ಕಾವೇರಿ ವಿವಾದ: ಕರ್ನಾಟಕದ ವಿರುದ್ಧ ತಮಿಳುನಾಡು ಅರ್ಜಿ; ಆ.13ಕ್ಕೆ ಸುಪ್ರೀಂ ಕೋರ್ಟ್‌ ವಿಚಾರಣೆ

ಜುಲೈ 30ರಂದು CWMA ನೀಡಿದ ನಿರ್ದೇಶನದಂತೆ ಕರ್ನಾಟಕವು ಕಬಿನಿ ಮತ್ತು ಕೃಷ್ಣರಾಜಸಾಗರ (KRS) ಜಲಾಶಯಗಳಿಂದ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ಕಾವೇರಿ ನೀರನ್ನು ಬಿಡುಗಡೆ ಮಾಡಬೇಕು ಎಂದು ಸೂಚಿಸಲಾಗಿತ್ತು.
File photo
ಸಂಗ್ರಹ ಚಿತ್ರ
Updated on

ನವದೆಹಲಿ: ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶ ಜಾರಿಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಆಗಸ್ಟ್‌ 13ರಂದು ನಡೆಸಲಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ಪೀಠದ ಮುಂದೆ ತಮಿಳುನಾಡು ಸರ್ಕಾರದ ಪರ ಹಿರಿಯ ವಕೀಲ ಸಿ.ಎಸ್‌. ವೈದ್ಯನಾಥನ್‌ ಅವರು ಸೋಮವಾರ ಈ ವಿಷಯವನ್ನು ಪ್ರಸ್ತಾಪಿಸಿದರು. ಅರ್ಜಿಯನ್ನು ಗುರುವಾರ ವಿಚಾರಣೆಗೆ ಪಟ್ಟಿ ಮಾಡಲು ಸಿಜೆಐ ಒಪ್ಪಿಕೊಂಡರು.

ಜುಲೈ 30ರಂದು CWMA ನೀಡಿದ ನಿರ್ದೇಶನದಂತೆ ಕರ್ನಾಟಕವು ಕಬಿನಿ ಮತ್ತು ಕೃಷ್ಣರಾಜಸಾಗರ (KRS) ಜಲಾಶಯಗಳಿಂದ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ಕಾವೇರಿ ನೀರನ್ನು ಬಿಡುಗಡೆ ಮಾಡಬೇಕು ಎಂದು ಸೂಚಿಸಲಾಗಿತ್ತು.

ಈ ಆದೇಶ ಜಾರಿಯಾಗದಿರುವುದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಆಗಸ್ಟ್‌ 3ರಂದು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

15 ದಿನಗಳ ಅವಧಿಯಲ್ಲಿ ಪ್ರತಿದಿನ 3,500 ಕ್ಯೂಸೆಕ್‌ ನೀರಿನಂತೆ ಒಟ್ಟು 4.536 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ಸರ್ಕಾರ ಕೋರಿದೆ. ನಿಗದಿತ ಪ್ರಮಾಣದ ನೀರನ್ನು ಆಗಸ್ಟ್‌ 12ರೊಳಗೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದೆ.

ತಮಿಳುನಾಡಿಗೆ ಕಾವೇರಿ ನೀರಿನಲ್ಲಿ ದೊರೆಯಬೇಕಾದ ಪಾಲು ನಿಗದಿತ ಅವಧಿಯಲ್ಲಿ ತಲುಪುವಂತೆ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶಿಸಬೇಕು ಎಂದು ಕೋರಿದೆ.

File photo
ಕಾವೇರಿ ವಿವಾದ: ಮಾತುಕತೆ ಅಂದ್ರೆ ರಾಜಿ ಎಂದರ್ಥವಲ್ಲ; ಬೆಂಗಳೂರು ಭೇಟಿ ಪ್ರಯತ್ನ ಸಮರ್ಥಿಸಿಕೊಂಡ ತಮಿಳುನಾಡು ಸಿಎಂ ವಿಜಯ್!

ಇದೇ ವೇಳೆ ತಮಿಳುನಾಡಿನ ಪ್ರತಿಪಕ್ಷ ಡಿಎಂಕೆಯೂ ಕರ್ನಾಟಕದಿಂದ ತಕ್ಷಣ ಕಾವೇರಿ ನೀರು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಡಿಎಂಕೆಯ ರೈತ ಘಟಕದ ಕಾರ್ಯದರ್ಶಿ ಎಕೆಎಸ್‌ ವಿಜಯನ್‌ ಪರವಾಗಿ ಸಲ್ಲಿಸಿರುವ ಅರ್ಜಿಯಲ್ಲಿ, 2018ರ ಫೆಬ್ರವರಿ 16ರಂದು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪು ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಂತರದ ನಿರ್ದೇಶನಗಳಂತೆ ಕರ್ನಾಟಕ ನೀರು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ಜುಲೈ 28ರಂದು CWRC ನೀಡಿದ್ದ ಹಾಗೂ ಜುಲೈ 30ರಂದು CWMA ಅನುಮೋದಿಸಿದ್ದ ನಿರ್ದೇಶನದಂತೆ, ಜುಲೈ 29ರಿಂದ 15 ದಿನಗಳ ಕಾಲ ಬಿಳಿಗುಂಡ್ಲುವಿನಲ್ಲಿ ಪ್ರತಿದಿನ 3,500 ಕ್ಯೂಸೆಕ್‌ ನೀರಿನ ಹರಿವು ಖಚಿತಪಡಿಸಬೇಕು ಎಂದು ಡಿಎಂಕೆ ಅರ್ಜಿಯಲ್ಲಿ ತಿಳಿಸಿದೆ.

ಕರ್ನಾಟಕದ ಜಲಾಶಯಗಳಿಂದ ಬಿಡುಗಡೆಯಾಗುವ ನೀರು ಮತ್ತು ಬಿಳಿಗುಂಡ್ಲುವಿನಲ್ಲಿ ದಾಖಲಾಗುವ ನೀರಿನ ಹರಿವನ್ನು CWMA ಪ್ರತಿದಿನವೂ ಮೇಲ್ವಿಚಾರಣೆ ನಡೆಸಿ, ಆದೇಶ ಪಾಲನೆಯ ಕುರಿತು ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಬೇಕು ಎಂದು ಡಿಎಂಕೆ ಕೋರಿದೆ.

ಕಾವೇರಿ ನೀರು ನಿರ್ವಹಣಾ ಯೋಜನೆ-2018ರಡಿ ರಚಿಸಲಾದ ಶಾಸನಬದ್ಧ ಸಂಸ್ಥೆಗಳು ನೀಡಿರುವ ನಿರ್ದೇಶನಗಳನ್ನು ಕರ್ನಾಟಕ ಪಾಲಿಸಿಲ್ಲ ಎಂದು ಡಿಎಂಕೆ ಆರೋಪಿಸಿದೆ.

ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನದಿ ನೀರು ಹಂಚಿಕೆ ಕುರಿತು ಹಲವು ವರ್ಷಗಳಿಂದ ಮುಂದುವರಿದಿರುವ ವಿವಾದದ ನಡುವೆಯೇ ಈ ಅರ್ಜಿಗಳು ಸುಪ್ರೀಂ ಕೋರ್ಟ್‌ ಮುಂದೆ ಬಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com