
ಮಂಗಳೂರು: ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ಹಲವಾರು ಕೊಲೆ ಮತ್ತು ಅತ್ಯಾಚಾರಗಳು ನಡೆದಿದ್ದು, ನಾನೇ ಆ ಶವಗಳನ್ನು ಹೂತು ಹಾಕಿರುವುದಾಗಿ ಹೇಳಿ, ಈಗ ಜೈಲು ಪಾಲಾಗಿರುವ ಸಿ ಎನ್ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ.
ಶಿವಮೊಗ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿನ್ನಯ್ಯನನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
"ಅನಾರೋಗ್ಯ" ಮತ್ತು "ಕೌಟುಂಬಿಕ ಜವಾಬ್ದಾರಿಗಳ" ಆಧಾರದ ಮೇಲೆ ಜಾಮೀನು ಕೋರಿ ಚಿನ್ನಯ್ಯ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ನೀಡದಂತೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದರು. ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶ ವಿಜಯೇಂದ್ರ ಅವರು ಚಿನ್ನಯ್ಯನ ಜಾಮೀನು ಅರ್ಜಿ ವಜಾ ಮಾಡಿ ಇಂದು ಆದೇಶ ಹೊರಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಚಿನ್ನಯ್ಯ ತೋರಿಸಿದ್ದ ಎಲ್ಲಾ ಜಾಗಗಳಲ್ಲಿ ಅಗೆದು ನೋಡಿದರೂ ಯಾವುದೇ ಶವದ ಕುರುಹುಗಳು ಪತ್ತೆಯಾಗಿಲ್ಲ. ಹೀಗಾಗಿ ಚಿನ್ನಯ್ಯನನ್ನು ಆಗಸ್ಟ್ 23 ರಂದು ಬಂಧಿಸಿತು.
Advertisement