
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ಬಗ್ಗೆ ತಮ್ಮ ಮೇಲೆ ಬಂದಿರುವ ಆರೋಪಗಳ ಕುರಿತು ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಗಂಗಾವತಿ ಶಾಸಕ ಜನಾರ್ದನರೆಡ್ಡಿ ವಿರುದ್ಧ ನ್ಯಾಯಾಲಯ ಮೊರೆ ಹೋಗಿದ್ದಾರೆ.
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ತಮ್ಮ ಹೆಸರನ್ನು ಅನವಶ್ಯಕವಾಗಿ ಎಳೆದು ತರಲಾಗಿದೆ ಎಂದು ಶಾಸಕ ಜನಾರ್ದನರೆಡ್ಡಿ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸೆಂಥಿಲ್, ಈಗ ನಡೆಯುತ್ತಿರುವ ಎಸ್ಐಟಿ ತನಿಖೆಯ ಹಿಂದಿನ ಚಿತ್ರಕಥೆಗಾರ ಮತ್ತು ಮಾಸ್ಟರ್ ಮೈಂಡ್ ಎಂದು ತಮ್ಮನ್ನು ತಪ್ಪಾಗಿ ಬಿಂಬಿಸಲಾಗಿದೆ.
ಆರಂಭದಲ್ಲಿ, ನಾನು ಈ ಬಗ್ಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದ್ದೆ. ಜನಾರ್ದನ ರೆಡ್ಡಿಯವರು ಆರೋಪ ಮಾಡಿದ ಸಂದರ್ಭದಲ್ಲಿ ನಾನು ಸಂಸತ್ತು ಅಧಿವೇಶನದಲ್ಲಿ ಭಾಗಿಯಾಗಿದ್ದೆ. ಅವರ ಆರೋಪಗಳು ಬಾಲಿಶವಾಗಿವೆ ಎಂದರು.
ಈಗ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದರ ನಂತರ ಒಂದರಂತೆ ತಮ್ಮ ವಿರುದ್ಧ ಸುಳ್ಳು ಕಥೆಗಳನ್ನು ಹೆಣೆಯುತ್ತಿದ್ದಾರೆ. ನೋಡಿ ಸುಮ್ಮನೆ ಕೂರದೆ ಕಾನೂನುಬದ್ಧವಾಗಿ ಪ್ರಶ್ನಿಸಲು ಮುಂದಾಗಿದ್ದೇನೆ ಎಂದರು.
ಕರ್ನಾಟಕದಲ್ಲಿ ಐಎಎಸ್ ಅಧಿಕಾರಿಯಾಗಿ ತಮ್ಮ ಕ್ಲೀನ್ ಟ್ರ್ಯಾಕ್ ರೆಕಾರ್ಡ್ ನ್ನು ನೆನಪಿಸಿಕೊಂಡ ಸೆಂಥಿಲ್, ಶಾಸಕ ಜನಾರ್ದನ ರೆಡ್ಡಿಯವರು ರಾಜ್ಯದ ಸಂಪನ್ಮೂಲಗಳನ್ನು ಲೂಟಿ ಮಾಡಿದ್ದಾರೆ ಮತ್ತು ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ ಕೆಟ್ಟ ಇಮೇಜ್ ತಂದಿದ್ದಾರೆ, ಇಂಥವರು ನನ್ನ ಮೇಲೆ ಆರೋಪ ಮಾಡುತ್ತಿರುವುದು ಎಷ್ಟು ಸರಿ ಎಂದು ಕೇಳಿದರು.
ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿಯವರು ತಮ್ಮ ಹೆಸರನ್ನು ಎಳೆದು ತರುತ್ತಿರುವ ಬಗ್ಗೆ ಸ್ಪಷ್ಟೀಕರಣ ಕೋರಿ ನ್ಯಾಯಾಲಯದ ಮುಂದೆ ದೂರು ದಾಖಲಿಸಿದ್ದೇನೆ ಎಂದರು.
Advertisement