

ಬೆಂಗಳೂರು: ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಕಳಂಕಿತ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ನಾವು ವಿಧಾನಸಭೆ ಕಲಾಪ ನಡೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಬೆನ್ನಲ್ಲೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ ನಾಗೇಂದ್ರ ಅವರಿಗೆ ಹೈಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ.
ಪ್ರಕರಣದಲ್ಲಿ ಈಗಾಗಲೇ ಜಾಮೀನು ಪಡೆದಿರುವ ಸಚಿವ ಬಿ. ನಾಗೇಂದ್ರ ಅವರಿಗೆ ನ್ಯಾಯಾಲಯದ ಅನುಮತಿಯಿಲ್ಲದೆ ರಾಜ್ಯ ಬಿಟ್ಟು ತೆರಳದಂತೆ ಷರತ್ತು ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ನಾಗೇಂದ್ರ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಭಾರತದೊಳಗೆ ಪ್ರಯಾಣಿಸಲು ಅನುಮತಿ ನೀಡಿದೆ.
ಈ ಹಿಂದೆ ರಾಜ್ಯ ಬಿಟ್ಟು ತೆರಳದಂತೆ ಇದ್ದ ಷರತ್ತಿಗೆ ತಡೆ ನಿಡಿದ ಹೈಕೋರ್ಟ್, ಇದೀಗ ಕೋರ್ಟ್ ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲ ಎಂಬ ಷರತ್ತನ್ನು ರದ್ದು ಮಾಡಿದೆ. ಆದರೆ ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
"ಅರ್ಜಿದಾರರು ದೇಶದೊಳಗೆ ಪ್ರಯಾಣಿಸಲು ಸ್ವತಂತ್ರರು. ಏಕೆಂದರೆ ಅವರಿಗೆ ದೇಶದೊಳಗೆ ಪ್ರಯಾಣಿಸಲು ಅನುಮತಿಸದಿದ್ದರೆ ಅವರ ಸ್ವಾತಂತ್ರ್ಯ ಮತ್ತು ಅವರು ಈಗ ಹೊಂದಿರುವ ಹುದ್ದೆಯನ್ನು ಮೊಟಕುಗೊಳಿಸದಂತಾಗುತ್ತದೆ" ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಹೇಳಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ನಾಗೇಂದ್ರ ಅವರು, ಇತ್ತೀಚಿಗೆ ವಿಸ್ತರಣೆಯಾದ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಪಡೆದಿದ್ದಾರೆ. ನಾಗೇಂದ್ರ ಇಡಿ ತನಿಖೆ ಎದುರಿಸುತ್ತಿದ್ದು, ಜಾಮೀನಿನ ಮೇಲೆ ಹೊರಗಿದ್ದಾರೆ.