

ಬೆಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗೆ (ಪಿಎಸ್ಐ) ತಮ್ಮ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್ ಗೌಡ ಅವರು, ಮಗಳು ಆ ಕ್ಷಣದಲ್ಲಿ ತಾಳ್ಮೆ ಕಳೆದುಕೊಂಡಿರಬಹುದು. ಆದರೆ, ಸಾರ್ವಜನಿಕ ಜೀವನದಲ್ಲಿರುವವರು ಇಂತಹ ವರ್ತನೆ ತೋರಬಾರದು ಎಂದು ಹೇಳಿದ್ದಾರೆ.
ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ತಮ್ಮ ಮಗಳು ಇಬ್ಬರು ಚಿಕ್ಕ ಮಕ್ಕಳೊಂದಿಗೆ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಸೇರಿದ್ದ ಸಂದರ್ಭದಲ್ಲಿ ಪಿಎಸ್ಐ ಅವರನ್ನು ಒಳಗೆ ಬಿಡಲಿಲ್ಲ. ಆದರೆ, ವಿಐಪಿ ಸಾಲಿನಲ್ಲಿ ನಿಂತಿದ್ದ ಕೆಲವರನ್ನು ಒಳಗೆ ಕಳುಹಿಸಲಾಗುತ್ತಿತ್ತು ಎಂಬ ಕಾರಣಕ್ಕೆ ಮಾತಿನ ಚಕಮಕಿ ನಡೆದಿರಬಹುದು.
ಘಟನೆಯ ಸಂದರ್ಭದಲ್ಲಿ ನಿಖರವಾಗಿ ಏನು ನಡೆದಿದೆ ಎಂಬುದು ತಮ್ಮ ಗಮನಕ್ಕೆ ಸಂಪೂರ್ಣವಾಗಿ ಬಂದಿಲ್ಲ. ತಮ್ಮ ಮಗಳ ಕಡೆಯಿಂದಲೂ ಏನಾಯಿತು ಎಂಬುದನ್ನು ಪೊಲೀಸರು ಆಲಿಸಬೇಕಿತ್ತು. ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿರುವುದಾಗಿ ತಿಳಿಸಿದ್ದಾರೆ.
ನನ್ನ ಮಗಳದ್ದು ತಪ್ಪಿದ್ದರೆ, ನಾನು ಸಾರ್ವಜನಿಕವಾಗಿ ಕ್ಷಮೆ ಕೇಳಲು ಸಿದ್ಧನಿದ್ದೇನೆ. ಆಕೆ ಆ ಕ್ಷಣದಲ್ಲಿ ತಾಳ್ಮೆ ಕಳೆದುಕೊಂಡಿರಬಹುದು. ಆದರೆ, ನಾವು ಸಾರ್ವಜನಿಕ ಜೀವನದಲ್ಲಿರುವವರು. ಈ ರೀತಿಯ ವರ್ತನೆ ಯಾವುದೇ ಕಾರಣಕ್ಕೂ ಸರಿಯಲ್ಲ. ಹೀಗಾಗಿ ನನ್ನ ಮಗಳ ವರ್ತನೆಗಾಗಿ ನಾನೇ ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆಂದು ಹೇಳಿದರು.
ಘಟನೆಗೆ ಸಂಬಂಧಿಸಿದಂತೆ ಆ.12ರಂದು ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವಸ್ಥಾನದಲ್ಲಿ ಸಾವಿರಾರು ಭಕ್ತರು ಸೇರಿದ್ದರು. ಈ ವೇಳೆ ಶಾಸಕ ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ದೇವಸ್ಥಾನದ ಗರ್ಭಗುಡಿ ಸಮೀಪ ತೆರಳಿ ಒಳಗೆ ಪ್ರವೇಶಿಸಲು ಮುಂದಾಗಿದ್ದರು ಎನ್ನಲಾಗಿದೆ.
ಕರ್ತವ್ಯದಲ್ಲಿದ್ದ ಪಿಎಸ್ಐ ಸವಿತಾ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇರುವುದರಿಂದ ತಕ್ಷಣ ಒಳಗೆ ಪ್ರವೇಶಿಸಲು ಸಾಧ್ಯವಿಲ್ಲ. ಎಲ್ಲರನ್ನು ಒಳಗೆ ಬಿಟ್ಟರೆ ಸರತಿ ಸಾಲಿನಲ್ಲಿ ನಿಂತಿರುವ ಭಕ್ತರಿಂದ ಗೊಂದಲ ಉಂಟಾಗಬಹುದು. ಹೀಗಾಗಿ ಸ್ವಲ್ಪ ಸಮಯ ಕಾಯುವಂತೆ ಸೂಚಿಸಿದ್ದರು ಎನ್ನಲಾಗಿದೆ.
ಇದೇ ವೇಳೆ ಮಫ್ತಿಯಲ್ಲಿದ್ದ ಸರ್ಕಲ್ ಇನ್ಸ್ಪೆಕ್ಟರ್ ಲಕ್ಷ್ಮಿ ಅವರು ಗರ್ಭಗುಡಿ ಕಡೆಗೆ ತೆರಳಿದಾಗ, ಅವರನ್ನು ಐಶ್ವರ್ಯಾ ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಅದಕ್ಕೆ ಅವರು ಕರ್ತವ್ಯದಲ್ಲಿರುವ ಸರ್ಕಲ್ ಇನ್ಸ್ಪೆಕ್ಟರ್ ಎಂದು ಪಿಎಸ್ಐ ಸವಿತಾ ವಿವರಿಸಿದ್ದರು.
ಇದಾದ ಬಳಿಕ ಐಶ್ವರ್ಯಾ ಮತ್ತು ಪಿಎಸ್ಐ ಸವಿತಾ ನಡುವೆ ವಾಗ್ವಾದ ನಡೆದಿದೆ. ವಾಗ್ವಾದದ ವೇಳೆ ಐಶ್ವರ್ಯಾ ಅವರು ಪಿಎಸ್ಐಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬಳಿಕ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ಪಿಎಸ್ಐ ಸವಿತಾ ಅವರು ನೀಡಿದ ದೂರಿನ ಆಧಾರದ ಮೇಲೆ ಶ್ರೀರಂಗಪಟ್ಟಣ ತಾಲೂಕಿನ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಶ್ವರ್ಯಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.