
ಬೆಂಗಳೂರು: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಗೆ ರಾಜ್ಯದಲ್ಲೂ ಸಿದ್ಧತೆಗಳು ನಡೆಯುತ್ತಿದ್ದು, ಭಾರತ ಚುನಾವಣಾ ಆಯೋಗ (ಇಸಿಐ) ದಿನಾಂಕಗಳನ್ನು ಘೋಷಿಸಿದ ನಂತರ ಪರಿಷ್ಕರಣೆ ಕಾರ್ಯ ಆರಂಭವಾಗಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬು ಕುಮಾರ್ ಅವರು ಹೇಳಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಆಯೋಜಿಸಲಾದ ಮಾಧ್ಯಮ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿನಿಂದ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಗೆ ಸಿದ್ಧತೆಗಳು ನಡೆಯುತ್ತಿವೆ ಎಂದು ಹೇಳಿದರು.
ಇದರ ಭಾಗವಾಗಿ, ನಗರಗಳು ಮತ್ತು ಹಳ್ಳಿಗಳಲ್ಲಿ 58,000 ಬ್ಲಾಕ್ ಮಟ್ಟದ ಅಧಿಕಾರಿಗಳಿಗೆ ಸೆಪ್ಟೆಂಬರ್ 23 ರೊಳಗೆ ತರಬೇತಿ ಪೂರ್ಣಗೊಳ್ಳಲಿದೆ. ಇಸಿಐ ದಿನಾಂಕಗಳನ್ನು ಘೋಷಿಸಿದ ನಂತರ ಪರಿಷ್ಕರಣಾ ಕಾರ್ಯ ಆರಂಭಿಸಲು ಸಿದ್ಧರಿದ್ದೇವೆ ಎಂದು ತಿಳಿಸಿದರು.
ಯಾವುದೇ ಅರ್ಹ ಮತದಾರರು ಹೊರಗುಳಿಯದಂತೆ ಮತ್ತು ಅನರ್ಹ ಮತದಾರರನ್ನು ಸೇರಿಸದಂತೆ ಖಚಿತಪಡಿಸಿಕೊಳ್ಳಲು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದರು.
ಕರ್ನಾಟಕದಲ್ಲಿ 2002ರಲ್ಲಿ ವಿಶೇಷ ತೀವ್ರ ಪರಿಷ್ಕರಣೆ ನಡೆಸಲಾಗಿತ್ತು. ಮತದಾರರ ಪಟ್ಟಿಯನ್ನು ಈಗಾಗಲೇ ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ, 2002 ರಲ್ಲಿ 3.4 ಕೋಟಿ ಮತದಾರರಿದ್ದರು, ಈ ಸಂಖ್ಯೆ ಇದೀಗ 5.4 ಕೋಟಿಯಾಗಿದೆ. ಹೀಗಾಗಿ ವ್ಯತ್ಯಾಸಗಳನ್ನು ಗುರುತಿಸಲು, ಪ್ರಸ್ತುತ 2025 ರ ಡೇಟಾವನ್ನು 2002ರ ಡೇಟಾದೊಂದಿಗೆ ಹೋಲಿಕೆ ಮಾಡಲಾಗುತ್ತದೆ ಎಂದು ಹೇಳಿದರು.
ಬ್ಲಾಕ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡುತ್ತಾರೆ, ವಿಶಿಷ್ಟ QR ಕೋಡ್ಗಳೊಂದಿಗೆ ಎರಡು ಪೂರ್ವ ಭರ್ತಿ ಮಾಡಿದ ಎಣಿಕೆ ಫಾರ್ಮ್ಗಳನ್ನು ತೆಗೆದುಕೊಂಡು, ಪ್ರತಿ ಮತದಾರರನ್ನು ಪರಿಶೀಲಿಸುತ್ತಾರೆ. ಮತದಾರರು ತಮ್ಮ ಸ್ಥಳ ಅಥವಾ ಜನ್ಮ ದಿನಾಂಕವನ್ನು ಖಚಿತಪಡಿಸಲು ಆಧಾರ್ ಕಾರ್ಡ್ ಸೇರಿದಂತೆ 12 ಪಟ್ಟಿ ಮಾಡಲಾದ ದಾಖಲೆಗಳಲ್ಲಿ ಒಂದನ್ನು ಒದಗಿಸಬೇಕು.
ಪರಿಶೀಲನೆಯ ನಂತರ, ಬ್ಲಾಕ್ ಮಟ್ಟದ ಅಧಿಕಾರಿಗಳು ಸಹಿ ಮಾಡಿದ ಒಂದು ಫಾರ್ಮ್ ಅನ್ನು ಮತದಾರರಿಗೆ ಸ್ವೀಕೃತಿಯಾಗಿ ಹಸ್ತಾಂತರಿಸುತ್ತಾರೆ. ಇನ್ನೊಂದನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುತ್ತಾರೆ. ಅದನ್ನು ಸರ್ವರ್ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ. ಘೋಷಣಾ ನಮೂನೆಗೆ ಸಹಿ ಹಾಕುವುದು ಕಡ್ಡಾಯವಾಗಿದ್ದು, ತಪ್ಪು ಮಾಹಿತಿ ನೀಡುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಒಂದಕ್ಕಿಂತ ಹೆಚ್ಚು ನಮೂದುಗಳನ್ನು ಹೊಂದಿರುವ ಮತದಾರರನ್ನು ತಂತ್ರಜ್ಞಾನವನ್ನು ಬಳಸಿಕೊಂಡು ಗುರುತಿಸಲಾಗುವುದು. ಇಬ್ಬರು ಮತದಾರರ ಫೋಟೋ ಮತ್ತು ಜನಸಂಖ್ಯಾ ನಮೂದುಗಳು ಶೇ.62 ವರೆಗೆ ಹೊಂದಿಕೆಯಾದರೆ ಅವರನ್ನು ಗುರುತಿಸಲಾಗುತ್ತದೆ ಮತ್ತು ಪರಿಶೀಲಿಸಲಾಗುತ್ತದೆ. ಅಧಿಕಾರಿಗಳು ಮನೆ-ಮನೆಗೆ ತೆರಳಿ ಎಣಿಕೆ ಮಾಡಿದ ನಂತರ ಗೈರುಹಾಜರಾದವರು, ಸತ್ತವರು ಮತ್ತು ವಲಸೆ ಬಂದವರು, ನಕಲುಗಳನ್ನು ಪಟ್ಟಿ ಮಾಡುತ್ತಾರೆ.
ಚುನಾವಣಾ ನೋಂದಣಿ ಅಧಿಕಾರಿಗಳು ಮತ್ತು ಸಿಇಒ ಅವರ ಮೇಲ್ವಿಚಾರಣಾ ಪರಿಶೀಲನೆಯ ನಂತರ, ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ, ನಂತರಕ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗುತ್ತದೆ. ಇದರ ನಂತರ, ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಎಸ್ಐಆರ್ ಕಾರ್ಯಾಚರಣೆಯನ್ನು ನಿಗದಿತ ಸಮಯದ ಚೌಕಟ್ಟಿನಲ್ಲಿ ಪೂರ್ಣಗೊಳಿಸಲಾಗುವುದು ಮತ್ತು ಈ ಕಾರ್ಯಕ್ಕೆ ಮೂರು ತಿಂಗಳುಗಳು ಸಮಯ ಬೇಕಾಗುತ್ತದೆ ಎಂದು ಹೇಳಿದರು.
Advertisement