

ಬೆಂಗಳೂರು: ಕಬಡ್ಡಿ ಪಂದ್ಯದ ಸಮಯದಲ್ಲಿ 500 ರೂ. ಬೆಟ್ ಕಟ್ಟಿ ಸೋತಿದ್ದೇನೆ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ ಅವರ ವಿರುದ್ಧದ ಬೆಟ್ಟಿಂಗ್ ಪ್ರಕರಣಕ್ಕೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.
ಪರಮೇಶ್ವರ ಅವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಪರಮೇಶ್ವರ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ತಮಾಷೆಗಾಗಿ ಮಾತನಾಡಿದರೂ ಕೇಸ್ ಹಾಕಬಹುದೇ? ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ. ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ಪ್ರಕರಣಕ್ಕೆ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದರಿಂದ ಗೃಹ ಸಚಿವ ಪರಮೇಶ್ವರ್ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.
ತುಮಕೂರಿನಲ್ಲಿ ಆಯೋಜನೆಯಾಗಿದ್ದ ಕಬಡ್ಡಿ ಪಂದ್ಯದ ವೇಳೆ ನಾನು ಜಿಲ್ಲಾಧಿಕಾರಿ ಜತೆ 500 ಬೆಟ್ಟಿಂಗ್ ಕಟ್ಟಿ ಸೋತಿದ್ದೆ ಎಂದು ಪರಮೇಶ್ವರ ಅವರು ತಮಾಷೆಯಾಗಿ ಹೇಳಿದ್ದರು. ಆದರೆ ಇದನ್ನು ಗಂಭೀರವಾಗಿ ಪರಿಗಣಿಸಿದ ಎಚ್.ಆರ್.ನಾಗಭೂಷಣ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಕೋರ್ಟ್, ಈ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ತುಮಕೂರಿನ ಕೊಡಿಗೇಹಳ್ಳಿ ಪೊಲೀಸರಿಗೆ ಸೂಚಿಸಿತ್ತು.
Advertisement