

ಬೆಂಗಳೂರು: ನಾನು ಹಿಂದೂಸ್ತಾನಿ, ನಾನು ಕನ್ನಡಿಗ. ದೇಶದ ಮೇಲಿನ ಅಭಿಮಾನವನ್ನು ನಾನು ಬಿಜೆಪಿಯವರಿಂದ ಕಲಿಯುವ ಅಗತ್ಯವಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಪಕ್ಷಗಳ ಆರೋಪಗಳಿಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಸ್ವಕ್ಷೇತ್ರ ಚಾಮರಾಜಪೇಟೆಯ ಇತಿಹಾಸ ಪ್ರಸಿದ್ಧ ಈದ್ಗಾ ಮೈದಾನದಲ್ಲಿ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು. ಬೆಂಗಳೂರು ದಕ್ಷಿಣ ಸಹಾಯಕ ಆಯುಕ್ತ ವಿಶ್ವನಾಥ್ ಅವರು ಧ್ವಜಾರೋಹಣ ನೆರವೇರಿಸಿದ ಬಳಿಕ, ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿದರು.
ವಿಜಯನಗರ ಜಿಲ್ಲೆಯ ಸ್ವಾತಂತ್ರ್ಯೋತ್ಸವ ಧ್ವಜಾರೋಹಣದಿಂದ ವಿನಾಯ್ತಿ ಕೋರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ವಿಚಾರವಾಗಿ ಮಾತನಾಡಿದ ಅವರು, ಮಂತ್ರಿ ಆದಮೇಲೆ ಧ್ವಜಾರೋಹಣ ಮಾಡುವುದು ಪ್ರತಿಯೊಬ್ಬರಿಗೂ ದೊಡ್ಡ ಸೌಭಾಗ್ಯ.
ನಾನು ಹಾವೇರಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿದ್ದಾಗಲೂ ಧ್ವಜಾರೋಹಣ ಮಾಡಿದ್ದೇನೆ. ಆದರೆ ಈ ಬಾರಿ ವಿಪರೀತ ಕೆಲಸದ ಒತ್ತಡವಿದ್ದ ಕಾರಣಕ್ಕಾಗಿ, ಸ್ಥಳೀಯ ಶಾಸಕ ಬಸವಂತಪ್ಪ ಅವರಿಗೆ ಧ್ವಜಾರೋಹಣ ಮಾಡಲು ಅವಕಾಶ ನೀಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದೆ ಅಷ್ಟೇ ಎಂದು ವಿವರಿಸಿದರು.
ತಮ್ಮ ನಿರ್ಧಾರವನ್ನು ದೇಶದ್ರೋಹಕ್ಕೆ ಹೋಲಿಸಿದ ವಿಪಕ್ಷಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ ಜಮೀರ್, ದೇಶದಲ್ಲಿದ್ದು ದೇಶದ್ರೋಹಿಗಳು ಯಾರು ಎಂಬುದು ಈ ನಾಡಿನ ಜನತೆಗೆ ಚೆನ್ನಾಗಿ ಗೊತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ಯಾರು ಎಂಬ ಇತಿಹಾಸವೂ ಎಲ್ಲರಿಗೂ ತಿಳಿದಿದೆ.
ನಾನು 2006ರಲ್ಲಿ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರದಲ್ಲಿದ್ದಾಗಲೂ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದೇನೆ. ದೇಶಪ್ರೇಮದ ಬಗ್ಗೆ ಬಿಜೆಪಿಯವರಿಂದ ಪಾಠ ಕಲಿಯುವ ಅಗತ್ಯ ನನಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.