

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಪಠಾಣ್ ಹತ್ಯೆ ಪ್ರಕರಣದ ತನಿಖೆಗೆ ಹೊಸ ತಿರುವು ಸಿಕ್ಕಿದ್ದು, ಕೊಲೆಯಲ್ಲಿ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಕೈವಾಡ ಕುರಿತ ಶಂಕೆಗಳು ವ್ಯಕ್ತವಾಗಿದೆ.
ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ತಲೆಮರೆಸಿಕೊಂಡಿರುವ ಇಸ್ಮಾಯಿಲ್ ತಮಟಗಾರಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ವಿವಿಧ ರಾಜ್ಯಗಳಲ್ಲಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪಠಾಣ್ ಹತ್ಯೆಯ ನಂತರ ಹೊರಬಂದ ಆಡಿಯೋ ಮತ್ತು ವಿಡಿಯೋ ಕ್ಲಿಪ್ಗಳಲ್ಲಿ ಇಸ್ಮಾಯಿಲ್ ಅವರು ಫೈರೋಜ್ ಹಾಗೂ ಅವರ ಸ್ನೇಹಿತರಿಗೆ “ಕಷ್ಟದ ಸಮಯ ಎದುರಾಗಬಹುದು” ಎಂದು ಎಚ್ಚರಿಕೆ ನೀಡಿರುವುದು ಕೇಳಿಬಂದಿದೆ.
ಆದರೆ, ಈ ಕುರಿತು ಸ್ಪಷ್ಟನೆ ನೀಡಿದ ಇಸ್ಮಾಯಿಲ್, ಆ ಕರೆ ಹಳೆಯದು, ಈ ಘಟನೆಗೂ ನನಗೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ, ತಮ್ಮ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಲಾಗಿದೆ ಎಂಬ ಮಾಹಿತಿ ಸಿಕ್ಕ ನಂತರ ಇಸ್ಮಾಯಿಲ್ ತಲೆಮರೆಸಿದ್ದುಅವರು ವಿದೇಶಕ್ಕೆ ತೆರಳಿರುವ ಸಾಧ್ಯತೆಗಳೂ ವ್ಯಕ್ತವಾಗಿವೆ. ಈ ಹಿನ್ನೆಲೆ ಪೊಲೀಸರು ಅವರನ್ನು ವಶಕ್ಕೆ ಪಡೆಯಲು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಇಸ್ಮಾಯಿಲ್ ಹುಡುಕಾಟಕ್ಕೆ ವಿವಿಧ ಕಡೆ ದಾಳಿ ನಡೆಸಲಾಗುತ್ತಿದೆ.
ಈ ಪ್ರಕರಣದಲ್ಲಿ ಈಗಾಗಲೇ 12 ಮಂದಿಯನ್ನು ಬಂಧಿಸಲಾಗಿದ್ದು, ಕೆಲವರನ್ನು ವಿಚಾರಣೆ ಬಳಿಕ ಬಿಡುಗಡೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಬಂಧನಗಳ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣವನ್ನು ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ. ಸತ್ಯಾಂಶ ಹೊರತೆಗೆದುವುದೇ ನಮ್ಮ ಗುರಿ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
Advertisement