ಮಾತು ತಪ್ಪಿದ ಸರ್ಕಾರ; ರಾತ್ರೋರಾತ್ರಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಬಿಡುಗಡೆ: ಬಿಜೆಪಿ ನಾಯಕ ಆರೋಪ

ಆಗಸ್ಟ್ 12 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ 15 ದಿನಗಳವರೆಗೆ 12,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಆದೇಶಿಸಿತ್ತು.
Karnataka releases Cauvery water to Tamil Nadu from KRS dam.
ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದ ಕರ್ನಾಟಕ
Updated on

ಮಂಡ್ಯ: ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಿಂದ ಶನಿವಾರ ಮಧ್ಯರಾತ್ರಿ ಸುಮಾರಿಗೆ ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಬಿಜೆಪಿ ನಾಯಕ ಮಂಜುನಾಥ್ ಸಿಟಿ ತಿಳಿಸಿದ್ದಾರೆ.

ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕಕ್ಕೆ ನೀಡಿದ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಮಂಡ್ಯ ಘಟಕದ ವಕ್ತಾರ ಮಂಜುನಾಥ್ ತಿಳಿಸಿದ್ದಾರೆ.

ಕೃಷ್ಣರಾಜ ಸಾಗರ ಅಣೆಕಟ್ಟು ಮಂಡ್ಯ ಜಿಲ್ಲೆಯಲ್ಲಿದೆ.

'ಮಧ್ಯರಾತ್ರಿಯ ಸುಮಾರಿಗೆ ಕೆಆರ್‌ಎಸ್‌ನಿಂದ ನೀರನ್ನು ಬಿಡುಗಡೆ ಮಾಡಲಾಯಿತು. ನೀರು ಬಿಡುಗಡೆಯಾದ ನಂತರ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ' ಎಂದು ಮಂಜುನಾಥ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.

ರೈತರಿಗೆ ನೀರಿನ ಲಭ್ಯತೆ ಮತ್ತು ಕುಡಿಯುವ ನೀರಿನ ಅಗತ್ಯತೆಗಳ ಕುರಿತಾದ ಆತಂಕಗಳ ನಡುವೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದಿಲ್ಲ ಎಂಬ ರಾಜ್ಯ ಸರ್ಕಾರದ ಹಿಂದಿನ ನಿಲುವಿನ ಹೊರತಾಗಿಯೂ ನೀರನ್ನು ರಾತ್ರೋರಾತ್ರಿ ಬಿಡುಗಡೆ ಮಾಡಲಾಗಿದೆ ಎಂದು ಮಂಜುನಾಥ್ ಆರೋಪಿಸಿದರು.

ಅಲ್ಲದೆ, ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಲಾಗುತ್ತಿರುವ ಇತ್ತೀಚಿನ ವಿಡಿಯೋವನ್ನೂ ಅವರು ಹಂಚಿಕೊಂಡರು.

ಆಗಸ್ಟ್ 12 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ 15 ದಿನಗಳವರೆಗೆ 12,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಆದೇಶಿಸಿತ್ತು. ರಾಜ್ಯ ಸರ್ಕಾರವು ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವ ಮಾರ್ಗಗಳನ್ನು ಅನ್ವೇಷಿಸುವುದಾಗಿ ಹೇಳಿತ್ತು.

X
Kannada Prabha
www.kannadaprabha.com