

ಯಾದಗಿರಿ: ಜಿಲ್ಲೆಯ ಕಡೇಚೂರು-ಬಾಡಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕೆಮಿಕಲ್ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಘಟನೆಯಲ್ಲಿ ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೈದರಾಬಾದ್ ಮೂಲದ ಕಂಪನಿಯ ಘಟಕದಲ್ಲಿ ಈ ಅವಘಡ ಸಂಭವಿಸಿದ್ದು, ಕೆಮಿಕಲ್ ಸ್ಕ್ರಬರ್ನಿಂದ ವಿಷಕಾರಿ ಅನಿಲ ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ. ತೀವ್ರ ದುರ್ವಾಸನೆ ಹಾಗೂ ವಿಷಕಾರಿ ಅನಿಲದ ಪರಿಣಾಮ ಕಾರ್ಮಿಕರು ಉಸಿರುಗಟ್ಟಿ ಕುಸಿದುಬಿದ್ದಿದ್ದಾರೆ.
ಮೃತ ಕಾರ್ಮಿಕರು ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶ ಮೂಲದವರಾಗಿದ್ದು, ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಬಳಿಕ ಮುಂಜಾಗ್ರತಾ ಕ್ರಮವಾಗಿ ಕಾರ್ಖಾನೆಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಘಟನೆ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅನಿಲ ಸೋರಿಕೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.