

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೋರ್ವ ಬೀದಿನಾಯಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.
ಬೆಂಗಳೂರಿನ ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೀದಿ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ(ಏ.25) ಬೆಳಿಗ್ಗೆ 8.30ರ ಸುಮಾರಿಗೆ ಎಳೆನೀರು ವ್ಯಾಪಾರಿಯೊಬ್ಬ ಮಚ್ಚಿನಿಂದ ನಾಯಿಯ ಮೇಲೆ ದಾಳಿ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೂಲಗಳ ಪ್ರಕಾರ ಹಿರಿಯ ನಾಗರಿಕರೊಬ್ಬರು ಸಾಕಿಕೊಂಡಿದ್ದ ಈ ಬೀದಿ ನಾಯಿಯಿಂದ ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವ್ಯಾಪಾರಿ, ಎಳೆನೀರು ಕೊಚ್ಚುವ ಮಚ್ಚಿನಿಂದ ನಾಯಿ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ.
ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿಕಾಸ್ ನೀಡಿದ ದೂರಿನ ಆಧಾರದ ಮೇಲೆ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ವರದಿಗಳ ಪ್ರಕಾರ ಗಾಯಗೊಂಡ ನಾಯಿಯನ್ನು ರಕ್ಷಿಸಲಾಗಿದೆ. ಆದರೆ ಅದರ ಬೆನ್ನಿನ ಮೇಲೆ ತೀವ್ರವಾದ ಇರಿತದ ಗಾಯವಾಗಿದ್ದು, ಪ್ರಸ್ತುತ ಅದು ನೋವಿನಿಂದ ಬಳಲುತ್ತಿದೆ. ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುವ ನಿರೀಕ್ಷೆಯಿದೆ.
ಬೆಂಗಳೂರಿನ ಕೆ.ಆರ್. ಪುರಂನಲ್ಲಿ ಶನಿವಾರ ಎಳನೀರು ಮಾರಾಟಗಾರನೊಬ್ಬ ಬೀದಿ ನಾಯಿಯ ಮೇಲೆ ಹಗಲು ಹೊತ್ತಿನಲ್ಲಿ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.
Advertisement