

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಾವುದೇ ಅಧಿಕಾರಿಯೇ ಹೊಣೆಗಾರನೆಂದು ತನಿಖೆಯಲ್ಲಿ ತಿಳಿದುಬಂದರೆ ಅವರ ಹುದ್ದೆ ಅಥವಾ ಶ್ರೇಣಿ ಪರಿಗಣಿಸದೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಜೈಲು ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ತನಿಖೆ ಇನ್ನೂ ನಡೆಯುತ್ತಿದೆ. ಅಧಿಕಾರಿ ಯಾರೇ ಆಗಿರಲಿ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅವರು ಪಿಸಿ ಆಗಿರಲಿ, ಪಿಎಸ್ಐ ಆಗಿರಲಿ ಅಥವಾ ಎಡಿಜಿ ಆಗಿರಲಿ, ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿದರು.
ಕಾರಾಗೃಹದಲ್ಲಿ ಆಗಬಾರದ ಚಟುವಟಿಕೆಗಳು ನಡೆದಾಗ ಕ್ರಮ ಆಗಬೇಕು. ವೈರಲ್ ಆಗಿರುವ ಪ್ರಜ್ವಲ್ ವಿಡಿಯೋ ಸ್ವಲ್ಪ ಹಳೆಯದಾಗಿದ್ದು, ಯಾರು ಅದನ್ನು ಮಾಡಿದ್ದಾರೆ ಎಂಬ ಬಗ್ಗೆ ಹೇಳೋಕಾಗುತ್ತಾ, ಯಾರು ಕೊಟ್ಟರು, ಏನ್ ಕೊಟ್ಟರು ಎಂಬ ಬಗ್ಗೆ ಹೇಳಲು ಆಗಲ್ಲ. ಆದರೆ ಯಾರೇ ಸಹಕಾರ ಕೊಟ್ಟರು ಅವರ ಮೇಲೆ ಕ್ರಮ ಆಗುತ್ತದೆ. ಪೇದೆಯಿಂದ ಹಿಡಿದು IPS ವರೆಗೆ ಯಾರನ್ನೂ ನನ್ನ ಕಾಲದಲ್ಲಿ ರಕ್ಷಣೆ ಮಾಡಲ್ಲ ಎಂದು ಎಚ್ಚರಿಸಿದ್ದಾರೆ.
ಜೈಲಿನೊಳಗೆ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆಯಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜೈಲು ಭದ್ರತೆ ಕುರಿತು ಕಳವಳ ಹೆಚ್ಚಾಗಿರುವ ಸಂದರ್ಭದಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.
ತನಿಖೆ ಮುಂದುವರಿದಿದ್ದು, ವಾಸ್ತವಾಂಶಗಳು ದೃಢಪಟ್ಟ ಬಳಿಕ ಹೊಣೆಗಾರಿಕೆಯನ್ನು ನಿಗದಿಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ನಿರ್ಲಕ್ಷ್ಯ ಅಥವಾ ಅಕ್ರಮ ನಡೆದಿರುವುದು ಸಾಬೀತಾದರೆ ಅಧಿಕಾರಿಯ ಹುದ್ದೆ ಅಥವಾ ಶ್ರೇಣಿಯನ್ನು ಪರಿಗಣಿಸದೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಹೈ-ಸೆಕ್ಯುರಿಟಿ ಜೈಲಿನೊಳಗೆ ಮೊಬೈಲ್ ಫೋನ್ ಹೇಗೆ ಪ್ರವೇಶಿಸಿತು, ಜೈಲು ಸಿಬ್ಬಂದಿ ಅಗತ್ಯ ಭದ್ರತಾ ನಿಯಮಗಳನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆಯೇ ಎಂಬ ಪ್ರಶ್ನೆಗಳು ಇದೀಗ ಎದ್ದಿವೆ.
ಇದೇ ವೇಳೆ, ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ರಾಜ್ಯವ್ಯಾಪಿ ಬಂದ್ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ರಾಜ್ಯ ಆಡಳಿತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವ್ಯಾಪಕ ಭದ್ರತಾ ಸಿದ್ಧತೆಗಳನ್ನು ಕೈಗೊಂಡಿದ್ದವು.
ಬಂದ್ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಕುರಿತು ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್ ಮಾತನಾಡಿ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್ಪಿ), ಜಿಲ್ಲಾ ಮೀಸಲು ಪಡೆ (ಡಿಆರ್) ಹಾಗೂ ಸ್ಥಳೀಯ ಪೊಲೀಸರನ್ನು ಒಳಗೊಂಡಂತೆ ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು. ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳು ಹಾಗೂ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ ಎಂದರು.
15 ದಿನಗಳ ಅವಧಿಯಲ್ಲಿ ತಮಿಳುನಾಡಿಗೆ ಕರ್ನಾಟಕ 12,000 ಕ್ಯುಸೆಕ್ ನೀರು ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ದೇಶನವನ್ನು ವಿರೋಧಿಸಿ ಬಂದ್ಗೆ ಕರೆ ನೀಡಲಾಗಿತ್ತು.
ಪ್ರತಿಭಟನೆಗಳು ಶಾಂತಿಯುತವಾಗಿ ನಡೆಯುವಂತೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕನ್ನಡ ಜಾಗೃತಿ ವೇದಿಕೆಗೆ ಸೇರಿದ 18 ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.
ಈ ಬಂಧನಗಳು ಮುನ್ನೆಚ್ಚರಿಕಾ ಕ್ರಮವಾಗಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ವಶಕ್ಕೆ ಪಡೆದವರನ್ನು ಬಿಡುಗಡೆ ಮಾಡಲಾಗುವುದು ಎಂದು ಚಂದ್ರಕಾಂತ್ ಹೇಳಿದರು.
ಬಂದ್ ನಡುವೆಯೂ ಕರ್ನಾಟಕ ಮತ್ತು ತಮಿಳುನಾಡು ನಡುವಿನ ವಾಹನ ಸಂಚಾರ ಸಾಮಾನ್ಯವಾಗಿತ್ತು. ಸಾರ್ವಜನಿಕರು ಆತಂಕ ಪಡದೆ ಎಂದಿನಂತೆ ತಮ್ಮ ದೈನಂದಿನ ಚಟುವಟಿಕೆಗಳನ್ನು ಮುಂದುವರಿಸಬಹುದು ಎಂದು ಪೊಲೀಸರು ಮನವಿ ಮಾಡಿದರು.
ಕಾವೇರಿ ವಿವಾದದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಅಂತಾರಾಜ್ಯ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ತಮಿಳುನಾಡು ಗಡಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿತ್ತು.
ಪ್ರತಿಭಟನೆಗಳನ್ನು ಮೇಲ್ವಿಚಾರಣೆ ಮಾಡಲು ಹಾಗೂ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಎದುರಾದರೆ ತ್ವರಿತವಾಗಿ ಸ್ಪಂದಿಸಲು ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.