ನಿರಂತರ ಮಳೆಗೆ ಬೆಳೆ ಹಾನಿ: ರೈತರ ಸಾಲ ಮನ್ನಾಗೆ JDS ಆಗ್ರಹ; ರಾಜ್ಯ ಪ್ರವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಮುಂದು

ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದ್ದು, ಬೆಳೆ ಹಾನಿ, ಮನೆ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲಿದ್ದೇವೆ.
Nikhil Kumaraswamy
ನಿಖಿಲ್ ಕುಮಾರಸ್ವಾಮಿ
Updated on

ಬೆಂಗಳೂರು: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಭಾರೀ ಮಳೆ ಮತ್ತು ಪ್ರವಾಹದಿಂದ "ವ್ಯಾಪಕ ಬೆಳೆ ಹಾನಿ" ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್‌ ಪ್ರದೇಶದಲ್ಲಿ ರೈತರ ಬೆಳೆ ನಷ್ಟವಾಗಿದ್ದು, ನೆರೆಹಾನಿಯಿಂದ ಜನಸಾಮಾನ್ಯರು ಸಹ ಮನೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ನೆರವಿಗೆ ಧಾವಿಸದೆ, ಪರಿಹಾರಗಳನ್ನು ಒದಗಿಸಿದೆ ನಿರ್ಲಕ್ಷ್ಯವಹಿಸಿದೆ ಎಂದು ಕಿಡಿಕಾರಿದ್ದಾರೆ.

ಈ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದ್ದು, ಬೆಳೆ ಹಾನಿ, ಮನೆ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲಿದ್ದೇವೆಂದು ಹೇಳಿದ್ದಾರೆ.

ಕರ್ನಾಟಕದ ಕಿತ್ತೂರು, ಕಲ್ಯಾಣ ಕರ್ನಾಟಕ, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸುಮಾರು ಶೇ.34 ರಷ್ಟು ಅಧಿಕ ಮಳೆಯಾಗಿದ್ದು, ಬೆಳೆ ನಾಶವಾಗಿದೆ, ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಯಾವುದೇ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಅಥವಾ ಯಾವುದೇ ಹೇಳಿಕೆ ನೀಡಿಲ್ಲ.

ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಮತ್ತು ಅವರಿಗೆ ಸ್ವಲ್ಪ ಭರವಸೆ ನೀಡುವ ಬದಲು, ರಾಜ್ಯ ಸರ್ಕಾರವು ಸಚಿವರ ಪ್ರಯಾಣಕ್ಕಾಗಿ ಹೆಲಿಕಾಪ್ಟರ್-ಖಾಸಗಿ ಜೆಟ್ ಖರೀದಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಒಂದು ಹೆಲಿಕಾಪ್ಟರ್ ಸುಮಾರು 80 ಕೋಟಿ ರೂ. ಮತ್ತು ಖಾಸಗಿ ಜೆಟ್ ರೂ. 150 ಕೋಟಿ ವರೆಗೆ ವೆಚ್ಚವಾಗಬಹುದು. ಇವುಗಳ ಖರೀದಿ ಬಗ್ಗೆ ಚರ್ಚಿಸಲು ಸರ್ಕಾರದ ಬಳಿ ಸಮಯವಿದೆ ಎಂದರೆ, ರೈತರ ಬಗ್ಗೆ ಯೋಚಿಸಲು ಸಮಯವೇಕಿಲ್ಲ ಎಂದು ಪ್ರಶ್ನಿಸಿದ್ದಾರೆ.

ಸರ್ಕಾರವು NDRF ಮಾನದಂಡಗಳ ಅಡಿಯಲ್ಲಿ ಪ್ರತಿ ಹೆಕ್ಟೇರ್‌ಗೆ 6,800 ರೂ. ಪರಿಹಾರವನ್ನು ಪ್ರಸ್ತಾಪಿಸಿದೆ. ಆದರೆ, ರೈತರು ಪ್ರತಿ ಹೆಕ್ಟೇರ್‌ಗೆ 20,000-25,000 ರೂ.ಗಳನ್ನು ಕೇಳುತ್ತಿದ್ದಾರೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ರಸಗೊಬ್ಬರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇದರಿಂದಾಗಿ ರೈತರು 266 ರೂ.ಗಳ ಬದಲಿಗೆ ಪ್ರತಿ ಚೀಲಕ್ಕೆ 1,000-1,200 ರೂ.ಗಳಿಗೆ ರಸಗೊಬ್ಬರ ಖರೀದಿ ಮಾಡುವಂತಾಗಿದೆ. ಇದಕ್ಕೆ ಯಾರು ಹೊಣೆ? ರೈತರು ಸಂಕಷ್ಟ ಎದುರಿಸುತ್ತಿದ್ದರೂ ರಾಜ್ಯ ಕೃಷಿ ಸಚಿವರು (ಚೆಲುವರಾಯಸ್ವಾಮಿ) ಗಾಢ ನಿದ್ರೆಯಲ್ಲಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ.

Nikhil Kumaraswamy
ಅತಿವೃಷ್ಟಿಯಿಂದಾಗಿ ಅಪಾರ ಹಾನಿ; ಪರಿಹಾರ ಒತ್ತಾಯಿಸಲು ದೆಹಲಿಗೆ ರಾಜ್ಯ ನಿಯೋಗ ಕಳುಹಿಸಿ: ಸರ್ಕಾರಕ್ಕೆ ಬಿ.ಆರ್ ಪಾಟೀಲ್ ಆಗ್ರಹ

ತಮ್ಮ ತಂದೆ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದರು. ಇದೀಗ ಮಳೆಯಿಂದಾಗಿ ಸುಮಾರು 1,42,000 ಹೆಕ್ಟೇರ್ ಕೃಷಿ ಭೂಮಿ ಬಾಧಿತವಾಗಿದೆ. ರೈತರ ಸಂಕಷ್ಟ ದೂರಾಗಿಸಲು ಸರ್ಕಾರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದರು.

ಉತ್ತರ ಕರ್ನಾಟಕದಲ್ಲಿ ಶೇ.70ರಷ್ಟು ಬೆಳೆ ಹಾನಿಯಾಗಿದೆ. ಈ ಪ್ರದೇಶದ ರೈತರು ಹತ್ತಿ, ದ್ವಿದಳ ಧಾನ್ಯ ಬೆಳೆಯುತ್ತಾರೆ. ಬೆಳೆ ಬೆಳೆಯಲು ರೈತರು ಭಾರೀ ಸಾಲ ಪಡೆದಿದ್ದು, ಅವರ ಹೆಗಲ ಮೇಲೆ ದೊಡ್ಡ ಹೊರೆಯಿದೆ. ಸರ್ಕಾರ ಮಧ್ಯಪ್ರವೇಶಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದೇನೆಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com