
ಬೆಂಗಳೂರು: ಇಂದಿರಾನಗರ 100 ಅಡಿ ರಸ್ತೆಯಲ್ಲಿ ಪಾದಚಾರಿ ಮಾರ್ಗ ಹಾಗೂ ಸಸಿಗಳ ನಿರ್ವಹಣೆ ಜವಾಬ್ದಾರಿಯನ್ನು ಸ್ಥಳೀಯ ಅಂಗಡಿಗಳಿಗೆ ನೀಡಬೇಕು ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಸೋಮವಾರ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಸೋಮವಾರ ತಮ್ಮ ಅಧಿಕಾರ ವ್ಯಾಪ್ತಿಯ ವಿವಿಧ ಸ್ಥಳಗಳನ್ನು ಪರಿಶೀಲಿಸಿದರು.
100 ಅಡಿ ರಸ್ತೆಯಲ್ಲಿ ವೈಟ್-ಟಾಪಿಂಗ್ ಕೈಗೊಳ್ಳಲಾಗಿದ್ದು, ತೋಟಗಾರಿಕೆ ಇಲಾಖೆಯಿಂದ ಪಾದಚಾರಿ ಮಾರ್ಗದ ಉದ್ದಕ್ಕೂ ಸಸಿಗಳನ್ನು ನೆಡಲಾಗಿದೆ. ಆದರೆ, ಅದು ಕಳಪೆ ನಿರ್ವಹಣೆಯಿಂದ ಕೂಡಿದ್ದು, ಅಧಿಕಾರಿಗಳು ಸ್ಥಳೀಯ ಅಂಗಡಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು. ಪಾದಚಾರಿ ಮಾರ್ಗಗಳನ್ನು ನಿರ್ವಹಿಸುವಂತೆ ಕ್ರಮ ವಹಿಸಬೇಕು ಎಂದು ಹೇಳಿದರು.
ರಸ್ತೆಬದಿ ಕಸ ಬಿಸಾಡುವ ಉದ್ದಿಮೆ/ ಮಳಿಗಗಳಿಗೆ ದಂಡ ವಿಧಿಸಿ, ಮತ್ತೆ ಕಸ ಬಿಸಾಡದಂತೆ ಎಚ್ಚರಿಕೆ ನೀಡಬೇಕು. ದೊಮ್ಮಲೂರು ಮೇಲ್ಸೇತುವೆ ಬಳಿಯ ಕಸ ವರ್ಗಾವಣೆ ಕೇಂದ್ರ, ಒಣ ತ್ಯಾಜ್ಯ ಸಂಗ್ರಹಣಾ ಘಟಕದ ಬಳಿ ತುಂಬಾ ವಾಸನೆ ಬರುತ್ತಿದ್ದು, ಆ ಪ್ರದೇಶದಲ್ಲಿ ಪ್ರೆಷರ್ ಪಂಪ್ ಮೂಲಕ ಸ್ವಚ್ಛಗೊಳಿಸಿ, ವಾಸನೆ ಬರದಂತೆ ಹಾಗೂ ಸುಂದರವಾಗಿ ಅಭಿವೃದ್ಧಿಪಡಿಸಲು ಸಮಗ್ರ ಯೋಜನೆ ರೂಪಿಸಬೇಕು ಎಂದು ಹೇಳಿದರು.
ಪರಿಶೀಲನೆ ಸಂದರ್ಭದಲ್ಲಿ ಹಾಜರಿದ್ದ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್, ‘ಕೇಂಬ್ರಿಡ್ಜ್ ರಸ್ತೆಯ ಇಸ್ರೊ ಸೇತುವೆ ಬಳಿ ರಾಜಕಾಲುವೆಯ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿದ್ದು, ಅದನ್ನು ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು. ಜೋಗುಪಾಳ್ಯ, ಒ.ಆರ್.ಸಿ ರಸ್ತೆ ಹಾಗೂ ಅಕ್ಕಿತಿಮ್ಮನಹಳ್ಳಿಯಲ್ಲಿ ಸಮುದಾಯ ಭವನದ ಕಟ್ಟಡಗಳ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಮರು ಟೆಂಡರ್ ಕರೆದು ತ್ವರಿತವಾಗಿ ಸುಮುದಾಯ ಭವನಗಳನ್ನು ನಿರ್ಮಿಸಿಕೊಡಬೇಕು ಎಂದು ತಿಳಿಸಿದರು.
ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ನಗರ ನೈರ್ಮಲ್ಯ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಲು ಹಾಗೂ ವಾರ್ಡ್ ಮಟ್ಟದಲ್ಲಿ ಅನಧಿಕೃತ ಜಾಹೀರಾತು ಫಲಕ/ಬ್ಯಾನರ್ ತೆರವುಗೊಳಿಸಲು ಆದೇಶಿಸಿದರು.
ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡಲು ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಆಯುಕ್ತ ಕೆ.ಎನ್ ರಮೇಶ್ ಅವರು ಅಧಿಕಾರಿಗಳಿಗೆ ತಿಳಿಸಿದರು. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಮಾಡಲು ಹೂಳು ತೆರವುಗೊಳಿಸಬೇಕು ಎಂದರು.
Advertisement