

ಬೆಂಗಳೂರು: ಅಪಾರ್ಟ್ಮೆಂಟ್ನ 18ನೇ ಮಹಡಿಯಿಂದ ಬಿದ್ದು 72 ವರ್ಷದ ವೃದ್ಧ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಟ್ಯಾಂಕ್ ಬಂಡ್ ರಸ್ತೆಯ ಸಮೀಪ ಕೆಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಪರಮೇಶ್ವರ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಪತ್ನಿ ಹಾಗೂ ಮಕ್ಕಳೊಂದಿಗೆ ಇಟಿಎ ದಿ ಗಾರ್ಡನ್ಸ್ ಅಪಾರ್ಟ್ಮೆಂಟ್ನ 18ನೇ ಮಹಡಿಯಲ್ಲಿ ವಾಸಿಸುತ್ತಿದ್ದರು. ಭಾನುವಾರ ಮಧ್ಯಾಹ್ನ ಸುಮಾರು 1.45ರ ವೇಳೆಗೆ ಮನೆಯಿಂದ ಹೊರಬಂದ ಅವರು ಕಟ್ಟಡದಿಂದ ಕೆಳಗೆ ಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಾರ್ಟ್ಮೆಂಟ್ನ ಭದ್ರತಾ ಸಿಬ್ಬಂದಿ ಕುಟುಂಬಸ್ಥರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ ಸ್ಥಳಕ್ಕೆ ಬಂದ ಪೊಲೀಸರಿಗೆ ಪರಮೇಶ್ವರ ಅವರು ಆಕಸ್ಮಿಕವಾಗಿ ಕೆಳಗೆ ಬಿದ್ದಿರಬಹುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಅಸಹಜ ಸಾವು ವರದಿ (ಯುಡಿಆರ್) ದಾಖಲಿಸಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಮೂರನೇ ಮಹಡಿಯಿಂದ ಬಿದ್ದು 2 ವರ್ಷದ ಮಗುವಿನ ಸ್ಥಿತಿ ಗಂಭೀರ
ನಗರದ ಚಿಕ್ಕ ಅಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ವಸತಿ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಎರಡು ವರ್ಷದ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಳಗ್ಗೆ ಸುಮಾರು 10.50ಕ್ಕೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಬಾಲಕನ ಪೋಷಕರು ಘಟನೆ ನಡೆದ ವೇಳೆ ಮನೆಯಲ್ಲೇ ಇದ್ದರು. ಮೂರನೇ ಮಹಡಿಯ ಬಾಲ್ಕನಿಯಲ್ಲಿ ಆಟವಾಡುತ್ತಿದ್ದ ಬಾಲಕನನ್ನು ಕೆಲಕಾಲ ಗಮನಿಸದೇ ಇದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಬಾಲಕ ಗ್ರಿಲ್ ಮೇಲೆ ಹತ್ತಿ ಕೆಳಗೆ ಬಿದ್ದಿದ್ದಾನೆ. ಅದೇ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ವಾಹನ ಸವಾರರೊಬ್ಬರು ಘಟನೆ ಗಮನಿಸಿ, ತಕ್ಷಣ ಸ್ಥಳೀಯರ ಸಹಾಯ ಕೋರಿದ್ದಾರೆ. ಸ್ಥಳೀಯರು ಬಾಲಕನನ್ನು ದ್ವಿಚಕ್ರ ವಾಹನದಲ್ಲಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಬಾಲಕ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸಹಾಯವಾಣಿ
ನಿಮಗೆ ಆತ್ಮಹತ್ಯೆಯ ಆಲೋಚನೆಗಳು ಬರುತ್ತಿದ್ದರೆ, ಅಥವಾ ಆತ್ಮಹತ್ಯೆಯ ಆಲೋಚನೆಗಳಿಂದ ಬಳಲುತ್ತಿರುವ ಸ್ನೇಹಿತರು/ಆಪ್ತರ ಬಗ್ಗೆ ಚಿಂತಿತರಾಗಿದ್ದರೆ, ಭಾವನಾತ್ಮಕ ಬೆಂಬಲಕ್ಕಾಗಿ ಸಹಾಯ ಪಡೆಯಬಹುದು. ನಿಮ್ಮ ಮಾತುಗಳನ್ನು ಕೇಳಲು ಹಾಗೂ ನೆರವು ನೀಡಲು ಸಹಾಯವಾಣಿ ಲಭ್ಯವಿದೆ.
ಟೆಲಿ-ಮಾನಸ್: 14416 — 24x7, ಉಚಿತ ಮಾನಸಿಕ ಆರೋಗ್ಯ ಸಹಾಯವಾಣಿ.