

ಬೆಂಗಳೂರು: ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಗೆ ಸಿಲಿಕಾನ್ ಸಿಟಿ ಸಜ್ಜಾಗುತ್ತಿದ್ದು, ಸಿದ್ಧತೆಗಳು ಭರದಿಂದ ಸಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ (ಬಿಸಿಸಿಸಿ) ಆಯುಕ್ತ ಜಗದೀಶ್ ಜಿ ಅವರು ಸೋಮವಾರ ಫೀಲ್ಡ್ ಮಾರ್ಷಲ್ ಮಾಣೆಕ್ಶಾ ಪರೇಡ್ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ನಿಗದಿತ ಸಮಯದೊಳಗೆ ಎಲ್ಲಾ ವ್ಯವಸ್ಥೆಗಳನ್ನು ಪೂರ್ಣಗೊಳಿಸುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾಣೆಕ್ಶಾ ಪರೇಡ್ ಮೈದಾನವನ್ನು ಪರಿಶೀಲಿಸಿದ ಆಯುಕ್ತರು, ವಿವಿಧ ಸರ್ಕಾರಿ ಇಲಾಖೆಗಳು ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯನ್ನು ಅವಲೋಕಿಸಿದರು.
ಯಾವುದೇ ವಿಳಂಬವಾಗದಂತೆ ನಿಗದಿತ ಅವಧಿಯೊಳಗೆ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಲೋಕೋಪಯೋಗಿ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಮೈದಾನದ ಸ್ವಚ್ಛತೆ, ಸಮತಟ್ಟು ಮಾಡುವ ಕಾಮಗಾರಿ ಸೇರಿದಂತೆ ಅಗತ್ಯ ಎಲ್ಲ ವ್ಯವಸ್ಥೆಗಳನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
ಸಾರ್ವಜನಿಕರು, ಗಣ್ಯರು ಹಾಗೂ ಅತಿಥಿಗಳ ಪ್ರವೇಶ ದ್ವಾರಗಳು ಮತ್ತು ವಾಹನಗಳ ನಿಲುಗಡೆ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು.
ಕಾರ್ಯಕ್ರಮದ ದಿನ ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಸೂಕ್ತ ಆಸನ ವ್ಯವಸ್ಥೆ ಕಲ್ಪಿಸಬೇಕು. ಧೂಳು ಏಳದಂತೆ ಮೈದಾನಕ್ಕೆ ನಿಯಮಿತವಾಗಿ ನೀರು ಹಾಕಿ ರೋಲಿಂಗ್ ಮಾಡಬೇಕು. ಪರೇಡ್ ಮೈದಾನದ ಒಳಗೆ ಹಾಗೂ ಹೊರಗೆ, ಸುತ್ತಮುತ್ತಲಿನ ರಸ್ತೆಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾಕಷ್ಟು ಪೆಂಡಾಲ್ಗಳ ವ್ಯವಸ್ಥೆಯನ್ನೂ ಮಾಡಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಸಾಕಷ್ಟು ಸಂಖ್ಯೆಯಲ್ಲಿ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಬೇಕು. ಗಣ್ಯರು ಮತ್ತು ಅತಿ ಗಣ್ಯರಿಗೆ ಪ್ರತ್ಯೇಕ ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಆಯುಕ್ತರು ನಿರ್ದೇಶನ ನೀಡಿದರು.
ಅಲ್ಲದೆ, ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗತ್ಯ ತುರ್ತು ಔಷಧಿಗಳು, ಆಕ್ಸಿಜನ್ ಸಿಲಿಂಡರ್ಗಳು ಹಾಗೂ ಇತರ ವೈದ್ಯಕೀಯ ಉಪಕರಣಗಳನ್ನು ಹೊಂದಿರುವ ವೈದ್ಯಕೀಯ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಬೇಕು. ಸಾಕಷ್ಟು ಸಂಖ್ಯೆಯಲ್ಲಿ ಆಂಬ್ಯುಲೆನ್ಸ್ಗಳನ್ನೂ ಸಿದ್ಧವಾಗಿಡಬೇಕು ಎಂದು ಸೂಚನೆ ನೀಡಿದರು.