

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಯುವ ಜೋಡಿಯೊಂದು ದಾರುಣ ಸಾವಿನಲ್ಲಿ ಅಂತ್ಯವಾಗಿದ್ದು, ಯುವಕನೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಂಗಳೂರಿನಲ್ಲಿ ನಡೆದಿದೆ.
ಮೃತರನ್ನು ಸುಮಂತ್ ಜೈನ್(32) ಹಾಗೂ ಪದ್ಮಾವತಿ(29) ಎಂದು ಗುರುತಿಸಲಾಗಿದ್ದು, ಇವರು ನಾಲ್ಕು ವರ್ಷದ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಮಂತ್ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರೆ, ಪತ್ನಿ ಪದ್ಮಾವತಿ ಅವರು ವೈಟ್ಫಿಲ್ಡ್ನಲ್ಲಿರುವ ಪ್ರತಿಷ್ಠಿತ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದರು.
ಸುಮಂತ್, ತನ್ನ ಪತ್ನಿ ಪದ್ಮಾವತಿಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಗ್ಗನಹಳ್ಳಿಯ ರಾಜೇಶ್ವರಿ ನಗರದಲ್ಲಿ ಈ ಭೀಕರ ಘಟನೆ ನಡೆದಿದ್ದು, ಸ್ಥಳಕ್ಕೆ ರಾಜಗೋಪಾಲ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಎಳನೀರು ಗ್ರಾಮದ ನಿವಾಸಿ ಸುಮಂತ್, ಹುಬ್ಬಳ್ಳಿ ಮೂಲದ ಪದ್ಮಾವತಿ ಎಂಬುವರನ್ನು ಪ್ರೀತಿಸಿ ವಿವಾಹವಾಗಿದ್ದರು. ಕಳೆದ ನಾಲ್ಕು ತಿಂಗಳ ಹಿಂದೆ ಲಗ್ಗೆರೆ ರಾಜೇಶ್ವರಿ ನಗರಕ್ಕೆ ದಂಪತಿ ಶಿಫ್ಟ್ ಆಗಿದ್ದರು. ಆದ್ರೆ, ಕೌಟುಂಬಿಕ ಕಲಹ ಹಿನ್ನೆಲೆ ರಾತ್ರಿ ದಂಪತಿ ನಡುವೆ ಜಗಳ ನಡೆದು, ಜಗಳ ವಿಕೋಪಕ್ಕೆ ತಿರುಗಿ ಸುಮಂತ್ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಾಯ್ಸ್ ಮೆಸೇಜ್ನಲ್ಲಿ ಸ್ಫೋಟಕ ಕಾರಣ ಬಹಿರಂಗ!
ಸುಮಂತ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ತಾಯಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದು, ನಾನು ಸಾಯುತ್ತಿದ್ದೇನೆ. ಈ ಮನೆ ನನ್ನದು ನನ್ನದು ಎಂದು ಹೇಳುತ್ತಿರುವ ಪತ್ನಿ ಜೊತೆ ಜಗಳವಾಗುತ್ತಿದೆ. ಈ ವಿಷಯವಾಗಿ ನಾನು ಸಾಯುತ್ತಿದ್ದೇನೆ. ನನ್ನ ಪಿಎಫ್ ಹಣ ಹಾಗೂ ಮನೆಯಲ್ಲಿ ಇರುವ ವಸ್ತುಗಳನ್ನು ನೀವೆ ತೆಗೆದುಕೊಂಡು ಹೋಗಿ ಎಂದು ಕೊನೆಯದಾಗಿ ಸುಮಂತ್ ವಾಟ್ಸಾಪ್ನಲ್ಲಿ ವಾಯ್ಸ್ ಮೆಸೇಜ್ ಕಳುಹಿಸಿ ಸಾವಿಗೆ ಶರಣಾಗಿದ್ದಾನೆ.
ಇನ್ನು ಈ ಘಟನೆ ಸಂಬಂಧ ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರ ಸಾವಿನ ಬಗ್ಗೆ ತನಿಖೆ ಕೈಗೊಂಡಿದ್ದಾರೆ.