
ಬೆಂಗಳೂರು: ಗಣೇಶ ವಿಸರ್ಜನೆ ವೇಳೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದ್ದ ಕೋಮುಗಲಭೆಗೆ ಸಂಬಂಧಿಸಿದಂತೆ ಮಂಡ್ಯ ಹೆಚ್ಚುವರಿ ಎಸ್ಪಿಯನ್ನು ಸರ್ಕಾರ ವರ್ಗಾವಣೆ ಮಾಡಿದೆ.
ಹೌದು.. ಕರ್ನಾಟಕ ಸರ್ಕಾರ ಮಂಡ್ಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿದೆ ಎಂದು ಪೊಲೀಸ್ ಮೂಲಗಳು ಶುಕ್ರವಾರ ತಿಳಿಸಿವೆ. ಮದ್ದೂರಿನಲ್ಲಿ ನಡೆದ ಕೋಮು ಗಲಭೆಯ ಪರಿಣಾಮವಾಗಿ ಈ ವರ್ಗಾವಣೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಕಳೆದ ಭಾನುವಾರ (ಸೆಪ್ಟೆಂಬರ್ 7) ಗಣೇಶ ವಿಸರ್ಜನೆ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿತ್ತು. ಇದು ಕೋಮು ಉದ್ವಿಗ್ನತೆಗೆ ಕಾರಣವಾಯಿತು. ಈ ವೇಳೆ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 22 ಜನರನ್ನು ಬಂಧಿಸಿದ್ದು, ಇನ್ನು ಇತರ ಏಳು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಇದೇ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಮದ್ದೂರು ಪಟ್ಟಣದಲ್ಲಿ ಬುಧವಾರ ಮತ್ತು ಗುರುವಾರ ಬೃಹತ್ ಪ್ರದರ್ಶನ ನಡೆಸಿತು. ಇದೀಗ ಈ ಬೆಳವಣಿಗೆ ಬೆನ್ನಲ್ಲೇ ಮಂಡ್ಯ ಹೆಚ್ಚುವರಿ ಎಸ್ಪಿಯನ್ನು ವರ್ಗಾವಣೆ ಮಾಡಲಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ, 'ಶುಕ್ರವಾರ ಇಲಾಖೆ ಕೆಲವು ಲೋಪಗಳನ್ನು ಕಂಡುಕೊಂಡಿದೆ ಮತ್ತು ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಂಡಿದೆ' ಎಂದು ಹೇಳಿದರು.
ಅಂತೆಯೇ ಈ ವಿಷಯವನ್ನು ಬಿಜೆಪಿ ರಾಜಕೀಯ ಗೊಳಿಸಿದೆ ಎಂದು ದೂಷಿಸಿದ ಅವರು, ವಿಷಯವನ್ನು ರಾಜಕೀಯಗೊಳಿಸಬೇಡಿ ಎಂದು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ. ಕಲ್ಲು ತೂರಾಟ ನಡೆಸಿದವರ ನಂಬಿಕೆ ಏನೇ ಇರಲಿ, ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ ಜವಾಬ್ದಾರಿಯನ್ನು ಪೊಲೀಸರಿಗೆ ಬಿಡಿ ಎಂದು ಹೇಳಿದರು.
''ಬಿಜೆಪಿ ನಾಯಕರು ಅಲ್ಲಿಗೆ ಹೋಗಿ ಜನರನ್ನು ಪ್ರಚೋದಿಸಲು ಪ್ರಚೋದನಕಾರಿ ಭಾಷಣಗಳನ್ನು ನೀಡುವ ಮೂಲಕ ಏನು ಸಾಧಿಸುತ್ತಾರೆಂದು ನನಗೆ ತಿಳಿದಿಲ್ಲ. ಅವರು ರಾಜಕೀಯಕ್ಕಾಗಿ ಇದನ್ನು ಮಾಡುತ್ತಿದ್ದಾರೆ ಎಂಬುದು ಎದ್ದು ಕಾಣುತ್ತದೆ. ಬಿಜೆಪಿ ಮದ್ದೂರನ್ನು ಕರಾವಳಿ ಕರ್ನಾಟಕದಂತೆ, ವಿಶೇಷವಾಗಿ ದಕ್ಷಿಣ ಕನ್ನಡದಂತೆ ಮಾಡಲು ಬಯಸುತ್ತದೆಯೇ ಎಂದು ಪರಮೇಶ್ವರ್ ಪ್ರಶ್ನಿಸಿದರು.
ಮಾತ್ರವಲ್ಲದೇ ರಾಜ್ಯ ಸರ್ಕಾರ ಅದನ್ನು ಮಾಡಲು ಬಿಡುವುದಿಲ್ಲ ಎಂದು ಹೇಳಿದರು.
Advertisement