ಚ್ ಶೀಟ್ ಸಲ್ಲಿಸಿರುವುದರಿಂದ ಕಾನೂನು ಪ್ರಕಾರ ಅಮಾನ್ಯವಾಗಿದೆ. ಹೀಗಾಗಿ ಪವಿತ್ರ ಗೌಡ ಅವರಿಗೆ ಜಾಮೀನು ನೀಡಬೇಕು ಎಂದು ವಾದಿಸಿದರು.
ಆರೋಪಿ ಪರ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಾಸಿಕ್ಯೂಷನ್ ವಕೀಲ ಸಚಿನ್, ಜಾಮೀನು ನೀಡದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
ವಾದ ವಿವಾದ ಆಲಿಸಿದ ನ್ಯಾಯಾಧೀಶರು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ಎಲ್ಲಾ ಆರೋಪಿಗಳಿಗೆ ನೀಡಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಕೂಡಲೇ ಆರೆಸ್ಟ್ ಮಾಡುವಂತೆ ಸೂಚಿಸಿತ್ತು. ತದನಂತರ ಆಗಸ್ಟ್ 14 ರಿಂದ ಪವಿತ್ರ ಗೌಡ ಮತ್ತೆ ಜೈಲು ಸೇರಿದ್ದಾರೆ.
Advertisement