
ಬೆಂಗಳೂರು: ಪಕ್ಷದ ಶಾಸಕರು ಹಾಗೂ ಸಚಿವರೊಂದಿಗೆ ಮುಖ್ಯಮಂತ್ರ ಸಿದ್ದರಾಮಯ್ಯ ಅವರು ಬುಧವಾರ ಸಭೆ ನಡೆಸಿದ್ದು, ಪಾಲಿಕೆ ಚುನಾವಣ, ಶಾಸಕರ ನಿಧಿ ಹಂಚಿಗೆ ಹಾಗೂ ಬೆಂಗಳೂರು ರಸ್ತೆ ಗುಂಡಿ ವಿಷಯಗಳ ಕುರಿತು ಚರ್ಚೆ ನಡೆಸಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಕಾಂಗ್ರೆಸ್ ಶಾಸಕರು, ಸಚಿವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು, ನಗರದ ಐದೂ ಪಾಲಿಕೆಗಳಲ್ಲಿ ಪಕ್ಷ ಅಧಿಕಾರಕ್ಕೆ ಬರುವಂತೆ ಅಭಿವೃದ್ಧಿ ಮಾಡಿ ಎಂದು ಸೂಚನೆ ನೀಡಿದರು.
ರಾಜ್ಯ ಸರ್ಕಾರವು ಪ್ರತಿಪಕ್ಷಗಳ ವಿರೋಧದ ನಡುವೆಯೂ ಬೆಂಗಳೂರು ನಗರದ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಜಿಬಿಎ ರಚನೆ ಮಾಡಿ, ಐದು ಪಾಲಿಕೆಗಳನ್ನು ರಚಿಸಲಾಗಿದೆ. ಜಿಬಿಎ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆಗಳಿವೆ. ಪಾಲಿಕೆಗಳಲ್ಲಿ ಜನಪ್ರತಿನಿಧಿಗಳು ಇಲ್ಲದ ಕಾರಣ ಜನರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ನಿಮ್ಮ (ಶಾಸಕರು) ಜವಾಬ್ದಾರಿ ದೊಡ್ಡದು. ಹೀಗಾಗಿ ನಿರೀಕ್ಷೆಗೆ ತಕ್ಕಂತೆ ನೀವು ಸ್ಪಂದಿಸಿ ನೆರವಾಗಬೇಕು ಎಂದು ಸೂಚನೆ ನೀಡಿದರು.
ಹೊಸದಾಗಿ ರಚನೆಯಾಗಿರುವ ಐದು ಪಾಲಿಕೆಗಳ ಚುನಾವಣೆ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದ್ದು, ಚುನಾವಣೆ ಸಲುವಾಗಿ ಪಕ್ಷ ಸಂಘಟನೆಗಾಗಿ ಐದು ಪಾಲಿಕೆಗಳಿಗೂ ಉಸ್ತುವಾರಿ ಸಚಿವರನ್ನುನೇಮಿಸಲಾಗಿದೆ. ಬೆಂಗಳೂರು ಪೂರ್ವ ಪಾಲಿಕೆಗೆ ಕೃಷ್ಣ ಬೈರೇಗೌಡ, ಪಶ್ಚಿಮಕ್ಕೆ ಬಿ.ಎಸ್.ಸುರೇಶ್, ಉತ್ತರಕ್ಕೆ ಕೆ.ಜೆ.ಜಾರ್ಜ್, ದಕ್ಷಿಣಕ್ಕೆ ರಾಮಲಿಂಗಾರೆಡ್ಡಿ ಹಾಗೂ ಬೆಂಗಳೂರು ಕೇಂದ್ರ ಪಾಲಿಕೆಗೆ ದಿನೇಶ್ ಗುಂಡೂರಾವ್, ಜಮೀರ್ ಅಹಮದ್ ಖಾನ್ ಅವರನ್ನು ಪಕ್ಷದಿಂದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ಇವರು ಮುಂದಿನ ಚುನಾವಣೆಯಲ್ಲಿ ಐದೂ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ನಿರ್ವಹಿಸಬೇಕು ಎಂದು ಸಲಹೆ ನೀಡಿದರು ಎಂದು ತಿಳಿದುಬಂದಿದೆ.
ಸುಮಾರು ಎರಡು ಗಂಟೆಗಳ ಕಾಲ ನಡೆದ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ, ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟು ವಾರ್ಡ್ಗಳಿವೆ ಮತ್ತು ಪ್ರತಿ ವಾರ್ಡ್ನಲ್ಲಿನ ಜನಸಂಖ್ಯೆಯನ್ನು ಪರಿಗಣಿಸಿ ಈಗ ಜಿಬಿಎಯಲ್ಲಿ ಎಷ್ಟು ವಾರ್ಡ್ಗಳು ಬರುತ್ತವೆ ಎಂಬುದನ್ನು ಶಾಸಕರಿಗೆ ತೋರಿಸಲಾಯಿತು.
ಬೆಂಗಳೂರಿನಲ್ಲಿ ಮೂಲ ಸೌಕರ್ಯದ ಕೊರತೆ, ರಸ್ತೆ ಗುಂಡಿ, ಟ್ರಾಫಿಕ್ ದಟ್ಟಣೆ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಹಲವು ಶಾಸಕರು ಪ್ರಸ್ತಾಪಿಸಿದರು. ಬೆಂಗಳೂರು ನಗರದಲ್ಲಿ ಸಮಸ್ಯೆಗಳು ಹೆಚ್ಚಿದ್ದು ವಿಶೇಷ ಅನುದಾನದ ಅಗತ್ಯ ಪ್ರತಿಪಾದಿಸಿದರು ಎಂದು ತಿಳಿದುಬಂದಿದೆ.
ರಸ್ತೆ ಗುಂಡಿಗಳ ಬಗ್ಗೆ ಶಾಸಕರ ದೂರುಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಗುಂಡಿಗಳನ್ನು ಮುಚ್ಚಲು ಮತ್ತು ನಡೆಯುತ್ತಿರುವ ಎಲ್ಲಾ ರಸ್ತೆ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ಬೆಂಗಳೂರಿನಲ್ಲಿ ಶಾಸಕರಿಗೆ ನಿಧಿ ಹಂಚಿಕೆ ಕುರಿತು ಚರ್ಚೆಗಳು ನಡೆದವು ಎಂದು ಮೂಲಗಳು ತಿಳಿಸಿವೆ.
Advertisement