

ಮಂಡ್ಯ: ತಮಿಳುನಾಡಿನ ಸಿಎಂ ಜೋಸೆಫ್ ವಿಜಯ್ ಅವರನ್ನು ಕರೆದುಕೊಂಡು ಬಂದು ಕೆಆರ್ಎಸ್ ಡ್ಯಾಂ ತೋರಿಸಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ‘ಶಿವಕುಮಾರ್ ಅವರು ಈಗಲಾದರೂ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರನ್ನು ಕರೆದುಕೊಂಡು ಬಂದು ಕೆಆರ್ ಎಸ್ ಅನ್ನು ತೋರಿಸಲಿ ಎಂದರು. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತೊಂದರೆಯಾಗದಿರಲಿ ಎಂದು ಮನವರಿಕೆ ಮಾಡಿಕೊಡಲಿ ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಸರಿಯಾದ ಸಮಯದಲ್ಲಿ ಸುಪ್ರೀಂ ಕೋರ್ಟ್ಗೆ ನೀರಿನ ಕೊರತೆ ಬಗ್ಗೆ ಸೂಕ್ತವಾಗಿ ಮನವರಿಕೆ ಮಾಡಿಕೊಡಬೇಕಿತ್ತು. ಆಗ ಇಂದಿನ ಗಂಡಾಂತರದಿಂದ ತಪ್ಪಿಸಿಕೊಳ್ಳಬಹುದಿತ್ತು. ಆದರೆ ಈಗ ನೀರಿಗೆ ಹಾಹಾಕಾರ ಇದೆ. ಉಸಿರುಕಟ್ಟುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ, ಶ್ರೀರಂಗಪಟ್ಟಣದ ಕೆ.ಆರ್.ಎಸ್ ಡ್ಯಾಂ ಬಳಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯದ ಜನರ ಹಿತಕ್ಕಿಂತ ದೆಹಲಿಯಲ್ಲಿ ರಾಹುಲ್ ಗಾಂಧಿ ಮನೆ ಕಾದು ಸಚಿವ ಸಂಪುಟ ವಿಸ್ತರಣೆ ಮಾಡುವುದೇ ಮುಖ್ಯವಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ಅವರು ಆರೋಪಿಸಿದ್ದಾರೆ.
ಶಿವಕುಮಾರ್ ಅವರು ಪ್ರಾಮಾಣಿಕರಾಗಿದ್ದರೆ ಹನಿ ನೀರನ್ನೂ ಕೆಆರ್ಎಸ್ನಿಂದ ಬಿಡಲ್ಲ, ಅಗತ್ಯ ಬಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುತ್ತಿದ್ದರು. ಆದರೆ ಅವರು ಅದನ್ನು ಹೇಳದೆ ರಾಜಕೀಯ ದೊಂಬರಾಟ ಮಾಡುತ್ತಿದ್ದಾರೆ. ಲಜ್ಜೆಗೆಟ್ಟ ಕಾಂಗ್ರೆಸ್ ಮುಖಂಡರಿಗೆ ಎಷ್ಟು ಬಾರಿ ಧಿಕ್ಕಾರ ಹೇಳಿದರೂ ಕಡಿಮೆ ಎಂದರು.