

ಬೀದರ್: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಪ್ರತಿಕ್ರಿಯೆ ನೀಡಿದ್ದು, ಭಯೋತ್ಪಾದಕರು ಮತ್ತು “ಭಯೋತ್ಪಾದಕರಿಗೆ ಭಯ” ಎಂಬುದರ ನಡುವಿನ ವ್ಯತ್ಯಾಸವನ್ನು ಗುರುತಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಉಲ್ಲೇಖಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯಿಂದ ಉಂಟಾದ ವಿವಾದಕ್ಕೆ ಪ್ರತಿಕ್ರಿಯಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಬೀದರ್ನ ಶ್ರೀ ಚೆನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನದ ಡಾ. ಬಸವಲಿಂಗ ಪಟ್ಟದೇವರು ಮಹಾಸ್ವಾಮೀಜಿಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದು ಮಾತನಾಡಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲೇ ಈ ಹೇಳಿಕೆ ನೀಡಿದರು.
“ನಮ್ಮ ಖರ್ಗೆಯವರ ಬಗ್ಗೆ ನನಗೆ ಸ್ವಲ್ಪ ಭಿನ್ನಾಭಿಪ್ರಾಯ ಇದೆ. ಕೆಲವೊಮ್ಮೆ ಖರ್ಗೆಯವರು ಕಪ್ಪು-ಬಿಳುಪಿನ ನಡುವಿನ ವ್ಯತ್ಯಾಸವನ್ನೂ, ಕೆಲವೊಮ್ಮೆ ಭಯೋತ್ಪಾದಕರು ಮತ್ತು ಭಯೋತ್ಪಾದಕರಿಗೆ ಭಯ ಎಂಬುದರ ನಡುವಿನ ವ್ಯತ್ಯಾಸವನ್ನೂ ಗುರುತಿಸಲು ಸಾಧ್ಯವಾಗುತ್ತಿಲ್ಲವೆಂದು ನನಗೆ ಅನಿಸುತ್ತದೆ. ಅದನ್ನು ಬಿಟ್ಟರೆ ನನಗೆ ಅವರ ಜೊತೆ ಯಾವುದೇ ಸಮಸ್ಯೆ ಇಲ್ಲ; ಅವರು ನನ್ನ ಉತ್ತಮ ಸ್ನೇಹಿತರು ಎಂದು ಕುಟುಕಿದರು.
ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯನ್ನು ಟೀಕಿಸುವ ವೇಳೆ ಮಲ್ಲಿಕಾರ್ಜುನ ಖರ್ಗೆಯವರು ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಉಲ್ಲೇಖಿಸಿದ್ದರಿಂದ ಈ ವಿವಾದ ಉಂಟಾಯಿತು. ನಂತರ ಅವರು ಸ್ಪಷ್ಟನೆ ನೀಡಿ, ಪ್ರಧಾನಿ “ಜನರನ್ನು ಮತ್ತು ರಾಜಕೀಯ ಪಕ್ಷಗಳನ್ನು ಭಯಪಡಿಸುತ್ತಿದ್ದಾರೆ” ಎಂಬ ಅರ್ಥದಲ್ಲಿ ಹೇಳಿದ್ದೇ ಹೊರತು, ಅವರನ್ನು ಭಯೋತ್ಪಾದಕ ಎಂದು ಕರೆಯಲಿಲ್ಲ ಎಂದು ಹೇಳಿದರು.
ಬಿಜೆಪಿ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ, ದೇಶದ 140 ಕೋಟಿ ಜನರಿಗೆ ಅವಮಾನವಾಗಿದೆ ಎಂದು ಹೇಳಿದೆ.
Advertisement