ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆಗೆ ಕಾಂಗ್ರೆಸ್ ಎಂಎಲ್ಸಿ ಉಮಾಶ್ರೀ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ಹೊಸ ಉಪಸಭಾಪತಿಯ ಆಯ್ಕೆ ನಡೆಯಲಿದೆ.
ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಮತ್ತು ವಿಧಾನ ಪರಿಷತ್ ಸಭಾ ನಾಯಕ ಯತೀಂದ್ರ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಉಮಾಶ್ರೀ ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
2021ರ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿಯ ಕೆ ಪ್ರಾಣೇಶ್ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದ ಹಿನ್ನೆಲೆಯಲ್ಲಿ, ಅವರು ಉಪಸಭಾಪತಿ ಹುದ್ದೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಹುದ್ದೆ ತೆರವಾಗಿತ್ತು.
2013ರಲ್ಲಿ ಉಮಾಶ್ರೀ ಅವರು ತೇರದಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕಿಯಾಗಿ ಆಯ್ಕೆಯಾಗಿದ್ದರು. ಅವರು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಹಾಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆಯಾಗಿ ಸೇವೆ ಸಲ್ಲಿಸಿದರು.
ಕನ್ನಡ ಚಿತ್ರರಂಗದ ಪ್ರಮುಖ ಪೋಷಕ ನಟಿಯಾಗಿ ಗುರುತಿಸಿಕೊಂಡಿರುವ ಉಮಾಶ್ರೀ ಅವರಿಗೆ 2008ರ 'ಗುಲಾಬಿ ಟಾಕೀಸ್' ಚಿತ್ರದಲ್ಲಿನ ನಟನೆಗಾಗಿ ಅತ್ಯುತ್ತಮ ನಟಿ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.