ಬೆಂಗಳೂರಿನಲ್ಲಿ ಸರಗಳ್ಳರ ಅಟ್ಟಹಾಸ: ಮಾಂಗಲ್ಯ ಸರಕ್ಕಾಗಿ 30 ಮೀಟರ್ ಎಳೆದೊಯ್ದ ಖದೀಮರು, ಮಹಿಳೆ ಸಾವು..!

ರಾಧಮ್ಮ ಸರವನ್ನು ಬಿಡದೆ ಪ್ರತಿರೋಧ ವ್ಯಕ್ತಪಡಿಸಿದಾಗ, ಸರಗಳ್ಳರು ಅವರನ್ನು ಸುಮಾರು 30 ಮೀಟರ್‌ವರೆಗೆ ರಸ್ತೆಯಲ್ಲಿ ಎಳೆದೊಯ್ದಿದ್ದಾರೆ ಎನ್ನಲಾಗಿದೆ. ಇದರಿಂದ ಅವರ ಕುತ್ತಿಗೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ತೀವ್ರ ಗಾಯಗಳಾಗಿವೆ.
Radhamma
ಮೃತ ಮಹಿಳೆ.
Updated on

ಬೆಂಗಳೂರು: ಚಿನ್ನದ ಸರ ಕಸಿಯಲು ಯತ್ನಿಸಿದ ಸರಗಳ್ಳರು ಮಹಿಳೆಯೊಬ್ಬರನ್ನು ರಸ್ತೆಯಲ್ಲಿ ಎಳೆದೊಯ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ.

ಮೃತರನ್ನು ಮುಳಬಾಗಿಲು ತಾಲೂಕಿನ ತಾಯಲೂರು ಸಮೀಪದ ತಿರುಮನಹಳ್ಳಿ ಗ್ರಾಮದ ನಿವಾಸಿ ರಾಧಮ್ಮ (35) ಎಂದು ಗುರುತಿಸಲಾಗಿದೆ. ಆಗಸ್ಟ್ 15ರಂದು ಮುಳಬಾಗಿಲಿನಿಂದ ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ತಮ್ಮ ನಿವಾಸಕ್ಕೆ ಅವರು ಬಂದಿದ್ದರು.

ಶನಿವಾರ ಬೆಳಗ್ಗೆ ಕಾಡುಗೋಡಿ-ಬಿಸನಹಳ್ಳಿ ಸೇತುವೆ ಬಳಿ ಆಟೋರಿಕ್ಷಾದಿಂದ ಇಳಿಯುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕುತ್ತಿಗೆಯಲ್ಲಿದ್ದ ಸುಮಾರು 60 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಸಿಯಲು ಯತ್ನಿಸಿದ್ದಾರೆ.

ರಾಧಮ್ಮ ಸರವನ್ನು ಬಿಡದೆ ಪ್ರತಿರೋಧ ವ್ಯಕ್ತಪಡಿಸಿದಾಗ, ಸರಗಳ್ಳರು ಅವರನ್ನು ಸುಮಾರು 30 ಮೀಟರ್‌ವರೆಗೆ ರಸ್ತೆಯಲ್ಲಿ ಎಳೆದೊಯ್ದಿದ್ದಾರೆ ಎನ್ನಲಾಗಿದೆ. ಇದರಿಂದ ಅವರ ಕುತ್ತಿಗೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ತೀವ್ರ ಗಾಯಗಳಾಗಿವೆ. ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

Radhamma
ಸನ್ನಡತೆಗೆ ಮನ್ನಣೆ: ರಾಜ್ಯದಲ್ಲಿ 3.5 ವರ್ಷಗಳಲ್ಲಿ 25 ಸಾವಿರಕ್ಕೂ ಹೆಚ್ಚು ರೌಡಿಶೀಟ್‌ ಕ್ಲೋಸ್, ಸಕ್ರಿಯ ರೌಡಿಶೀಟರ್‌ಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ..!

ಗಂಭೀರವಾಗಿ ಗಾಯಗೊಂಡಿದ್ದ ರಾಧಮ್ಮ ಅವರನ್ನು ದಾರಿಹೋಕರು ಮೊದಲು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ಸಂಜೆ ಅವರು ಮೃತಪಟ್ಟಿದ್ದಾರೆ.

ಮರಣೋತ್ತರ ಪರೀಕ್ಷೆ ಬಳಿಕ ರಾಧಮ್ಮ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ತಿರುಮನಹಳ್ಳಿ ಗ್ರಾಮಕ್ಕೆ ಕೊಂಡೊಯ್ಯಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸರಗಳ್ಳರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com