Operation Mukta: ಅಕ್ರಮ ವಲಸಿಗರ ಪತ್ತೆಗೆ ಬೆಂಗಳೂರಿನಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ; Video

ಬೆಂಗಳೂರು ನಗರ ಪೊಲೀಸ್ ಆಯುಕ್ತರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ವೈಟ್‌ಫೀಲ್ಡ್ ವಿಭಾಗದಲ್ಲಿ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ..
Bengaluru police launch Operation Mukta
ಬೆಂಗಳೂರಿನಲ್ಲಿ ಅಕ್ರಮ ವಲಸಿಗರು (ಸಂಗ್ರಹ ಚಿತ್ರ)
Updated on

ಬೆಂಗಳೂರು: ನಗರದ ವಿವಿಧೆಡೆ ನೆಲೆಸಿರುವ ಶಂಕಿತ ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ಬೆಂಗಳೂರು ನಗರ ಪೊಲೀಸರು ಶನಿವಾರ ವಿಶೇಷ ಕಾರ್ಯಾಚರಣೆ ‘ಆಪರೇಷನ್ ಮುಕ್ತ’ ಆರಂಭಿಸಿದ್ದಾರೆ.

ವೈಟ್‌ಫೀಲ್ಡ್ ವಿಭಾಗದ 30ಕ್ಕೂ ಹೆಚ್ಚು ಸ್ಥಳಗಳು ಹಾಗೂ ಎಲೆಕ್ಟ್ರಾನಿಕ್ ಸಿಟಿ ಪ್ರದೇಶದ ಹಲವು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ವೈಟ್‌ಫೀಲ್ಡ್ ವಿಭಾಗದಲ್ಲಿ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ವೈಟ್‌ಫೀಲ್ಡ್ ಡಿಸಿಪಿ ಸೈದುಲ್ಲಾ ಅದವತ್ ತಿಳಿಸಿದ್ದಾರೆ.

“ಬೆಂಗಳೂರು ನಗರ ಪೊಲೀಸ್ ಆಯುಕ್ತರ ನಿರ್ದೇಶನದಂತೆ ನಗರದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ವೈಟ್‌ಫೀಲ್ಡ್ ವಿಭಾಗದಲ್ಲೇ 500ಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇದು ನಿರಂತರವಾಗಿ ನಡೆಯುವ ನಿಯಮಿತ ಕಾರ್ಯಾಚರಣೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. “ಯಾರಾದರೂ ಅನುಮಾನಾಸ್ಪದವಾಗಿ ಕಂಡುಬಂದರೆ ಅವರ ದಾಖಲೆಗಳನ್ನು ಪರಿಶೀಲಿಸಿ, ಹಿನ್ನೆಲೆಯನ್ನೂ ಪರಿಶೀಲಿಸಲಾಗುವುದು” ಎಂದು ಅದವತ್ ಹೇಳಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ವೈಟ್‌ಫೀಲ್ಡ್, ವರ್ತೂರು, ಕಾಡುಗೋಡಿ, ಬಾಳಗೆರೆ ರಸ್ತೆ, ಬೆಳ್ಳಂದೂರು, ಮಾರತ್ತಹಳ್ಳಿ, ಮಹದೇವಪುರ ಹಾಗೂ ಹೆಬ್ಬಗೋಡಿ ಸೇರಿದಂತೆ ಎಲೆಕ್ಟ್ರಾನಿಕ್ ಸಿಟಿಯ ಹಲವು ಪ್ರದೇಶಗಳಲ್ಲಿ ಶೋಧ ನಡೆಸಲಾಗಿದೆ.

ವೈಟ್‌ಫೀಲ್ಡ್‌ನ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯ ಸುಮಾರು 30 ಸ್ಥಳಗಳು ಹಾಗೂ ಎಲೆಕ್ಟ್ರಾನಿಕ್ ಸಿಟಿಯ ಮತ್ತಷ್ಟು 15ರಿಂದ 20 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ವೈಟ್‌ಫೀಲ್ಡ್ ವಿಭಾಗದಲ್ಲಿ ಸುಮಾರು 40 ಮಂದಿ ಅನುಮಾನಾಸ್ಪದ ವ್ಯಕ್ತಿಗಳನ್ನು ದಾಖಲೆ ಪರಿಶೀಲನೆಗಾಗಿ ವಶಕ್ಕೆ ಪಡೆಯಲಾಗಿದೆ.

ಅವರ ಬಳಿಯಿಂದ ದೊರೆತ ದಾಖಲೆಗಳ ಆಧಾರದ ಮೇಲೆ ನಾಲ್ವರು ಬಾಂಗ್ಲಾದೇಶದ ಪ್ರಜೆಗಳು ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಳಿದವರ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. “ಯಾರಾದರೂ ಬೇರೆ ದೇಶದವರು ಎಂಬುದನ್ನು ಸೂಚಿಸುವ ಗುರುತಿನ ಚೀಟಿ ಅಥವಾ ಇತರ ದಾಖಲೆಗಳು ಪತ್ತೆಯಾದರೆ, ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಪತ್ರ ಬರೆಯಲಾಗುವುದು. ಗಡಿಪಾರು ಆದೇಶ ದೊರೆತ ಬಳಿಕ ಕಾನೂನು ಪ್ರಕ್ರಿಯೆ ಅನುಸರಿಸಿ ಅವರನ್ನು ಅವರವರ ದೇಶಗಳಿಗೆ ಕಳುಹಿಸಲಾಗುವುದು” ಎಂದು ಡಿಸಿಪಿ ತಿಳಿಸಿದ್ದಾರೆ.

ಶೆಡ್‌ಗಳಲ್ಲಿ ವಾಸಿಸುತ್ತಿರುವವರು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ಗುರುತು ಮತ್ತು ಪೌರತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವಂತೆ ಪೊಲೀಸರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಖಲೆಗಳನ್ನು ಒದಗಿಸಲು ಸಾಧ್ಯವಾಗದವರು ಅಥವಾ ಅನುಮಾನಾಸ್ಪದವಾಗಿ ಕಂಡುಬಂದವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಠಾಣೆಗಳಿಗೆ ಕರೆದೊಯ್ಯಲಾಗಿದೆ. ಬಾಂಗ್ಲಾದೇಶ, ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ ಮತ್ತು ನೇಪಾಳದಿಂದ ಬಂದವರು ವಾಸಿಸುತ್ತಿದ್ದ ತಾತ್ಕಾಲಿಕ ವಸತಿ ಪ್ರದೇಶಗಳಲ್ಲೂ ಶೋಧ ನಡೆಸಲಾಗಿದೆ.

ಪರಿಶೀಲನೆಯ ಬಳಿಕ ಭಾರತೀಯ ಪ್ರಜೆಗಳಿಗೆ ಅಲ್ಲಿಯೇ ಉಳಿಯಲು ಅವಕಾಶ ನೀಡಲಾಗುವುದು. ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿ ಪ್ರಜೆಗಳು ಪತ್ತೆಯಾದರೆ ಹೆಚ್ಚಿನ ಕಾನೂನು ಕ್ರಮಕ್ಕಾಗಿ ಅವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಸ್ಥಳದಲ್ಲಿ ಸುಮಾರು 150 ಶೆಡ್‌ಗಳು ಪತ್ತೆಯಾಗಿದ್ದರೆ, ಮತ್ತೊಂದು ವಸತಿ ಪ್ರದೇಶದಲ್ಲಿ 100ಕ್ಕೂ ಹೆಚ್ಚು ಶೆಡ್‌ಗಳು ಕಂಡುಬಂದಿವೆ.

ಈ ಶೆಡ್‌ಗಳನ್ನು ತಲಾ ಸುಮಾರು 2,000ರಿಂದ 3,000 ರೂ.ಗೆ ಬಾಡಿಗೆಗೆ ನೀಡಲಾಗುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇಂತಹ ವಸತಿ ವ್ಯವಸ್ಥೆ ಕಲ್ಪಿಸುವಲ್ಲಿ ಜಮೀನು ಮಾಲೀಕರು ಹಾಗೂ ಇತರರ ಪಾತ್ರವನ್ನೂ ಪರಿಶೀಲಿಸಲಾಗುತ್ತಿದೆ.

Bengaluru police launch Operation Mukta
ಯಾರಿಗೂ ಬೇಡವಾದ ಅಕ್ರಮ ವಲಸಿಗರು: ತನ್ನದೇ ನಾಗರಿಕರ ನಿರಾಕರಿಸಿದ ಬಾಂಗ್ಲಾದೇಶ; ಗಡಿಯಲ್ಲಿ ಹೊಸ ಸಮಸ್ಯೆ!

ಶೆಡ್ ನಿರ್ಮಿಸಿ ಅಕ್ರಮ ವಲಸಿಗರಿಗೆ ಬಾಡಿಗೆ

ಜಮೀನು ಮಾಲೀಕರ ಬಗ್ಗೆ ಕೇಳಿದಾಗ ಅದವತ್, “ಅದರ ಬಗ್ಗೆಯೂ ಪರಿಶೀಲನೆ ನಡೆಸುತ್ತೇವೆ. ನಿಮಗೆ ತಿಳಿದಿರುವಂತೆ, ಹಲವು ಕಡೆ ಸ್ಥಳೀಯರು ಈ ಶೆಡ್‌ಗಳನ್ನು ನಿರ್ಮಿಸಿ ಬಾಡಿಗೆಗೆ ನೀಡುತ್ತಾರೆ. ಇಲ್ಲಿ ವಿವಿಧ ರಾಜ್ಯಗಳಿಂದ ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಬಂದವರು ಸೇರಿದಂತೆ ಅನೇಕರು ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ಕಟ್ಟಡ ಕಾರ್ಮಿಕರು ಈ ಶೆಡ್‌ಗಳಲ್ಲಿ ವಾಸಿಸುತ್ತಾರೆ” ಎಂದು ಹೇಳಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಈ ವಸತಿ ಪ್ರದೇಶಗಳಲ್ಲಿ ಪತ್ತೆಯಾದ ಹಲವರು ಕಟ್ಟಡ ಕಾರ್ಮಿಕರು, ಮನೆಗೆಲಸದವರು, ಚಾಲಕರು ಮತ್ತು ಡೆಲಿವರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವುದು ಕಂಡುಬಂದಿದೆ. ವಿವಿಧ ದೇಶಗಳಿಂದ ಬಂದ ಅಕ್ರಮ ವಲಸಿಗರನ್ನು ಪತ್ತೆಹಚ್ಚಿ, ಅಗತ್ಯವಿರುವ ಕಡೆ ಗಡಿಪಾರು ಪ್ರಕ್ರಿಯೆ ಆರಂಭಿಸುವ ನಿರಂತರ ಕಾರ್ಯಾಚರಣೆಯ ಭಾಗವಾಗಿ ಈ ಅಭಿಯಾನ ನಡೆಸಲಾಗಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಪ್ರಜೆಯನ್ನು ಗುರುತಿಸಿದ್ದ ವೈದ್ಯರೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಕರ್ನಾಟಕ ಹೈಕೋರ್ಟ್ ನಗರ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.

ಅಕ್ರಮ ವಲಸಿಗನೇ ನೀಡಿದ್ದ ದೂರು!

ಅಕ್ರಮ ವಲಸಿಗನೊಬ್ಬ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿದ್ದರು. ವೈದ್ಯ-ಸಾಮಾಜಿಕ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳ ಮುಂದಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದರು. ಅಕ್ರಮ ವಲಸೆಯನ್ನು ವರದಿ ಮಾಡುವವರ ವಿರುದ್ಧವೇ ಪ್ರಕರಣ ದಾಖಲಿಸುವ ಮೂಲಕ ವ್ಯವಸ್ಥೆ ಅಕ್ರಮ ವಲಸೆಗೆ ಬೆಂಬಲ ನೀಡಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com