

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಘಟನೆ ನಡೆದಿದೆ.
ಕಾಡಿಗೆ ಅಕ್ರಮವಾಗಿ ಪ್ರವೇಶಿಸಿದ್ದ ಕೆಲವರು ಕಾಡುಪ್ರಾಣಿಯನ್ನು ಬೇಟೆಯಾಡಿ, ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಕಾವೇರಿ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ .
ಈ ವೇಳೆ ಶಸ್ತ್ರಾಸ್ತ್ರಗಳನ್ನು ಕೆಳಗಿಟ್ಟು ಶರಣಾಗುವಂತೆ ಸಿಬ್ಬಂದಿ ಸೂಚಿಸಿದ್ದಾರೆ. ಆದರೆ ಬೇಟೆಗಾರರು ಅರಣ್ಯ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ ಹಿನ್ನೆಲೆಯಲ್ಲಿ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡಿಗೆ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಮೃತರನ್ನು ಹನೂರು ತಾಲೂಕಿನ ತೋಮಿಯರ್ ಪಾಳ್ಯದ ನಿವಾಸಿಗಳಾದ ಅಂತೋನಿಸ್ವಾಮಿ, ಕುಮಾರ್ ಹಾಗೂ ಪೀಟರ್ ಎಂದು ಗುರುತಿಸಲಾಗಿದೆ. ಅರಣ್ಯ ಇಲಾಖೆಯ ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಬೇಟೆಗಾರನನ್ನು ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಮೃತದೇಹಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಬೇಟೆಗಾರರು ಬಳಸಿದ್ದ ಶಸ್ತ್ರಾಸ್ತ್ರಗಳು ಹಾಗೂ ಬೇಟೆಯಾಡಲಾದ ವನ್ಯಜೀವಿ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.