

ಬೆಂಗಳೂರು: ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸರು 29 ಸ್ಥಳಗಳಲ್ಲಿ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಅಕ್ರಮ ವಲಸಿಗರೆಂದು ಶಂಕಿಸಲಾದ 1,909 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ 15 ಮಂದಿ ಬಾಂಗ್ಲಾದೇಶದ ಪ್ರಜೆಗಳು ಎಂಬುದು ಬಳಿಕ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಪ್ರದೇಶದಲ್ಲಿ ವಾಸಿಸುತ್ತಿರುವ ಅಕ್ರಮ ವಲಸಿಗರನ್ನು ಗುರುತಿಸಿ ವಶಕ್ಕೆ ಪಡೆಯುವ ಉದ್ದೇಶದಿಂದ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಒಟ್ಟು 295 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ದಾಖಲೆಗಳ ಪರಿಶೀಲನೆ ಬಳಿಕ 15 ಮಂದಿ ಅಕ್ರಮವಾಗಿ ಭಾರತ ಪ್ರವೇಶಿಸಿರುವ ಬಾಂಗ್ಲಾದೇಶದ ಪ್ರಜೆಗಳು ಎಂಬುದು ದೃಢಪಟ್ಟಿದೆ. ಅವರ ಬಳಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಮೂಲದವರು ಎಂದು ನಮೂದಿಸಿರುವ ನಕಲಿ ಆಧಾರ್ ಕಾರ್ಡ್ಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಳಿದ 1,894 ಮಂದಿ ಶಂಕಿತರ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಅವರ ವೀಸಾ, ಪಾಸ್ಪೋರ್ಟ್ ಹಾಗೂ ರಾಷ್ಟ್ರೀಯತೆಗೆ ಸಂಬಂಧಿಸಿದ ಇತರ ದಾಖಲೆಗಳನ್ನೂ ಪರಿಶೀಲಿಸಲಾಗುತ್ತಿದೆ.
ಪೊಲೀಸರ ಪ್ರಕಾರ, ದೃಢಪಟ್ಟಿರುವ 15 ಮಂದಿ ಬಾಂಗ್ಲಾದೇಶದ ಪ್ರಜೆಗಳು ಬಾಂಗ್ಲಾದೇಶದ ಖುಲ್ನಾ ಜಿಲ್ಲೆಯ ಬಾಗೇರ್ಹಾಟ್ನವರು. ಇವರು ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಗ್ಲಾದೇಶದ ಪ್ರಜೆಗಳ ಆಶ್ರಯ ತಾಣಗಳ ಮೇಲೆ ದಾಳಿ ನಡೆಸಿ, ಅವರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿರುವ ಸಂಸ್ಥೆಗಳು ಅಥವಾ ಸಂಘಟನೆಗಳ ವಿರುದ್ಧವೂ ಡಿಸಿಪಿ ನಾರಾಯಣ ಎಚ್ಚರಿಕೆ ನೀಡಿದ್ದಾರೆ. ಇಂತಹ ಕೃತ್ಯಗಳನ್ನು ಅವರು ನೈತಿಕ ಪೊಲೀಸ್ಗಿರಿ ಎಂದು ಬಣ್ಣಿಸಿದ್ದಾರೆ.
ಯಾರಾದರೂ ಬಾಂಗ್ಲಾದೇಶದ ಪ್ರಜೆ ಎಂದು ನಿಮಗೆ ಅನುಮಾನವಿದ್ದರೆ, ಪೊಲೀಸರಿಗೆ ಮಾಹಿತಿ ನೀಡಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ. ನೈತಿಕ ಪೊಲೀಸ್ಗಿರಿಯಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಹೇಳಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.