GBA ಚುನಾವಣೆಗೆ ಡಿಕೆಶಿ ಮಾಸ್ಟರ್‌ಪ್ಲಾನ್: ಜಮೀರ್, ರಿಜ್ವಾನ್ ಸೇರಿ ಬೆಂಗಳೂರಿನ 6 ಶಾಸಕರಿಗೆ ಸಚಿವ ಸ್ಥಾನ..!

ಡಿಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಹಾಗೂ ರಿಜ್ವಾನ್ ಅರ್ಷದ್ ಸಚಿವರಾಗಿದ್ದಾರೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ನಿಗಮಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಮ್ಮ ಸಚಿವ ಸಂಪುಟದಲ್ಲಿ ಬೆಂಗಳೂರು ನಗರದಿಂದ ಆರು ಶಾಸಕರಿಗೆ ಸಚಿವ ಸ್ಥಾನ ನೀಡಿದ್ದು, ಇದು ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ರಾಜಧಾನಿಯಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳು ಇದ್ದು, ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಘಟನೆ ಬಲಪಡಿಸುವ ಉದ್ದೇಶದಿಂದಲೇ ಆರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ ಎನ್ನಲಾಗುತ್ತಿದೆ.

ಡಿಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಹಾಗೂ ರಿಜ್ವಾನ್ ಅರ್ಷದ್ ಸಚಿವರಾಗಿದ್ದಾರೆ.

ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲೂ ರಾಜಧಾನಿಯಿಂದ ಇದೇ ಸಂಖ್ಯೆಯ ಸಚಿವರಿದ್ದರು. ಆ ವೇಳೆ ದಿನೇಶ್ ಗುಂಡೂರಾವ್ ಸಚಿವರಾಗಿದ್ದರೆ, ಈ ಬಾರಿ ಅವರ ಸ್ಥಾನಕ್ಕೆ ರಿಜ್ವಾನ್ ಅರ್ಷದ್ ಅವಕಾಶ ಪಡೆದಿದ್ದಾರೆ.

File photo
ಸಚಿವ ಸಂಪುಟದಲ್ಲಿ ಬೆಂಗಳೂರು ಮೇಲುಗೈ; ಯಾದಗಿರಿ ಸೇರಿ 8 ಜಿಲ್ಲೆಗಳಿಗೆ ಸಿಗಲಿಲ್ಲ ಪ್ರಾತಿನಿಧ್ಯ..!

ಪ್ರಸ್ತುತ ಸಚಿವ ಸಂಪುಟದಲ್ಲಿ ರಾಮಲಿಂಗಾರೆಡ್ಡಿ ಮತ್ತು ಜಮೀರ್ ಅಹ್ಮದ್ ಖಾನ್ ದಕ್ಷಿಣ ಬೆಂಗಳೂರನ್ನು, ಕೃಷ್ಣ ಬೈರೇಗೌಡ ಮತ್ತು ಬೈರತಿ ಸುರೇಶ್ ಉತ್ತರ ಬೆಂಗಳೂರನ್ನು, ಕೆ.ಜೆ. ಜಾರ್ಜ್ ಮತ್ತು ರಿಜ್ವಾನ್ ಅರ್ಷದ್ ಪೂರ್ವ ಬೆಂಗಳೂರನ್ನು ಪ್ರತಿನಿಧಿಸುತ್ತಿದ್ದಾರೆ.

ಇದರ ಜೊತೆಗೆ ರಾಮನಗರ ಜಿಲ್ಲೆಗೆ 'ಬೆಂಗಳೂರು ದಕ್ಷಿಣ' ಎಂದು ಮರುನಾಮಕರಣ ಮಾಡುವ ಸರ್ಕಾರದ ನಿರ್ಧಾರದಿಂದ ಆ ಭಾಗದ ರಾಜಕೀಯ ಪ್ರಾಮುಖ್ಯತೆ ಮತ್ತಷ್ಟು ಹೆಚ್ಚಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನೂತನ ಸಚಿವ ಎಚ್.ಸಿ. ಬಾಲಕೃಷ್ಣ ಬೆಂಗಳೂರು ದಕ್ಷಿಣ ಭಾಗದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಡಿ.ಕೆ. ಶಿವಕುಮಾರ್ ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದರು.

ಆದರೆ, ಸಚಿವ ಸಂಪುಟದಲ್ಲಿ ಎಲ್ಲರಿಗೂ ಅವಕಾಶ ಸಿಕ್ಕಿಲ್ಲ. ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಸಚಿವ ಸ್ಥಾನ ನಿರೀಕ್ಷಿಸಿದ್ದರೂ ಅವಕಾಶ ದೊರೆಯದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ಪಶ್ಚಿಮ-ಮಧ್ಯ ಬೆಂಗಳೂರು ಭಾಗವನ್ನು ಪ್ರತಿನಿಧಿಸುವ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನೂ ಈ ಬಾರಿ ಸಚಿವ ಸಂಪುಟದಿಂದ ಕೈಬಿಡಲಾಗಿದೆ.

ಕಾಂಗ್ರೆಸ್ ಮೂಲಗಳ ಪ್ರಕಾರ, ಈ ಬದಲಾವಣೆಗಳು ಜಿಬಿಎ ಚುನಾವಣೆಯ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಇದ್ದರೂ, 2029ರ ಲೋಕಸಭೆ ಚುನಾವಣೆಯ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀರಬಹುದು ಎಂಬ ಮಾತುಗಳು ಕೇಳಿಬರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com