

ಬೆಂಗಳೂರು: ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿ ಸುಧಾಕರ್, ಗಿರಿಜಮ್ಮ, ಆರ್.ಸರಿತಾರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರ ಡಿಸಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಪತ್ರ ಬರೆದಿತ್ತು.
ಏಪ್ರಿಲ್ 23ರ ಭೌತಶಾಸ್ತ್ರ ವಿಷಯದ ಪರೀಕ್ಷೆ ಬರೆಯಲು ಬಂದಿದ್ದ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ಅಡ್ಡಗಟ್ಟಿದ ಸಿಬ್ಬಂದಿ, ಜನಿವಾರ ತೆಗೆಸಿದ್ದಾರೆ ಎಂಬ ಆರೋಪವಿದೆ. ಇದಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದಾಗ, ‘ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ’ ಎಂದು ಧಮಕಿ ಹಾಕಿದ್ದರು. ಕೊನೆಗೆ ಪೋಷಕರು ಅನಿವಾರ್ಯವಾಗಿ ಜನಿವಾರವನ್ನು ತೆಗೆಸಿ ಮಗನನ್ನು ಪರೀಕ್ಷಾ ಕೊಠಡಿಗೆ ಕಳುಹಿಸಿದ್ದರು. ಈ ಬಗ್ಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
ಘಟನೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಶಿಕ್ಷಣ ಇಲಾಖೆ ಮತ್ತು ಸಿಇಟಿ ಸೆಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಧಾರ್ಮಿಕ ಹಕ್ಕಿಗೆ ಧಕ್ಕೆ ತರುವ ಇಂತಹ ಕೃತ್ಯಗಳು ನಿಲ್ಲಬೇಕು’ ಎಂದು ಪೋಷಕರು ಮತ್ತು ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ಮಾಂಗಲ್ಯ, ಜನಿವಾರ ತೆಗೆಸುವ ಹಿಂದೂ ವಿರೋಧಿ ಕೃತ್ಯಗಳು ನಡೆಯುತ್ತಿವೆ. ಕಾಂಗ್ರೆಸ್ ಸರ್ಕಾರ ಈ ವರ್ಷವೂ ತನ್ನ ಹಳೆಯ ಚಾಳಿ ಮುಂದುವರಿಸಿದೆ. ಬೆಂಗಳೂರಿನ ಕೋರಮಂಗಲದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿ ಪರೀಕ್ಷೆ ಬರೆಯುವಂತೆ ಒತ್ತಾಯಿಸುವ ಮೂಲಕ ಮತ್ತೊಮ್ಮೆ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದಿದೆ ಎಂದು ಬಿಜೆಪಿ ವಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದರು.
Advertisement