

ಬೆಂಗಳೂರು: ರಾಜ್ಯದಲ್ಲಿ ಬರಗಾಲದ ಕರಿನೆರಳು ಆವರಿಸಿದೆ. ಈ ಸಂಕಷ್ಟದ ಸಮಯದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಆಡಳಿತವನ್ನು ಗಾಳಿಗೆ ತೂರಿ ಕುರ್ಚಿ ದೆಹಲಿ ಪ್ರವಾಸದಲ್ಲಿ ಮಗ್ನರಾಗಿರುವುದು ಅತ್ಯಂತ ದುರದೃಷ್ಟಕರ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಕೆಲವೊಂದು ಎಚ್ಚರಿಕೆ ಮತ್ತು ಸಲಹೆಗಳನ್ನು ನೀಡಿದ್ದಾರೆ.
ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು: ಮಳೆಯ ಅನಿಶ್ಚಿತತೆಯ ಲಾಭ ಪಡೆದು ರೈತರನ್ನು ಲೂಟಿ ಮಾಡಲು ಕಾಳಸಂತೆಕೋರರು ಹೊಂಚು ಹಾಕುತ್ತಿದ್ದಾರೆ. ಸರ್ಕಾರ ಕೂಡಲೇ ಪ್ರತಿ ಜಿಲ್ಲೆಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಪಾರದರ್ಶಕವಾಗಿರುವಂತೆ ನೋಡಿಕೊಳ್ಳಬೇಕು. ಯಾವುದೇ ಕೃತಕ ಅಭಾವ ಸೃಷ್ಟಿಯಾಗದಂತೆ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದಿದ್ದಾರೆ.
ಮೇವು ಬ್ಯಾಂಕ್ಗಳ ಸ್ಥಾಪನೆ: ಬರದಿಂದ ಜಾನುವಾರುಗಳಿಗೆ ಮೇವಿನ ಸಂಕಷ್ಟ ಎದುರಾಗಲಿದೆ. ತಕ್ಷಣವೇ ತಾಲ್ಲೂಕು ಮಟ್ಟದಲ್ಲಿ ಮೇವು ಬ್ಯಾಂಕ್ಗಳನ್ನು ಸಕ್ರಿಯಗೊಳಿಸಿ. ರೈತರು ಅನಿವಾರ್ಯವಾಗಿ ತಮ್ಮ ಜಾನುವಾರುಗಳನ್ನು ಕಾಸಾಯಿಖಾನೆಗಳಿಗೆ ಮಾರಾಟ ಮಾಡುವಂತಹ ಸ್ಥಿತಿ ನಿರ್ಮಾಣವಾಗಬಾರದು ಎಂದು ಸಲಹೆ ನೀಡಿದ್ದಾರೆ.
ರೈತರ ಆದಾಯಕ್ಕೆ ರಕ್ಷಣೆ: ಭತ್ತ, ಜೋಳ ಹಾಗೂ ದ್ವಿದಳ ಧಾನ್ಯಗಳ ಇಳುವರಿ ಕುಂಠಿತಗೊಳ್ಳುವ ಭೀತಿಯಿದೆ. ಇದು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬನ್ನೇ ಮುರಿಯಲಿದೆ. ಸರ್ಕಾರ ಈಗಲೇ ಬೆಳೆ ವಿಮೆ ಹಾಗೂ ಬರ ಪರಿಹಾರದ ಕ್ರಿಯಾ ಯೋಜನೆಯನ್ನು ರೂಪಿಸಿ, ಅನ್ನದಾತರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.
ಕುಡಿಯುವ ನೀರಿನ ಬಿಕ್ಕಟ್ಟು ಹಾಗೂ ಅಂತರ್ಜಲ: ಅಂತರ್ಜಲ ಮಟ್ಟ ವೇಗವಾಗಿ ಕುಸಿಯುತ್ತಿದ್ದು, 12 ಜಿಲ್ಲೆಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ. ಜನಸಾಮಾನ್ಯರು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ಬರುವ ಮುನ್ನವೇ ಪರ್ಯಾಯ ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ದೆಹಲಿಯಲ್ಲಿ ಕುರ್ಚಿ ಉಳಿಸಿಕೊಳ್ಳುವ ರಾಜಕೀಯ ಮೇಲಾಟಕ್ಕಿಂತ ರಾಜ್ಯದ ಜನರ ಹಿತ ಕಾಯುವುದು ಮುಖ್ಯಮಂತ್ರಿಗಳ ಪ್ರಥಮ ಆದ್ಯತೆಯಾಗಲಿ. ಸರ್ಕಾರ ಕೂಡಲೇ 'ಬರ ನಿರ್ವಹಣಾ ಸಮಿತಿ'ಯನ್ನು ಸಕ್ರಿಯಗೊಳಿಸಿ, ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳದಿದ್ದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Advertisement