KPSC ಅಕ್ರಮ, ಗೃಹಲಕ್ಷ್ಮೀ ಹಣದ ದುರ್ಬಳಕೆ, ಬರ: ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು BJP-JDS ಸಜ್ಜು..!

ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಸಮನ್ವಯಕ್ಕಾಗಿ ತಲಾ ಐವರು ನಾಯಕರನ್ನು ಒಳಗೊಂಡ ಸಮನ್ವಯ ಸಮಿತಿಯನ್ನು ರಚಿಸಲಾಗುವುದು. ಅಧಿವೇಶನದ ಸಂದರ್ಭದಲ್ಲಿ ಉಭಯ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಟ ನಡೆಸಲಿದ್ದಾರೆ.
BJP-JDS (file pic)
ಬಿಜೆಪಿ, ಜೆಡಿಎಸ್ ಸಾಂದರ್ಭಿಕ ಚಿತ್ರonline desk
Updated on

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆ, ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮ, ಪೊಲೀಸ್‌ ನೇಮಕಾತಿ, ನೈಸ್‌ ಸಂಸ್ಥೆಯ ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್‌ (ಬಿಎಂಐಸಿ) ಯೋಜನೆ, ಗೃಹಲಕ್ಷ್ಮೀ ಯೋಜನೆಯ ಹಣದ ದುರ್ಬಳಕೆ ಆರೋಪ, ವಾಲ್ಮೀಕಿ ನಿಗಮದಲ್ಲಿನ ಹಗರಣ, ಬರ ಪರಿಸ್ಥಿತಿ, ಬೆಂಗಳೂರಿನ ಅಸಮರ್ಪಕ ತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವು ವಿಚಾರಗಳನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಜಂಟಿಯಾಗಿ ಪ್ರಸ್ತಾಪಿಸಲು ಬಿಜೆಪಿ ಮತ್ತು ಜೆಡಿಎಸ್‌ ನಿರ್ಧರಿಸಿವೆ.

ಆಗಸ್ಟ್‌ 13ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ಪ್ರಮುಖ ವಿಚಾರಗಳು ಹಾಗೂ ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಜೆಡಿಎಸ್‌ ಹಮ್ಮಿಕೊಂಡಿರುವ ಪಾದಯಾತ್ರೆ ಕುರಿತು ಚರ್ಚಿಸಲು ಬಿಜೆಪಿ-ಜೆಡಿಎಸ್‌ ನಾಯಕರು ಸಭೆ ನಡೆಸಿದರು.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಅವರು, ಅಧಿವೇಶನದಲ್ಲಿ ಪ್ರಮುಖ ಎಲ್ಲ ವಿಚಾರಗಳನ್ನೂ ಎರಡೂ ಪಕ್ಷಗಳು ಒಗ್ಗಟ್ಟಾಗಿ ಕೈಗೆತ್ತಿಕೊಳ್ಳಲಿವೆ ಎಂದು ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಸಮನ್ವಯಕ್ಕಾಗಿ ತಲಾ ಐವರು ನಾಯಕರನ್ನು ಒಳಗೊಂಡ ಸಮನ್ವಯ ಸಮಿತಿಯನ್ನು ರಚಿಸಲಾಗುವುದು. ಅಧಿವೇಶನದ ಸಂದರ್ಭದಲ್ಲಿ ಉಭಯ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಟ ನಡೆಸಲಿದ್ದಾರೆ ಎಂದು ತಿಳಿಸಿದರು.

ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಜೆಡಿಎಸ್‌ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರೂ ಭಾಗವಹಿಸಲಿದ್ದಾರೆ. ಅಧಿವೇಶನ ಆರಂಭವಾದ ಬಳಿಕ ವಿಧಾನಮಂಡಲದ ಒಳಗೂ ಹೊರಗೂ ಜಂಟಿಯಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಇದೇ ರೀತಿಯಲ್ಲಿ ಜಿಲ್ಲಾಮಟ್ಟದಲ್ಲಿಯೂ ಉಭಯ ಪಕ್ಷಗಳು ಸೇರಿ ಪ್ರತಿಭಟನೆ ನಡೆಸಲಿವೆ ಎಂದು ಹೇಳಿದರು.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ಬಿಡದಿ ಟೌನ್‌ಶಿಪ್‌ ವಿಚಾರವಾಗಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಪಾದಯಾತ್ರೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಿದೆ ಎಂದು ತಿಳಿಸಿದರು.

ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ನಡೆಯಲಿರುವ ಈ ಪಾದಯಾತ್ರೆ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ನಡೆಯಲಿದೆ. ಈ ಹೋರಾಟದಲ್ಲಿ ಬಿಜೆಪಿ ಕಾರ್ಯಕರ್ತರೂ ಕೈಜೋಡಿಸಲಿದ್ದಾರೆ ಎಂದು ಹೇಳಿದರು.

BJP-JDS (file pic)
ಬಿಡದಿ ಟೌನ್ ಶಿಪ್ ಯೋಜನೆ ಬೇಡ ಎನ್ನುವವರು ಕೋರ್ಟ್ ಗೆ ಹೋಗಲಿ; ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ- ಹೆಚ್.ಸಿ ಬಾಲಕೃಷ್ಣ!

ಇದೇ ವೇಳೆ ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ಧವೂ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದಕ್ಕೆ ಹಲವು ಉದಾಹರಣೆಗಳಿವೆ.

ಸಚಿವ ಸಂಪುಟ ವಿಸ್ತರಣೆಗೆ ತಿಂಗಳುಗಳೇ ಬೇಕಾಯಿತು. ಈಗಲೂ ಸಚಿವರಿಗೆ ಖಾತೆ ಹಂಚಿಕೆ ಪೂರ್ಣಗೊಂಡಿಲ್ಲ. ಸರ್ಕಾರ ಕಾರ್ಯನಿರ್ವಹಿಸುತ್ತಿರುವ ರೀತಿ ಅತ್ಯಂತ ನಿರಾಶಾದಾಯಕವಾಗಿದೆ. ಖಾತೆ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬವು ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ತೀವ್ರವಾದ ಬರ ಪರಿಸ್ಥಿತಿ ಎದುರಾಗಿದೆ. ಬರದಿಂದ ಜನರು ಸಂಕಷ್ಟದಲ್ಲಿದ್ದರೂ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಮತ್ತು ನೆರವು ಒದಗಿಸುವಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದರು.

ಈ ಬಾರಿಯ ಅಧಿವೇಶನದಲ್ಲಿ ಬರ ಪರಿಸ್ಥಿತಿ, ಬಿಡದಿ ಟೌನ್‌ಶಿಪ್‌, ಕೆಪಿಎಸ್‌ಸಿ ಹಾಗೂ ಪೊಲೀಸ್‌ ನೇಮಕಾತಿಯಲ್ಲಿನ ಅಕ್ರಮಗಳ ಆರೋಪ, ಬಿಎಂಐಸಿ ಯೋಜನೆ, ಗೃಹಲಕ್ಷ್ಮೀ ಯೋಜನೆಯ ಹಣದ ದುರ್ಬಳಕೆ ಆರೋಪ ಮತ್ತು ವಾಲ್ಮೀಕಿ ನಿಗಮದ ಹಗರಣ ಸೇರಿದಂತೆ ಹಲವು ವಿಚಾರಗಳು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಇದರ ಜೊತೆಗೆ ಬೆಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿಲ್ಲ ಎಂಬ ಆರೋಪವನ್ನೂ ಬಿಜೆಪಿ-ಜೆಡಿಎಸ್‌ ಪ್ರಮುಖವಾಗಿ ಪ್ರಸ್ತಾಪಿಸಲು ಮುಂದಾಗಿವೆ.

ಒಟ್ಟಾರೆ, ಆಗಸ್ಟ್‌ 13ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯದ ಆಡಳಿತ, ಅಭಿವೃದ್ಧಿ ಕಾಮಗಾರಿಗಳು ಮತ್ತು ವಿವಿಧ ಯೋಜನೆಗಳಲ್ಲಿನ ಅಕ್ರಮಗಳ ಆರೋಪಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ-ಜೆಡಿಎಸ್‌ ಸಜ್ಜಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com