

ಕಾರವಾರ: ಉತ್ತರ ಕನ್ನಡ ಜಿಲ್ಲೆಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಕಾರವಾರ-ಅಂಕೋಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆಯನ್ನು ಜಿಲ್ಲಾ ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಿಗೆ ನೀಡಿದ್ದಾರೆ.
ನಾಲ್ಕು ಜನ ಕಾಂಗ್ರೆಸ್ ಶಾಸಕರಿದ್ದರೂ ಯಾರೊಬ್ಬರಿಗೂ ಸಚಿವ ಸ್ಥಾನ ನೀಡದೇ ಹೈಕಮಾಂಡ್ ನಿರ್ಲಕ್ಷ್ಯ ಮಾಡಿದೆ. ಕಾರವಾರದ ಶಾಸಕ ಸತೀಶ್ ಸೈಲ್ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ಆಸೆ ಹೊಂದಿದ್ದೆವು.
ಭಟ್ಕಳ ಶಾಸಕ ಮಂಕಾಳು ವೈದ್ಯ, ಹಳಿಯಾಳ ಶಾಸಕ ಆರ್.ವಿ ದೇಶಪಾಂಡೆಯಂತಹ ನಾಯಕರಿದ್ದಾರೆ. ಜಿಲ್ಲೆಯಲ್ಲಿ ಆರರ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದೂ, ನಿರ್ಲಕ್ಷ್ಯ ಮಾಡಿರುವುದಕ್ಕೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಅಸಮಾಧಾನ ಹೊರಹಾಕಿದ್ದಾರೆ.
ಆದರೆ ಈ ಬೆಳವಣಿಗೆಯನ್ನು ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಅಮೋದ್ ಸಿರ್ಸಿಕರ್ ನಿರ್ಲಕ್ಷಿಸಿದ್ದಾರೆ. ವಾಟ್ಸಾಪ್ ಮೂಲಕ ರಾಜೀನಾಮೆ ಕಳುಹಿಸಿದವರು ಸಂಘಟನೆಯಲ್ಲಿ ಸಕ್ರಿಯರಾಗಿಲ್ಲ ಮತ್ತು ರಾಜ್ಯ ನಾಯಕರು ಅವರನ್ನು ವಜಾಗೊಳಿಸಲು ಈಗಾಗಲೇ ನಿರ್ಧರಿಸಿದ್ದಾರೆ ಎಂದು ಸಿರ್ಸಿಕರ್ ಹೇಳಿದರು.
ಈ ಪದಾಧಿಕಾರಿಗಳಲ್ಲಿ ಹೆಚ್ಚಿನವರು ತಮ್ಮ ಪಾತ್ರಗಳಲ್ಲಿ ಸಕ್ರಿಯರಾಗಿಲ್ಲದ ಕಾರಣ ಅವರನ್ನು ಹುದ್ದೆಗಳಿಂದ ವಜಾಗೊಳಿಸಲಾಗಿದೆ ಎಂದು ಸಿರ್ಸಿಕರ್ ಹೇಳಿದರು. ನಾವು ಪರಿಸ್ಥಿತಿಯನ್ನು ಪರಿಶೀಲಿಸಲು ಕಾರವಾರ ತಾಲ್ಲೂಕು ಕಾರ್ಯಕಾರಿ ಸಮಿತಿ ಸಭೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.
ನೂತನ ಜೈನ್ – ಅಧ್ಯಕ್ಷರು, ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್
ದರ್ಶನ್ ನಾಯ್ಕ್ – ಉಪಾಧ್ಯಕ್ಷರು
ಅಭಿಷೇಕ್ ರಾಣೆ – ಅಧ್ಯಕ್ಷರು, ಕಾರವಾರ ಬ್ಲಾಕ್ ಯುವ ಕಾಂಗ್ರೆಸ್
ಇತರೆ ಪದಾಧಿಕಾರಿಗಳು: ನಾಗರಾಜ್ ಪಡ್ತಿ, ಅಭಿನಂದನ್ ಬಾಡಕರ್, ವಿಶಾಲ್, ಸೋಮು, ಗೌರೀಶ್, ರಾಹುಲ್, ಮಯೂರ್, ವೈಭವ, ಸೂರಜ್ ಹಾಗೂ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಎಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜೀನಾಮೆ ಸಲ್ಲಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ಆರು ವಿಧಾನಸಭಾ ಕ್ಷೇತ್ರಗಳಿದ್ದು, ಅವುಗಳಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಜಿಲ್ಲೆಯಲ್ಲಿ ಪಕ್ಷಕ್ಕೆ ಆನೆಬಲ ತಂದುಕೊಟ್ಟಿದ್ದಾರೆ. ಶಾಸಕರಾದ ಸತೀಶ್ ಸೈಲ್, ಮಂಕಾಳ ವೈದ್ಯ, ಆರ್.ವಿ. ದೇಶಪಾಂಡೆ ಹಾಗೂ ಭೀಮಣ್ಣ ನಾಯ್ಕ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ, ನೂತನ ಸಚಿವ ಸಂಪುಟ ರಚನೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸಮರ್ಪಕ ಪ್ರಾತಿನಿಧ್ಯ ದೊರೆಯದೇ, ಜಿಲ್ಲೆಯ ಯಾವುದೇ ಕಾಂಗ್ರೆಸ್ ಶಾಸಕರಿಗೂ ಸಚಿವ ಸ್ಥಾನ ನೀಡದಿರುವುದು ನಮಗೆಲ್ಲ ತೀವ್ರ ನೋವು ಹಾಗೂ ಅಸಮಾಧಾನ ಉಂಟುಮಾಡಿದೆ ಎಂದು ಹೇಳಿದ್ದಾರೆ.