
ಬೆಂಗಳೂರು: ಲಂಚ ಸ್ವೀಕಾರದ ವೇಳೆ ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಹಾಗೂ ಬೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಹಿಳೆಯೊಬ್ಬರು ನೀಡಿದ್ದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ದೇವನಹಳ್ಳಿ ಠಾಣೆ ಪಿಎಸ್ಐ ಜಗದೇವಿ, ಕಾನ್ಸ್ಟೇಬಲ್ಗಳಾದ ಮಂಜುನಾಥ್, ಅಮರೇಶ್ ವಿರುದ್ದ ದೂರು ದಾಖಲಾಗಿತ್ತು. ಪೋಕ್ಸೊ ಕೇಸ್ನಲ್ಲಿ ಚಾರ್ಜ್ಶೀಟ್ ಹಾಕಲು 70 ಸಾವಿರ ಲಂಚ ಕೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆ ಬೆನ್ನಲ್ಲೇ ಮಹಿಳಾ ಪೊಲೀಸ್ ಸಬ್-ಇನ್ಸ್ಪೆಕ್ಟರ್ ಜಗದೇವಿ ಮತ್ತು ತನಿಖಾಅಧಿಕಾರಿಗೆ ಸಹಾಯ ಮಾಡುತ್ತಿದ್ದ ಕಾನ್ಸ್ಟೆಬಲ್ ಮಂಜುನಾಥ್ ಎಂಬ ಇಬ್ಬರು ತಲೆಮರೆಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಮತ್ತೊಂದು ಪ್ರಕರಣದಲ್ಲಿ ಕಾಮಗಾರಿಯ ಕಾರ್ಯಾದೇಶ ನೀಡಲು ವಿದ್ಯುತ್ ಗುತ್ತಿಗೆದಾರರೊಬ್ಬರಿಂದ 3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ತಿಮ್ಮರಾಯಪ್ಪ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ತಿಮ್ಮರಾಯಪ್ಪ ಕಾಮಗಾರಿ ಮೊತ್ತದ ಶೇ 10ರಷ್ಟು ಹಣವನ್ನು ಕಮೀಷನ್ ನೀಡಬೇಕು ಎಂದು ಬೇಡಿಕೆಯೊಡ್ಡಿದ್ದರು. ಈ ಕುರಿತು ಹೊಳಲ್ಕೆರೆ ತಾಲ್ಲೂಕು ದುಮ್ಮಿ ಗ್ರಾಮದ ವಿದ್ಯುತ್ ಗುತ್ತಿಗೆದಾರ ಎಸ್.ಆರ್.ಸಂಜಯ್ ಬುಧವಾರ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಗುರುವಾರ ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದಾಗಲೇ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಲಂಚದ ಹಣವನ್ನು ಜಪ್ತಿ ಮಾಡಿದ್ದಾರೆ.
Advertisement