ಉಡುಪಿ: ಅಕ್ರಮವಾಗಿ ನಡೆಸುತ್ತಿದ್ದ 109 ಹೋಂಸ್ಟೇ, 21 ರೆಸಾರ್ಟ್‌ಗಳು ಬಂದ್..!

ಜಿಲ್ಲೆಯಲ್ಲಿ ಪ್ರಸ್ತುತ 227 ಹೋಂಸ್ಟೇಗಳು ಮತ್ತು 42 ರೆಸಾರ್ಟ್‌ಗಳು ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅಗತ್ಯ ಪರವಾನಗಿ ಪಡೆದುಕೊಂಡು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
homestays
ಹೋಂಸ್ಟೇ
Updated on

ಬೆಂಗಳೂರು: ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಉಡುಪಿ ಜಿಲ್ಲೆಯ ಒಟ್ಟು 109 ಹೋಂಸ್ಟೇಗಳು ಮತ್ತು 21 ರೆಸಾರ್ಟ್‌ಗಳನ್ನು ಬಂದ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಅಧಿಕಾರಿಗಳು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ತಿಳಿಸಿದ್ದಾರೆ.

ಉಡುಪಿ ಸಹಾಯಕ ಆಯುಕ್ತರು, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು, ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌, ಉಡುಪಿ ಉಪ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಉಡುಪಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಕುರಿತು ಉಪ ಲೋಕಾಯುಕ್ತರ ಮುಂದೆ ಜಂಟಿ ಹೇಳಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ರೆಸಾರ್ಟ್‌ಗಳು, ಹೋಂಸ್ಟೇಗಳು ಹಾಗೂ ಸಂಸ್ಕರಿಸದ ತ್ಯಾಜ್ಯ ಮತ್ತು ಕೊಳಚೆ ನೀರನ್ನು ಸಮುದ್ರಕ್ಕೆ ಹರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದರ ಭಾಗವಾಗಿ ಅವರು ಇತ್ತೀಚೆಗೆ ಉಡುಪಿ ಜಿಲ್ಲೆಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಇತ್ತೀಚೆಗೆ ಉಪ ಲೋಕಾಯುಕ್ತರ ಮುಂದೆ ಹಾಜರಾಗಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಪ್ರಸ್ತುತ 227 ಹೋಂಸ್ಟೇಗಳು ಮತ್ತು 42 ರೆಸಾರ್ಟ್‌ಗಳು ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅಗತ್ಯ ಪರವಾನಗಿ ಪಡೆದುಕೊಂಡು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದೆಡೆ, ನಿಯಮಬಾಹಿರವಾಗಿ ನಡೆಯುತ್ತಿದ್ದ 109 ಹೋಂಸ್ಟೇಗಳು ಹಾಗೂ 21 ರೆಸಾರ್ಟ್‌ಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳ ಹೇಳಿಕೆಯನ್ನು ದಾಖಲಿಸಿಕೊಂಡ ಉಪ ಲೋಕಾಯುಕ್ತರು, ಹೋಂಸ್ಟೇ ಹಾಗೂ ಬೆಡ್‌ ಅಂಡ್‌ ಬ್ರೇಕ್‌ಫಾಸ್ಟ್‌ ವಸತಿ ಘಟಕಗಳ ಕಾರ್ಯಾಚರಣೆ, ಸುರಕ್ಷತೆ ಮತ್ತು ಭದ್ರತಾ ಕ್ರಮಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು 2026ರ ಏಪ್ರಿಲ್‌ 29ರಂದು ಹೊರಡಿಸಿರುವ ಮಾರ್ಗಸೂಚಿ ಹಾಗೂ ಏಪ್ರಿಲ್‌ 27ರ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.

homestays
Kodagu: ಅಮೆರಿಕ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಹೋಂಸ್ಟೇ ಪರವಾನಗಿ ರದ್ದು; ಡಿಸಿ ಆದೇಶ

ಇದೇ ವೇಳೆ ಜಿಲ್ಲಾದ್ಯಂತ ಕೊಳಚೆ ನೀರು ಸಂಸ್ಕರಣಾ ಘಟಕಗಳ (ಎಸ್‌ಟಿಪಿ) ಸ್ಥಿತಿಗತಿಗಳನ್ನು ಪರಿಶೀಲಿಸಲು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಉಪ ಲೋಕಾಯುಕ್ತರು ನಿರ್ದೇಶನ ನೀಡಿದರು.

ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಸಂದರ್ಭದಲ್ಲಿ ಉಡುಪಿಯಲ್ಲಿನ ಒಳಚರಂಡಿ ವ್ಯವಸ್ಥೆ ಹಾಗೂ ತ್ಯಾಜ್ಯ ನಿರ್ವಹಣೆ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದರು.

ಕರಾವಳಿ ನಗರವಾಗಿರುವ ಉಡುಪಿಯಲ್ಲಿ ನಗರಸಭೆಯಿಂದ ಸಮರ್ಪಕವಾಗಿ ಸಂಸ್ಕರಿಸದ ಕೊಳಚೆ ನೀರು ಹಾಗೂ ಸಂಸ್ಕರಿಸದ ತ್ಯಾಜ್ಯ ನೀರು ಸಮುದ್ರ ಸೇರುತ್ತಿರುವುದು ಜಲಚರಗಳ ಮೇಲೆ ಪರಿಣಾಮ ಬೀರುವುದಲ್ಲದೆ, ಅಂತರ್ಜಲ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಕಲುಷಿತಗೊಳಿಸುತ್ತಿದೆ ಎಂದು ಅವರು ಗಮನಿಸಿದ್ದರು.

ಉಡುಪಿ ನಗರದ ಕೊಳಚೆ ನೀರನ್ನು ಸಮರ್ಪಕವಾಗಿ ಸಂಸ್ಕರಿಸಲಾಗುತ್ತಿಲ್ಲ ಎಂಬುದಕ್ಕೆ ಉಪ ಲೋಕಾಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದರು. ನಿಟ್ಟೂರುದಲ್ಲಿರುವ ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲಾಗುತ್ತಿಲ್ಲ ಎಂಬುದನ್ನೂ ಅವರು ಉಲ್ಲೇಖಿಸಿದ್ದರು.

ನೀರಿನಲ್ಲಿನ ಜೈವಿಕ ಆಮ್ಲಜನಕ ಬೇಡಿಕೆ (ಬಿಒಡಿ) ಪ್ರಮಾಣವು ನಿಗದಿತ ಮಟ್ಟಕ್ಕಿಂತ 10 ಅಂಕಗಳಿಗೂ ಹೆಚ್ಚು ಹೆಚ್ಚಾಗಿದೆ ಎಂಬುದು ಪರಿಶೀಲನೆಯಲ್ಲಿ ಕಂಡುಬಂದಿದೆ ಎಂದು ತಿಳಿಸಲಾಗಿದೆ.

ಸಮರ್ಪಕವಾಗಿ ಸಂಸ್ಕರಿಸದ ನೀರು ಘಟಕದಿಂದ ಹೊರಬಂದು ಚರಂಡಿಗಳನ್ನು ಸೇರುತ್ತದೆ. ಈ ಚರಂಡಿಗಳು ಇಂದ್ರಾಣಿ ನದಿಗೆ ಸಂಪರ್ಕ ಹೊಂದಿದ್ದು, ಇಂದ್ರಾಣಿ ನದಿ ಕಲ್ಮಾಡಿ ಸೇತುವೆ ಹಾಗೂ ಮಲ್ಪೆ ಸಮೀಪದ ಬಾಪು ತೋಟದ ಬಳಿ ಸಾಗರವನ್ನು ಸೇರುತ್ತದೆ.

ಹೀಗಾಗಿ ಸಂಸ್ಕರಿಸದ ಕೊಳಚೆ ನೀರು ನೇರವಾಗಿ ಸಮುದ್ರ ಸೇರುವುದರಿಂದ ಪರಿಸರ ಮತ್ತು ಜಲಚರಗಳ ಮೇಲೆ ಉಂಟಾಗುತ್ತಿರುವ ಪರಿಣಾಮದ ಬಗ್ಗೆ ಉಪ ಲೋಕಾಯುಕ್ತರು ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್‌ 29ಕ್ಕೆ ಮುಂದೂಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com