

ಬೆಂಗಳೂರು; ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯ ನೀಡಿದ ತೀರ್ಪು ಒಂದು ಕಡೆ ಬಾಧಿತ ಕುಟುಂಬಕ್ಕೆ ನ್ಯಾಯ ಒದಗಿಸಿದರೆ, ಮತ್ತೊಂದು ಕಡೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಬೆಂಬಲಿಗರಲ್ಲಿ ಅಸಮಾಧಾನ ಮೂಡಿಸಿದೆ.
ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಸೇರಿದಂತೆ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದ್ದು, ಶಿಕ್ಷೆ ಪ್ರಕಟವಾದ ಬೆನ್ನಲ್ಲೇ ಯೋಗೀಶ್ ಗೌಡ ಕುಟುಂಬಸ್ಥರು ಸಂತಸ ವ್ಯಕ್ತಪಡಿಲಿದ್ದಾರೆ.
ಈ ಪ್ರಕರಣದಲ್ಲಿ ಬಹುತೇಕ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ನ್ಯಾಯಾಲಯದ ತೀರ್ಪು, 10 ವರ್ಷಗಳ ದೀರ್ಘ ಹೋರಾಟಕ್ಕೆ ಸಿಕ್ಕಿರುವ ಜಯವೆಂದು ಸಂತ್ರಸ್ತ ಕುಟುಂಬದ ಬೆಂಬಲಿಗರು ಹೇಳಿದ್ದಾರೆ.
ಯೋಗೀಶ್ ಗೌಡ ಕುಟುಂಬದ ಬೆಂಬಲಿಗ ಬಸವರಾಜ್ ಕೊರ್ವಾರ್ ಮಾತನಾಡಿ, ಆರಂಭದಲ್ಲಿ ರಾಜ್ಯ ಪೊಲೀಸ್ ಹಾಗೂ ಸರ್ಕಾರ ಪ್ರಕರಣವನ್ನು ಮುಚ್ಚಲು ಯತ್ನಿಸಿತು. ಆದರೆ ಪ್ರಕರಣವನ್ನು ಸಿಬಿಐ (CBI)ಗೆ ಹಸ್ತಾಂತರಿಸಿದ ಬಳಿಕ ತನಿಖೆಗೆ ಹೊಸ ತಿರುವು ಸಿಕ್ಕಿತು. ಅಂತಿಮವಾಗಿ ನ್ಯಾಯ ಸಿಕ್ಕಿರುವುದು ಸಂತೋಷದ ವಿಚಾರ ಎಂದು ಹೇಳಿದ್ದಾರೆ.
ಯೋಗೀಶ್ ಗೌಡ ಅವರ ಸಹೋದರಿ ಅಕ್ಕಮ್ಮ ತೀರ್ಪನ್ನು ಸಂಭ್ರಮದಿಂದ ಸ್ವಾಗತಿಸಿ ಪಟಾಕಿ ಸಿಡಿಸಿ ಖುಷಿ ವ್ಯಕ್ತಪಡಿಸಿದರು. “ಕೊನೆಗೂ ನಮ್ಮ ಕುಟುಂಬಕ್ಕೆ ನ್ಯಾಯ ಸಿಕ್ಕಿದೆ” ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಆದರೆ, ಶಾಸಕ ವಿನಯ್ ಕುಲಕರ್ಣಿ ಬೆಂಬಲಿಗರು ತೀರ್ಪಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿನಯ್ ಕುಲಕರ್ಣಿ ಯಾವುದೇ ತಪ್ಪು ಮಾಡಿಲ್ಲ ಮತ್ತು ರಾಜಕೀಯ ಪ್ರಭಾವದಿಂದ ಈ ಪ್ರಕರಣದಲ್ಲಿ ಅವರನ್ನು ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿಯೂ ಅವರು ತಿಳಿಸಿದ್ದಾರೆ.
Advertisement