

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಪತ್ತೆಯಾದ ಬೆನ್ನಲ್ಲೇ, ಡಿಜಿಪಿ ಸೂಚನೆ ಮೇರೆಗೆ ಅವರನ್ನು ಬೇರೆ ಬ್ಯಾರಕ್ಗೆ ಶಿಫ್ಟ್ ಮಾಡಲಾಗಿದ್ದು, 25 ಜನರಿರುವ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇದುವೇ ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ.
ಪ್ರಜ್ವಲ್ ರೇವಣ್ಣ ಅವರನ್ನು ಶಿಫ್ಟ್ ಮಾಡಿರುವ ಹೊಸ ಬ್ಯಾರಕ್ನಲ್ಲಿ ಕೆಮ್ಮು, ಕಜ್ಜಿ ಕಾಯಿಲೆ ಇರುವ ಜನರಿದ್ದು, ಇಲ್ಲಿ ಇರಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ಅವರು ಅಳಲು ತೋಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
'ನನ್ನ ಬ್ಯಾರಕ್ನಲ್ಲಿರುವ ಕೆಲವರಿಗೆ ಕಜ್ಜಿ, ಕೆಮ್ಮು ಇರುವವರು ಇರುವುದರಿಂದ ನನಗೂ ಸೋಂಕು ಹರಡುವ ಭಯವಿದೆ. ಹೀಗಾಗಿ, ನನ್ನನ್ನು ಬೇರೆ ಸೆಲ್ಗೆ ವರ್ಗಾಯಿಸಿ' ಎಂದು ಪ್ರಜ್ವಲ್ ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಒಂದೇ ಸೆಲ್ನಲ್ಲಿ 25 ಮಂದಿ ಕೈದಿಗಳಿದ್ದು, ಎಲ್ಲರೂ ಇದೀಗ ಒಂದೇ ಶೌಚಾಲಯ ಬಳಸಬೇಕಿದೆ.
ಪ್ರಜ್ವಲ್ ಅವರ ಮನವಿಗೆ ತಕ್ಷಣವೇ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದಿರುವ ಜೈಲು ಅಧಿಕಾರಿಗಳು, ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗಷ್ಟೇ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿದ ವೇಳೆ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು. ಇದು ಕಾರಾಗೃಹ ಮತ್ತು ಸುಧಾರಣಾ ಇಲಾಖೆಗೆ ಭಾರಿ ಮುಜುಗರ ಉಂಟು ಮಾಡಿತ್ತು. ಬಳಿಕ ವಿಶೇಷ ಭದ್ರತಾ ವಿಭಾಗದ ಬ್ಯಾರಕ್ನಿಂದ ಪ್ರಜ್ವಲ್ ಅವರನ್ನು ಸಾಮಾನ್ಯ ಕೈದಿಗಳ ಬ್ಯಾರಕ್ಗೆ ಸ್ಥಳಾಂತರಿಸಿದ್ದರು.
ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್ ಭೇಟಿ ನೀಡಿದ ಡಿಜಿಪಿ ಅಲೋಕ್ ಕುಮಾರ್, ಹಲವು ಬ್ಯಾರಕ್ಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪ್ರಜ್ವಲ್ ರೇವಣ್ಣ ಮೇಲೆ ಅಲೋಕ್ ಕುಮಾರ್ ಗರಂ ಆಗಿದ್ದು, ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.