
ಬೆಂಗಳೂರು: ನಮ್ಮ ಮೆಟ್ರೋದ ದರ ಶೇಕಡಾ 136ರಷ್ಟು ಏರಿಕೆಯಾಗಿದ್ದು, ಇದು ದೇಶದಲ್ಲೇ ಅತಿ ದುಬಾರಿಯಾಗಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಶುಕ್ರವಾರ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮೆಟ್ರೋ ದರ ಏರಿಕೆ ಕುರಿತಂತೆ ರಾಜ್ಯ ಸರ್ಕಾರ ಮತ್ತು ಬಿಎಂಆರ್ ಸಿಎಲ್ ವಿರುದ್ಧ ವಾಗ್ದಾಳಿ ನಡೆಸಿದರು.
'ಬೆಂಗಳೂರು ಮೆಟ್ರೋದ ದರ ಶೇಕಡಾ 136ರಷ್ಟು ಏರಿಕೆಯಾಗಿದ್ದು, ಇದು ದೇಶದಲ್ಲೇ ಅತಿ ದುಬಾರಿಯಾಗಿದೆ. ದೆಹಲಿ ಮೆಟ್ರೋದ ದರ ಏರಿಕೆ ಜತೆ ಬೆಂಗಳೂರು ಮೆಟ್ರೋ ದರ ಹೆಚ್ಚಳ ಹೋಲಿಕೆ ಮಾಡಿ ಅಂಕಿಅಂಶಗಳನ್ನು ನೀಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ದರ ಇಳಿಕೆ ಮಾಡಬೇಕು ಎಂದು ಆಗ್ರಸಿಹಿಸಿದ್ದಾರೆ.
ನಮ್ಮ ಮೆಟ್ರೋದಲ್ಲಿ ನಿತ್ಯ ಸರಾಸರಿ 10 ಲಕ್ಷ ಮಂದಿ ಪ್ರಯಾಣಿಸುತ್ತಾರೆ. ಆದರೆ ಇಲ್ಲಿ ಪ್ರಯಾಣದ ದೇಶದಲ್ಲೇ ಅತ್ಯಂತ ದುಬಾರಿಯಾಗಿದೆ. ಕನಿಷ್ಠ 1 ರೂ.ನಿಂದ ಗರಿಷ್ಠ 4 ರೂ. ವರೆಗೆ ದರ ಏರಿಕೆ ಮಾಡಲಾಗಿದೆ. ಇಷ್ಟು ಪ್ರಮಾಣದಲ್ಲಿ ದರ ಹೆಚ್ಚಳ ಮಾಡಿದರೆ ಯಾರೂ ವಿರೋಧಿಸುವುದಿಲ್ಲ.
ಸರ್ಕಾರಕ್ಕೆ ಆದಾಯದ ಅಗತ್ಯವಿದೆ ಎಂಬುದನ್ನು ಅರ್ಥ ಮಾಡಿಕೊಂಡು ಸುಮ್ಮನಾಗುತ್ತಾರೆ. ಆದರೆ, ಬೆಂಗಳೂರಿನಲ್ಲಿ (Bengaluru) ನಮ್ಮ ಮೆಟ್ರೋ ದರ ಸುಮಾರು ಶೇ 136 ರಷ್ಟು ಹೆಚ್ಚಳ ಮಾಡಿದ್ದಾರೆ. 25 ರೂ.ನಷ್ಟು ದರ ಏರಿಕೆ ಮಾಡಲಾಗಿದೆ. ಇದನ್ನು ಯಾರು ಸಹಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಅಂತೆಯೇ ರಾಜ್ಯ ಸರ್ಕಾರ ತಕ್ಷಣವೇ ದರ ಇಳಿಕೆ ಮಾಡಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು. ದೆಹಲಿ ಮೆಟ್ರೋ ಕೂಡ ಇತ್ತೀಚೆಗೆ ದರ ಏರಿಕೆ ಮಾಡಿದೆ. ಆದರೆ, ಬೆಂಗಳೂರು ಮೆಟ್ರೋ ದರ ದೇಶದಲ್ಲೇ ಅತ್ಯಂತ ದುಬಾರಿಯಾಗಿದೆ. ಬೆಂಗಳೂರು ನಮ್ಮ ಮೆಟ್ರೋದಲ್ಲಿ ಮುಖ್ಯವಾಗಿ ಐಟಿ ಮತ್ತು ಬಿಟಿ ವಲಯದ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಸಂಚರಿಸುತ್ತಾರೆ.
ಬಿಎಂಆರ್ಸಿಎಲ್ ಮೆಟ್ರೋ ಪ್ರಯಾಣ ದರಗಳನ್ನು ಹೆಚ್ಚಿಸಿದ್ದರಿಂದ ಬೆಂಗಳೂರು ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿಯಾಗಿದೆ. ನಮ್ಮ ಸರ್ಕಾರ ಶೇ 136 ರಷ್ಟು ದರ ಹೆಚ್ಚಳ ಮಾಡಿತು. ಇದಕ್ಕೆ ವ್ಯತಿರಿಕ್ತವಾಗಿ, ದೆಹಲಿ ಮೆಟ್ರೋ ದರ ಹೆಚ್ಚಳವು ಸಮಂಜಸ ಮತ್ತು ಕೈಗೆಟುಕುವಂತಿದ್ದು, ಗರಿಷ್ಠ 4 ರೂ. ಹೆಚ್ಚಳವಾಗಿದೆ ಎಂದು ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಒಬ್ಬ ಸಾಮಾನ್ಯ ಮೆಟ್ರೋ ಬಳಕೆದಾರನು ತನ್ನ ನಿವಾಸದಿಂದ ಕೆಲಸಕ್ಕೆ 25 ಕಿ.ಮೀ.ಗಿಂತ ಹೆಚ್ಚು ದೂರ ಪ್ರಯಾಣಿಸಿದರೆ, ಪ್ರತಿ ಪ್ರಯಾಣಕ್ಕೆ ಸುಮಾರು 90 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಇದು ಮೆಟ್ರೋ ತಲುಪುವುದಕ್ಕೆ ಮತ್ತು ಮೆಟ್ರೋ ಇಳಿದ ನಂತರದ ಪ್ರಯಾಣದ ಹೆಚ್ಚುವರಿ ವೆಚ್ಚಗಳನ್ನು ಹೊರತುಪಡಿಸಿದ ಲೆಕ್ಕ. ಈ ದುರದೃಷ್ಟಕರ ಪರಿಸ್ಥಿತಿಯು ಸಾರ್ವಜನಿಕ ಸಾರಿಗೆಯನ್ನು ಅಳವಡಿಸಿಕೊಳ್ಳುವುದನ್ನು ಮತ್ತು ಖಾಸಗಿ ವಾಹನಗಳನ್ನು ಪ್ರೋತ್ಸಾಹಿಸುವುದನ್ನು ನಿರುತ್ಸಾಹಗೊಳಿಸುತ್ತಿದೆ. ಇಷ್ಟೊಂದು ದುಬಾರಿ ದರ ಹೆಚ್ಚಳವನ್ನು ಯಾವ ಆಧಾರದ ಮೇಲೆ ಜಾರಿಗೆ ತರಲಾಯಿತು ಎಂದು ತೇಜಸ್ವಿ ಸೂರ್ಯ ಪ್ರಶ್ನಿಸಿದ್ದಾರೆ.
ಹೈಕೋರ್ಟ್ ಗೆ ಅರ್ಜಿ
ಮೆಟ್ರೋ ದರ ಹೆಚ್ಚಳ ವಿಚಾರವಾಗಿ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದೇನೆ. ಶುಲ್ಕ ನಿಗದಿ ಸಮಿತಿ (ಎಫ್ಎಫ್ಸಿ) ವರದಿಯನ್ನು ಬಹಿರಂಗಪಡಿಸಲಾಗುವುದು ಎಂದು ವಿಚಾರಣೆ ವೇಳೆ ಹೈಕೋರ್ಟ್ಗೆ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಆದರೆ, ಈವರೆಗೆ ವರದಿಯನ್ನು ಬಿಎಂಆರ್ಸಿಎಲ್ ಬಹಿರಂಗಪಡಿಸಿಲ್ಲ. 22ಕ್ಕೆ ಅಂತಿಮ ವಿಚಾರಣೆ ಇದೆ. ಹೀಗಾಗಿ ತಕ್ಷಣವೇ ವರದಿ ಬಿಡುಗಡೆ ಮಾಡಬೇಕೆಂದು ಮತ್ತೊಮ್ಮೆ ಒತ್ತಾಯಿಸುತ್ತೇನೆ. ಸಾರ್ವಜನಿಕ ಹಿತಾಸಕ್ತಿ ಅತ್ಯಂತ ಮುಖ್ಯ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
Advertisement