
ಬೆಂಗಳೂರು: ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಯನ್ನು ಕಡ್ಡಾಯಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ಸ್ಥಳೀಯ ಚುನಾವಣೆಗಳಲ್ಲಿ ಮತಪತ್ರಗಳಿಗೆ ಬಳಕೆ ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದ ಬೆನ್ನಲ್ಲೇ ಪಾಟೀಲ್ ಈ ಹೇಳಿಕೆ ನೀಡಿದ್ದಾರೆ.
ಮಂಗಳವಾರ ಮಾತನಾಡಿದ ಅವರು, ಕಾಯ್ದೆಗಳ ತಿದ್ದುಪಡಿಗೆ ಕರಡು ಮಸೂದೆ ಸಿದ್ಧವಾಗಿದೆ. ಇದೇ 11ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಚರ್ಚೆ ಮಾಡುತ್ತೇವೆ ಎಂದರು. ಸಚಿವ ಸಂಪುಟ ಒಪ್ಪಿದರೆ ಸುಗ್ರೀವಾಜ್ಞೆ ಹೊರಡಿಸುತ್ತೇವೆ ಎಂದರು.
ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡುವ ವಿಶ್ವಾಸವಿದೆ ಎಂದ ಅವರು, ಮತಪತ್ರ ಕಡ್ಡಾಯಗೊಳಿಸುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಆಗುವುದಿಲ್ಲ. ಆ ಉದ್ದೇಶವೂ ಸರ್ಕಾರಕ್ಕೆ ಇಲ್ಲ ಎಂದರು.
Advertisement